ಉಡುಪಿ: ಕಟಪಾಡಿಯಲ್ಲಿ ಫ್ಲೈ-ಓವರ್ ನಿರ್ಮಾಣ ಕಾಮಗಾರಿ ಕೈಗೊಳ್ಳಲು ಈಗಾಗಲೇ ಉದ್ದೇಶಿಸಲಾ ಗಿದ್ದು, ಕಾಮಗಾರಿಯನ್ನು ನವೆಂಬರ್ ಮೊದಲನೇ ವಾರದಿಂದ ಪ್ರಾರಂಭಿಸಬೇಕು. ಕಾಮಗಾರಿ ವೇಳೆ ಹೆದ್ದಾರಿ ಬಂದ್ ಆಗುವ ಹಿನ್ನೆಲೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲ ವಾಗುವಂತೆ ಸರ್ವಿಸ್ ರಸ್ತೆಯಲ್ಲಿ ಸಂಚಾರಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಮಣಿಪಾಲದ ರಜತಾದ್ರಿಯಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ಹೆದ್ದಾರಿ 66 ಮತ್ತು 169ಎ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ನಾಳೆಯಿಂದಲೇ ಹೆದ್ದಾರಿಯಲ್ಲಿರುವ ವಿದ್ಯುತ್ ತಂತಿ ಕಂಬಗಳ ಸ್ಥಳಾಂತರ ಕಾರ್ಯವನ್ನು ಪ್ರಾರಂಭಿಸಬೇಕು. ಈ ವೇಳೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸ್ಥಳಿಯ ಸಂಸ್ಥೆಗಳ ಸಹಕಾರ ಪಡೆಯಬೇಕು. ರಾ.ಹೆದ್ದಾರಿ ಇಬ್ಬಾಗದಲ್ಲಿ ಸರ್ವಿಸ್ ರಸ್ತೆ ಕಾಮಗಾರಿಯ ಪ್ರಗತಿಯನ್ನು ಹೆಚ್ಚಿಸಬೇಕು. ಅರಣ್ಯ ಇಲಾಖೆಯಿಂದ ಮರಗಳ ತೆರವಿಗೆ ತ್ವರಿತವಾಗಿ ಅನುಮತಿ ಪಡೆದು ತೆರವುಗೊಳಿಸಬೇಕು ಎಂದರು.
ಸಂತೆಕಟ್ಟೆ ಕಲ್ಯಾಣಪುರ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಗತಿಯನ್ನು ಹೆಚ್ಚಿಸುವುದರೊಂದಿಗೆ ಶೀಘ್ರವೇ ಕಾಮಗಾರಿಯನ್ನು ಪೂರ್ಣಗೊಳಿಸಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಕೋಟ ಸೂಚನೆ ನೀಡಿದರು.
ಅಂಬಲಪಾಡಿ ಜಂಕ್ಷನ್ನಲ್ಲಿ ಫ್ಲೈ-ಓವರ್ ನಿರ್ಮಾಣ ಕಾಮಗಾರಿ ಪ್ರಗತಿ ಯಲ್ಲಿದೆ. ಕಾಮಗಾರಿಯನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸಲು ಮುಂದಾಗಬೇಕು ಎಂದ ಅವರು, ಕಾಮಗಾರಿಯಿಂದ ಗೋಪುರದ ಹತ್ತಿರ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದ್ದು ವಾಹನಗಳ ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದರು.
169ಎ ಮಲ್ಪೆಯಿಂದ ಕರಾವಳಿ ಜಂಕ್ಷನ್ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿ 2.2 ಕಿ.ಮೀ. ಈಗಾಗಲೇ ಪ್ರಗತಿ ಯಲ್ಲಿದೆ. ಈ ಕಾಮಗಾರಿಗೆ ಅಗತ್ಯವಿರುವ ಬಾಕಿ ಉಳಿದ ಭೂ ಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣ ಗೊಳಿಸಲು ಕ್ರಮವಹಿಸಬೇಕು. ಭೂಮಾಲಕರಿಗೆ ವೈಜ್ಞಾನಿಕವಾಗಿ ಪರಿಹಾರದ ಹಣವನ್ನು ನೀಡಲು ಕೂಡಲೇ ಕ್ರಮಕೈಗೊಳ್ಳಬೇಕು ಎಂದರು.
ಕಾರ್ಕಳ ತಾಲೂಕಿನ 169ಎಗೆ ಸಂಬಂಧಿಸಿದಂತೆ ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಫುಲ್ಕೇರಿ ಬೈಪಾಸ್ ಮುರತ್ತಂಗಡಿ ಪದವಿ ಪೂರ್ವ ಕಾಲೇಜಿನವರೆಗೆ 6 ಬಸ್ ನಿಲ್ದಾಣಗಳಿದ್ದು ಇವುಗಳ ಪುನರ್ ನಿರ್ಮಾಣ ಕಾರ್ಯ ನಡೆಸಿ, ಕಾಲೇಜಿನ ತಡೆಗೋಡೆ ಮೇಲೆ ರಕ್ಷಣಾ ತಡೆಗೋಡೆ ನಿರ್ಮಾಣ ಕೈಗೊಳ್ಳಬೇಕು. ಈ ಪ್ರದೇಶದಲ್ಲಿ ವಿದ್ಯುತ್ ಕಂಬಗಳ ಅಳವಡಿಕೆ ಪೂರ್ಣಗೊಂಡಿದ್ದು ಆದಷ್ಟು ಬೇಗ ವಿದ್ಯುತ್ ಸಂಪರ್ಕ ನೀಡಬೇಕು ಎಂದರು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಜಿಲ್ಲೆಯಲ್ಲಿ ಕೈಗೊಂಡಿರುವ ಹೆದ್ದಾರಿ ಕಾಮಗಾರಿಗಳ ವೇಗವನ್ನು ಹೆಚ್ಚಿಸುವುದರೊಂದಿಗೆ ನಿಗದಿತ ಕಾಲಾವಧಿಯಲ್ಲಿ ಅವುಗಳನ್ನು ಪೂರ್ಣಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡ ಬೇಕು ಎಂದು ಕೋಟ ಶ್ರೀನಿವಾಸ ಪೂಜಾರಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಹಾಗೂ ಅಭಿಯಂತರರಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಶಾಸಕರಾದ ಯಶ್ಪಾಲ್ ಎ. ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಹೆಚ್ಚುವರಿ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಸಹಾಯಕ ಕಮಿಷನರ್ ರಶ್ಮಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಮೊಹಮ್ಮದ್ ಅಜ್ಮಿ, ಡಿಎಫ್ಓ ಗಣಪತಿ, ಭೂದಾಖಲೆಗಳ ಉಪನಿರ್ದೇಶಕ ರವೀಂದ್ರ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ರಾ.ಹೆ.ಅಭಿಯಂತರರು ಹಾಗೂ ಇತರರು ಉಪಸ್ಥಿತರಿದ್ದರು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…