ಜು.31ರವರೆಗೆ ‘ಒಂದು ದೇಶ, ಒಂದು ಪಡಿತರ’ ಯೋಜನೆ ಮುಂದುವರಿಸಲು ಸುಪ್ರೀಂ ಆದೇಶ -Vishwanews24
ಜು.31ರವರೆಗೆ ‘ಒಂದು ದೇಶ, ಒಂದು ಪಡಿತರ’ ಯೋಜನೆ ಮುಂದುವರಿಸಲು ಸುಪ್ರೀಂ ಆದೇಶ -Vishwanews24
ನವದೆಹಲಿ : ಕೊರೊನಾ ಹಿನ್ನೆಲೆಯಲ್ಲಿ ದೇಶದ ಎಲ್ಲ ಬಡವರ್ಗದವರಿಗೆ ಹಾಗೂ ವಲಸೆ ಕಾರ್ಮಿಕರಿಗೆ ಉಚಿತ ಪಡಿತರ ನೀಡುವ ಕೇಂದ್ರ ಸರ್ಕಾರದ ‘ಒಂದು ರಾಷ್ಟ್ರ, ಒಂದು ಪಡಿತರ ಚೀಟಿ‘ ಯೋಜನೆಯನ್ನು ದೇಶದಾದ್ಯಂತ ಜುಲೈ 31ರವರೆಗೆ ಮುಂದುವರಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಸರ್ಕಾರಗಳಿಗೆ ನಿರ್ದೇಶನ ನೀಡಿದೆ.
ಕೊರೊನಾದ ಎರಡನೇ ಅಲೆಯ ಹಿನ್ನೆಲೆಯಲ್ಲಿ ಕರ್ಫ್ಯೂ ಮತ್ತು ಲಾಕ್ಡೌನ್ನಿಂದಾಗಿ ವಲಸೆ ಕಾರ್ಮಿಕರಿಗೆ ಆಹಾರ ಭದ್ರತೆ, ಮತ್ತಿತರ ಸೌಲಭ್ಯಗಳನ್ನು ನೀಡಲು ಕೇಂದ್ರ ಮತ್ತು ರಾಜ್ಯಗಳಿಗೆ ನಿರ್ದೇಶನ ನೀಡುವಂತೆ ಕೋರಿ ಮೂವರು ಸಾಮಾಜಿಕ ಕಾರ್ಯಕರ್ತರು ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಎಂ.ಆರ್.ಶಾ ಅವರ ನ್ಯಾಯಪೀಠ, ಈ ನಿರ್ದೇಶನಗಳನ್ನು ನೀಡಿದೆ ಎಂದು ವರದಿಯಾಗಿದೆ.
ಇನ್ನು ಜುಲೈ 31ರ ಗಡುವಿನೊಳಗೆ ಈ ಯೋಜನೆಗಳ ಪ್ರಯೋಜನ ಪಡೆಯುವ ದೃಷ್ಟಿಯಿಂದ ಅಸಂಘಟಿತ ಕಾರ್ಮಿಕರ ವಲಯದವರ ನೋಂದಣಿ ಮಾಡಿಸಿಕೊಳ್ಳುವುದಕ್ಕಾಗಿ ರಾಷ್ಟ್ರೀಯ ಮಾಹಿತಿ ಕೇಂದ್ರದ ನೆರವಿನೊಂದಿಗೆ ಒಂದು ಜಾಲತಾಣ ಅಭಿವೃದ್ಧಿಪಡಿಸುವಂತೆಯೂ ನ್ಯಾಯಪೀಠ ಕೇಂದ್ರಕ್ಕೆ ನಿರ್ದೇಶನ ನೀಡಿತು.
“ಒಂದು ದೇಶ, ಒಂದು ಪಡಿತರ ಚೀಟಿ” ಯೋಜನೆಯಡಿ, ವಲಸೆ ಕಾರ್ಮಿಕರು ಕೆಲಸಕ್ಕಾಗಿ ಹೊರ ರಾಜ್ಯಗಳಿಗೆ ಹೋಗಿರುವ ಸಂದರ್ಭದಲ್ಲಿ ಕೆಲಸ ಮಾಡುವ ಸ್ಥಳದಲ್ಲೇ ಉಚಿತ ಪಡಿತರ ಪಡೆಯಬಹುದು. ಇಲ್ಲಿ ಪಡಿತರ ಚೀಟಿ ನೋಂದಣಿ ಮಾಡಿಸದಿದ್ದರೂ ಕಾರ್ಮಿಕರಿಗೆ ಈ ಸೌಲಭ್ಯ ದೊರೆಯಲಿದೆ ಎಂದು ನ್ಯಾಯಪೀಠ ತಿಳಿಸಿದೆ.
