ನಾಲ್ಕು ಚಕ್ರದ ವೈಯಕ್ತಿಕ ವಾಹನವಿದ್ದು ಬಿಪಿಎಲ್‌ ಕಾರ್ಡ್‌ ಹೊಂದಿದ್ದರೆ ದಂಡ ವಸೂಲಿ – Vishwanews24

Featured, ರಾಜ್ಯ ನ್ಯೂಸ್

ನಾಲ್ಕು ಚಕ್ರದ ವೈಯಕ್ತಿಕ ವಾಹನವಿದ್ದು ಬಿಪಿಎಲ್‌ ಕಾರ್ಡ್‌ ಹೊಂದಿದ್ದರೆ ದಂಡ ವಸೂಲಿ

ಬೆಂಗಳೂರು: ಬಿಪಿಎಲ್ ಕಾರ್ಡ್ ಅಕ್ರಮವನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ಇದೀಗ ನಾಲ್ಕು ಚಕ್ರ ವಾಹನಗಳನ್ನು ಹೊಂದಿರುವಂತ ಬಿಪಿಎಲ್ ಪಡಿತರ ಚೀಟಿದಾರರ ಮಾಹಿತಿಯನ್ನು ಕಲೆ ಹಾಕುತ್ತಿದ್ದು, ಅಂತಹ ವ್ಯಕ್ತಿಗಳಿಗೆ ದಂಡವನ್ನು ಹಾಕೋದಕ್ಕಾಗಿ ಪಟ್ಟಿಯನ್ನು ತಯಾರಿಸುತ್ತಿದೆ ಎಂಬುದಾಗಿ ಹೇಳಲಾಗುತ್ತಿದೆ. ಈ ಮೂಲಕ ನಾಲ್ಕು ಚಕ್ರಗಳ ವಾಹನ ಹೊಂದಿ, ಅಂತ್ಯೋದಯ ಆಹಾರ ಪಡಿತರ ಕಾರ್ಡ್ ಹೊಂದಿರೋರಿಗೆ ಶಾಕ್ ನೀಡೋದಕ್ಕೆ ಮುಂದಾಗಿದೆ.

ಏನಿದು ಅನರ್ಹತೆ? :
ನಾಲ್ಕು ಚಕ್ರಗಳ ವಾಹನ ಹೊಂದಿರುವವರು ಅಂತ್ಯೋದಯ, ಬಿಪಿಎಲ್‌ ಪಡಿತರ ಚೀಟಿ ಹೊಂದಿದ್ದರೆ, ಅಂಥವರು ದಂಡ ರಹಿತವಾಗಿ 2019ರ ಸೆ.3ರೊಳಗೆ ಆಯಾ ತಾಲೂಕು ಕಚೇರಿಯ ಆಹಾರ ಶಾಖೆಗೆ ತೆರಳಿ ಪಡಿತರ ಚೀಟಿ ವಾಪಸ್‌ ಕೊಟ್ಟು, ರದ್ದು ಮಾಡಿಸುವಂತೆ ಸರ್ಕಾರ ಸೂಚನೆ ನೀಡಿತ್ತು. ಬಳಿಕ ಅವಧಿಯನ್ನು ಅ.15ರ ತನಕ ವಿಸ್ತರಿಸಿತು. ಹೀಗೆ ಒಟ್ಟು ನಾಲ್ಕಾರು ಬಾರಿ ಸರೆಂಡರ್‌ಗೆ ಅವಕಾಶ ನೀಡಲಾಗಿತ್ತು. ಆದರೂ ರದ್ದು ಮಾಡದೇ ಸೌಲಭ್ಯ ಪಡೆಯುತ್ತಿರುವ ಅನರ್ಹ ಪಡಿತರ ಚೀಟಿದಾರರಿಗೆ ದಂಡ ವಿಧಿಸಲು ಕ್ರಮ ಕೈಗೊಳ್ಳಲಾಗಿದೆ.

ಅನರ್ಹರಿಗೆ ನೋಟಿಸ್‌ :

ನಾಲ್ಕು ಚಕ್ರಗಳ ವಾಹನ ಹೊಂದಿರುವ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿದಾರರ ಕುಟುಂಬಗಳ ಮಾಹಿತಿ ನೀಡುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು ಸಾರಿಗೆ ಇಲಾಖೆಯನ್ನು ಕೋರಿತ್ತು. ಇಲಾಖೆಯು ಅಂಥವರ ಪಟ್ಟಿ ಸಿದ್ಧಪಡಿಸಿ ಮಾಹಿತಿ ನೀಡಿದೆ. ಅದರ ಅನ್ವಯ ಆಯಾ ತಾಲೂಕು ಕಚೇರಿಯ ಆಹಾರ ಶಿರಸ್ತೇದಾರ/ನಿರೀಕ್ಷಕರಿಗೆ ಅನರ್ಹ ಪಡಿತರ ಚೀಟಿದಾರರ ಪಟ್ಟಿ ಕಳುಹಿಸಲಾಗಿದೆ. ನಿಯಮ ಉಲ್ಲಂ ಸಿದವರಿಗೆ ಅಧಿಕಾರಿಗಳು ನೋಟಿಸ್‌ ಜಾರಿ ಮಾಡಿದ್ದಾರೆ. ದಾಖಲೆಗಳು, ಹೆಸರಿನ ವ್ಯತ್ಯಾಸ ಗೊಂದಲ ಇದ್ದಲ್ಲಿ ಸ್ಥಳ ಪರಿಶೀಲಿಸುವ ಅಧಿಕಾರವನ್ನು ನೀಡಲಾಗಿದ್ದು, ಅನರ್ಹರು ದಂಡ ಪಾವತಿಸಲೇ ಬೇಕಿದೆ.

ಉ.ಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆ ಬಗ್ಗೆ ಚರ್ಚಿಸಿ ಶೀಘ್ರವೇ ಸೂಕ್ತ ತೀರ್ಮಾನ : ಕೆ.ಸುಧಾಕರ್ ಭರವಸೆ  – Vishwanews24

ಮೂರು ದಿನ ಕಾಲಾವಕಾಶ:
ನೋಟಿಸ್‌ ತಲುಪಿದ 3 ದಿನಗಳ ಒಳಗೆ ಕಾರ್ಡುದಾರ ತಾಲೂಕು ಕಚೇರಿಯ ಆಹಾರ ವಿಭಾಗಕ್ಕೆ ಹಾಜರಾಗಬೇಕು. ಅಲ್ಲಿ ಪಾವತಿಸಬೇಕಾದ ದಂಡದ ಮೊತ್ತವನ್ನು ತಿಳಿಸಲಾಗುತ್ತದೆ. ದಂಡ ಮೊತ್ತವನ್ನು ಸರ್ಕಾರದ ಟ್ರೆಜರಿಗೆ ಪಾವತಿಸಬೇಕಾದ ಕಾರಣ ಚಲನ್‌ ನೀಡಲಾಗುತ್ತದೆ. ಬ್ಯಾಂಕ್‌ನಲ್ಲಿ ದಂಡ ಮೊತ್ತ ಕಟ್ಟಿದ ರಶೀದಿಯನ್ನು ಪುನಃ ಆಹಾರ ನಿರೀಕ್ಷಕರಿಗೆ ನೀಡಬೇಕು. ಬಳಿಕ ಅಂತ್ಯೋದಯ ಅಥವಾ ಬಿಪಿಎಲ್‌ ಕಾರ್ಡನ್ನು ಎಪಿಎಲ್‌ ಆಗಿ ಪರಿವರ್ತಿಸಲಾಗುತ್ತದೆ. ರಶೀದಿ ಒಪ್ಪಿಸುವ ತನಕ ಕಾರ್ಡನ್ನು ಅಮಾನತಿನಲ್ಲಿಡಲಾಗುತ್ತದೆ.

ಮಾರುಕಟ್ಟೆ ಮೌಲ್ಯ ಆಧರಿಸಿ ದಂಡ:
ಪಡಿತರ ಚೀಟಿದಾರ ವಾಹನ ಖರೀದಿಸಿದ ದಿನಾಂಕ, ಪಡಿತರ ಚೀಟಿ ನೋಂದಣಿ ಆದ ದಿನಾಂಕವನ್ನು ಇಲಾಖೆಯು ವೆಬ್‌ಸೈಟ್‌ನಲ್ಲಿ ಗಮನಿಸುತ್ತದೆ. ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವ ಮೊದಲೇ ವಾಹನ ಹೊಂದಿದ್ದರೆ ಆತ ಸುಳ್ಳು ಮಾಹಿತಿ ನೀಡಿ ಕಾರ್ಡ್‌ ಪಡೆದಿದ್ದಾನೆ ಎಂದರ್ಥ. ಅಂಥವರಿಗೆ ದಂಡ ಹೆಚ್ಚಿರುತ್ತದೆ. ಪಡಿತರ ಚೀಟಿ ಆದ ಬಳಿಕ ವಾಹನ ಖರೀದಿಸಿದ್ದರೆ, ವಾಹನ ಪಡೆದ ದಿನದಿಂದ ದಂಡ ಅನ್ವಯ ಆಗುತ್ತದೆ. ಕಾರ್ಡುದಾರ ಈ ತನಕ ಪಡೆದಿರುವ ಪಡಿತರ ಸಾಮಗ್ರಿಗೆ ಈಗಿನ ಮಾರುಕಟ್ಟೆ ಮೌಲ್ಯ ಆಧರಿಸಿ ದಂಡ ಕಟ್ಟಬೇಕು. ಅಂದರೆ ಪಡಿತರ ಇಲಾಖೆಯಿಂದ 1 ರೂ.ಗೆ ಅಕ್ಕಿ ಪಡೆಯುತ್ತಿದ್ದರೆ ಈಗಿನ ಮಾರುಕಟ್ಟೆ ಮೌಲ್ಯ ಕೆ.ಜಿ.ಗೆ 28 ರೂ. ಎಂದು ಪರಿಗಣಿಸಬಹುದು. ಆರಂಭದಿಂದ ಈ ತನಕ ಪಡೆದ ಪಡಿತರ ಸಾಮಗ್ರಿಗೆ ಈಗಿನ ಮಾರುಕಟ್ಟೆ ಮೌಲ್ಯ ಪ್ರಕಾರವೇ ದಂಡ ಪಾವತಿಸಬೇಕು.

Leave a Reply