ನಗರದಲ್ಲಿ ನಾಲ್ಕು ಹೊಸ ಸಾರ್ವಜನಿಕ ಆಸ್ಪತ್ರೆಗಳನ್ನು ತೆರೆಯಲು ನಿರ್ಧಾರ : ಕುಮಾರಸ್ವಾಮಿ -Vishwanews24
ಬೆಂಗಳೂರು,: ನಗರದಲ್ಲಿ ನಾಲ್ಕು ಹೊಸ ಸಾರ್ವಜನಿಕ ಆಸ್ಪತ್ರೆಗಳನ್ನು ತೆರೆಯಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.
ನಿನ್ನೆ ಸಂಜಯ್ಗಾಂಧಿ ಟ್ರಾಮ ಮತ್ತು ಅಸ್ಥಿ ಚಿಕಿತ್ಸಾ ಸಂಸ್ಥೆಯ ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಿರುವ ಎಂಆರ್ಐ ಹಾಗೂ ಶಸ್ತ್ರ ಚಿಕಿತ್ಸಾ ವಿಭಾಗ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿ ಆಸ್ಪತ್ರೆಗೆ 100 ರಿಂದ 150 ಕೋಟಿ ರೂ. ವೆಚ್ಚ ಮಾಡಲಾಗುತ್ತದೆ. ನೂತನ ಆಸ್ಪತ್ರೆಗೆ ಸಚಿವ ಸಂಪುಟದ ಒಪ್ಪಿಗೆ ದೊರೆತಿದೆ ಎಂದು ಹೇಳಿದರು.ರಾಜ್ಯದ ಖಾಸಗಿ ಆಸ್ಪತ್ರೆಗಳಿಗೆ ಸರಿಸಮನಾಗಿ ಕೆಲವು ಸರ್ಕಾರಿ ಆಸ್ಪತ್ರೆಗಳು ಕಾರ್ಯನಿರ್ವಹಿಸುತ್ತವೆ.
ಜಯದೇವ ಹೃದ್ರೋಗ ಆಸ್ಪತ್ರೆ, ಸಂಜಯಗಾಂಧಿ ಆಸ್ಪತ್ರೆ ಸೇರಿದಂತೆ ಹಲವು ಆಸ್ಪತ್ರೆಗಳು ಖಾಸಗಿಗಿಂತ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.ಆರೋಗ್ಯ ಸಮಸ್ಯೆ ಉಳ್ಳವರಿಗೆ ಕಡಿಮೆ ವೆಚ್ಚದಲ್ಲಿ ಉತ್ತಮ ಚಿಕಿತ್ಸೆಯನ್ನು ಸರ್ಕಾರಿ ಆಸ್ಪತ್ರೆಗಳು ನೀಡುತ್ತಿರುವುದು ಸ್ವಾಗತಾರ್ಹ.
ಅದರಲ್ಲೂ ಜಯದೇವ, ಸಂಜಯಗಾಂಧಿ, ಇಂದಿರಾಗಾಂದಿ ಮಕ್ಕಳ ಆಸ್ಪತ್ರೆಗಳ ಮೂಲಕ ಬಡವರಿಗೆ ಉತ್ತಮ ಚಿಕಿತ್ಸೆ ನೀಡುವುದು ಸರ್ಕಾರದ ಗುರಿಯಾಗಿದೆ ಎಂದು ಸಿಎಂ ಹೇಳಿದರು.
ಆರೋಗ್ಯ ಸಚಿವ ಶಿವಾನಂದ ಎಸ್.ಪಾಟೀಲ್, ಶಾಸಕರಾದ ಉದಯ್ ಗರುಡಾಚಾರ್, ಭೀಮಾನಾಯಕ್, ಬಿಬಿಎಂಪಿ ಮೇಯರ್ ಗಂಗಾಂಬಿಕೆ, ಸಂಜಯ್ಗಾಂಧಿ ಆಸ್ಪತ್ರೆಯ ಡಾ.ಚಂದ್ರಶೇಖರ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
