‘ದೀಪಿಕಾ ಪಡುಕೋಣೆ ನನ್ನಂಥವರನ್ನು ಸಲಹೆಗಾರರನ್ನಾಗಿ ನೇಮಿಸಿಕೊಳ್ಳಬೇಕು : ಬಾಬಾ ರಾಮ್ದೇವ್ -Vishwanews24
ಇಂದೋರ್: ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರು ಯಾವುದೇ ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಮುನ್ನ ದೇಶದ ಸಾಮಾಜಿಕ, ರಾಜಕೀಯ ವಿಷಯಗಳ ಬಗ್ಗೆ ತಿಳಿದುಕೊಳ್ಳಬೇಕು ಎಂದು ಯೋಗ ಗುರು ಬಾಬಾ ರಾಮ್ದೇವ್ ಹೇಳಿದ್ದಾರೆ.
ಮಧ್ಯ ಪ್ರದೇಶದ ಇಂದೋರ್ನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ದೀಪಿಕಾ ಪಡುಕೋಣೆ ನನ್ನಂಥವರನ್ನು ಸಲಹೆಗಾರರನ್ನಾಗಿ ನೇಮಿಸಿಕೊಳ್ಳಬೇಕು. ಅವರು ದೀಪಿಕಾಗೆ ಪ್ರಮುಖ ವಿಷಯಗಳ ಬಗ್ಗೆ ‘ಒಳನೋಟ’ದಿಂದ ಕೂಡಿದ ಮಾಹಿತಿ ನೀಡಬಲ್ಲರು’ ಎಂದು ಹೇಳಿದ್ದಾರೆ.
ದೀಪಿಕಾ ಪಡುಕೋಣೆ ಇತ್ತೀಚೆಗೆ ಜೆಎನ್ಯು ಹಿಂಸಾಚಾರ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದವರನ್ನು ಭೇಟಿ ಮಾಡಿ ಮೌನವಾಗಿ ಪ್ರತಿಭಟನೆ ನಡೆಸಿದ್ದು ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು.
ಈ ಕುರಿತು ಪ್ರತಿಕ್ರಿಯಿಸಿದ ರಾಮ್ದೇವ್, ‘ದೀಪಿಕಾ ಪಡುಕೋಣೆ ದಕ್ಷ ನಟಿ ಎಂಬುದು ಬೇರೆ ಮಾತು. ಆದಾಗ್ಯೂ, ನಮ್ಮ ದೇಶದ ಬಗ್ಗೆ ಹೆಚ್ಚು ತಿಳಿಯುವ ನಿಟ್ಟಿನಲ್ಲಿ ಅವರು ಸಮಾಜಿಕ, ರಾಜಕೀಯ ಮತ್ತು ಸಾಂಸ್ಕೃತಿಕ ವಿಷಯಗಳ ಬಗ್ಗೆ ಹೆಚ್ಚು ಅಧ್ಯಯನ ಮಾಡಬೇಕು. ಅದಾದ ನಂತರವಷ್ಟೇ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಬೇಕು’ ಎಂದು ಹೇಳಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆಗೆ (ಸಿಎಎ) ಬೆಂಬಲ ಸೂಚಿಸಿರುವ ರಾಮ್ದೇವ್, ಸಿಎಎಯ ವಿಸ್ತೃತ ರೂಪ ತಿಳಿಯದವರೂ ಸಹ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅಶ್ಲೀಲ ಭಾಷೆ ಬಳಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
