ನಡೆದಾಡುವ ದೇವರು ತುಮಕೂರು ಸಿದ್ದಗಂಗ ಶ್ರೀಗಳು ಶಿವೈಕ್ಯ : ನಾಳೆ ಸರ್ಕಾರಿ ರಜೆ ಘೋಷಣೆ ,ರಾಜ್ಯದಲ್ಲಿ 3 ದಿನಗಳ ಕಾಲ ಶೋಕಾಚರಣೆ – Vishwanews24

Featured, ಜಿಲ್ಲೆ, ರಾಜ್ಯ ನ್ಯೂಸ್

ತುಮಕೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿ(111) ಸೋಮವಾರ ನಿಧನರಾಗಿದ್ದಾರೆ. ನಡೆದಾಡುವ ದೇವರೇ ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ.

ಆ ಪ್ರಯುಕ್ತ ನಾಳೆ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ ಮತ್ತು ರಾಜ್ಯದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ನಡೆಯಲಿದೆ ಹಾಗೂ ನಾಳೆಯ ದಿನ ಎಲ್ಲಾ ಚಿತ್ರಮಂದಿರಗಳಲ್ಲಿ ಚಿತ್ರ ಪ್ರದರ್ಶನ ಕೂಡ ಇರುವುದಿಲ್ಲ ಎಂದು ಪ್ರಕಟನೆ ತಿಳಿಸಿದೆ

ಈಗಾಗಲೇ ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ ದರ್ಶನ ಪಡೆಯಲು ಭಕ್ತರು ಕಾಯುತ್ತಿದ್ದಾರೆ. ಸಿದ್ದಗಂಗಾ ಮಠದ ಸುತ್ತಲೂ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಾರ್ವಜನಿಕರು ಶಾಂತಿಯಿಂದ ಇರಬೇಕು ಎಂದು ಪೊಲೀಸರು ಮನವಿ ಮಾಡಿಕೊಂಡಿದ್ದಾರೆ.

ಏಪ್ರಿಲ್ 1, 1908ರಲ್ಲಿ ಮಾಗಡಿ ತಾಲೂಕಿನ ವೀರಾಪುರದಲ್ಲಿ ಶಿವಕುಮಾರ ಸ್ವಾಮೀಜಿ ಜನಿಸಿದ್ದರು. ವೀರಾಪುರದ ಹೊನ್ನೇಗೌಡ, ಗಂಗಮ್ಮ ದಂಪತಿಗೆ ಜನಿಸಿದ ಇವರ ಬಾಲ್ಯದ ಹೆಸರು ಶಿವಣ್ಣ ಆಗಿತ್ತು. ಮರಳಿನ ಮೇಲೆ ಅಕ್ಷರ ಬರೆಯುವ ಮೂಲಕ ಶಿವಣ್ಣನ ಶೈಕ್ಷಣಿಕ ಜೀವನ ಆರಂಭಗೊಂಡಿತ್ತು. ಪ್ರಾಥಮಿಕ ಶಾಲಾ ದಿನಗಳಲ್ಲೇ ತಾಯಿ ಕಳೆದುಕೊಂಡ ಶಿವಣ್ಣ, ನಾಗವಲ್ಲಿಯಲ್ಲಿ ಮಾಧ್ಯಮಿಕ ಶಿಕ್ಷಣ 1922ರಿಂದ ತುಮಕೂರಿನ ಸರ್ಕಾರಿ ಪ್ರೌಢ ಶಿಕ್ಷಣ, 1926ರಲ್ಲಿ ಮೆಟ್ರಿಕ್ಯುಲೇಷನ್ ಪೂರ್ಣ ಬಳಿಕ ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಕಾಲೇಜು ಶಿಕ್ಷಣ ಓದಿದ್ದರು.

1930ರ ನವೆಂಬರ್ 11 ರಂದು ಸಿದ್ದಗಂಗಾ ಮಠದ ಶ್ರೀ ಮರುಳಾರಾಧ್ಯ ಸ್ವಾಮಿಗಳವರ ಸಮಾಧಿ ಕ್ರಿಯೆಗೆ ಬಂದಾಗ ಶ್ರೀ ಉದ್ದಾನ ಶಿವಯೋಗಿಗಳವರ ಕೃಪಾದೃಷ್ಟಿಗೆ ಒಳಗಾಗಿದ್ದರು. ಬಳಿಕ 1930ರ ಮಾ.3ರಂದು ಸಿದ್ದಗಂಗಾ ಕ್ಷೇತ್ರದ ಉತ್ತರಾಧಿಕಾರಿಯಾಗಿ ಉದ್ದಾನ ಶ್ರೀಗಳು ಶಿವಣ್ಣ ಅವರನ್ನು ಆಯ್ಕೆ ಮಾಡಿದ್ದರು.