ಚಿದಂಬರಂ ಬಂಧನ ಪ್ರಕರಣ : ಕಳೆದ 2 ದಿನಗಳಲ್ಲಿ ಭಾರತ ಹಿಂದೆಂದೂ ಕಾಣದ ರೀತಿಯಲ್ಲಿ ದೊಡ್ಡ ಮಟ್ಟದ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ : ರಣದೀಪ್ ಸುರ್ಜೆವಾಲಾ -Vishwanews24

Featured, ರಾಷ್ಟ್ರ ನ್ಯೂಸ್

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಡಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಪಿ ಚಿದಂಬರಂ ಅವರ ಸಿಬಿಐ ಬಂಧನ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಸೇಡಿನ ರಾಜಕಾರಣ ಮಾಡುತ್ತಿದೆ. ತನ್ನ ವೈಯುಕ್ತಿಕ ಸೇಡಿಗಾಗಿ ಕೇಂದ್ರೀಯ ತನಿಖಾ ಸಂಸ್ಥೆಗಳಾದ ಸಿಬಿಐ ಮತ್ತು ಇಡಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು  ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಈ ಕುರಿತಂತೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ ಅವರು, ಕಳೆದ 2 ದಿನಗಳಲ್ಲಿ ಭಾರತ ಹಿಂದೆಂದೂ ಕಾಣದ ರೀತಿಯಲ್ಲಿ ದೊಡ್ಡ ಮಟ್ಟದ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ಐಎನ್ಎಕ್ಸ್ ಮೀಡಿಯಾ ಪ್ರಕರಣಕ್ಕೆ ಸಂಬಂಧಿಸಿದ ಇತರೆ ಆರೋಪಿಗಳಾರು ಬಂಧನಕ್ಕೀಡಾಗಿಲ್ಲ. ಆದರೆ ಕಾಂಗ್ರೆಸ್ ನ ಹಿರಿಯ ಮುಖಂಡರಾದ ಪಿ ಚಿದಂಬರಂರನ್ನು ಏಕಪಕ್ಷೀಯವಾಗಿ ಬಂಧಿಸಲಾಗಿದೆ. ಇದಕ್ಕೆ ಯಾವುದೇ ರೀತಿಯ ಕಾನೂನು ಹಿನ್ನಲೆ ಕೂಡ ಇಲ್ಲ ಎಂದು ಕಿಡಿಕಾರಿದ್ದಾರೆ.

ಜಾಹಿರಾತು

ಅಂತೆಯೇ, ದೇಶದ ಪ್ರಮುಖ ತನಿಖಾ ಸಂಸ್ಥೆಗಳಾದ ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಜಾರಿ ನಿರ್ದೇಶನಾಲಯ (ಇಡಿ) ಬಿಜೆಪಿ ಸರ್ಕಾರದ ವೈಯುಕ್ತಿಕ ಸೇಡು ತೀರಿಸಿಕೊಳ್ಳುವ ಇಲಾಖೆಗಳಾಗಿ ಮಾರ್ಪಟ್ಟಿವೆ. ತನ್ನ ಸ್ವಂತ ಮಗಳನ್ನೇ ಕೊಲೆ ಮಾಡಿದ ಆರೋಪ ಎದುರಿಸುತ್ತಿರುವ ಓರ್ವ ಮಹಿಳೆಯ ಹೇಳಿಕೆಯ ಆಧಾರದ ಮೇರೆಗೇ ದೇಶದ ಓರ್ವ ಹಿರಿಯ ರಾಜಕಾರಣಿ, ಮಾಜಿ ಕೇಂದ್ರ ಸಚಿವರನ್ನು ಬಂಧಿಸಲಾಗಿದೆ. ಆದರೆ ಆರೋಪ ಮಾಡಿರುವ ಮಹಿಳೆಯ ಆರೋಪಗಳೆಲ್ಲವೂ ಸತ್ಯಕ್ಕೆ ದೂರವಾದದ್ದು ಎಂದು ಸುರ್ಜೆವಾಲಾ ಹೇಳಿದ್ದಾರೆ.