ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ದೇಶದ ಆರ್ಥಿಕತೆ ಪ್ರಪಾತಕ್ಕೆ ಕುಸಿಯಲು ಕಾರಣ : ಕಾಂಗ್ರೆಸ್‌ ವಕ್ತಾರ ಜೈವೀರ್‌ ಶೆರ್ಗಿಲ್‌ ಆರೋಪ -Vishwanews24

Featured, ದಕ್ಷಿಣ ಕನ್ನಡ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎರಡನೇ ಅವಧಿಯಲ್ಲೂ ಕುಂಭಕರ್ಣ ನಿದ್ರೆ ಮುಂದುವರಿಸಿದ್ದು, ದೇಶದ ಆರ್ಥಿಕತೆ ಪ್ರಪಾತಕ್ಕೆ ಕುಸಿಯಲು ಕಾರಣವಾಗಿದೆ. ಈ ಸರ್ಕಾರ ಭಾರತದ ಆರ್ಥಿಕತೆಯ ಪಾಲಿನ ಖಳನಾಯಕ ಎಂದು ಕಾಂಗ್ರೆಸ್‌ ರಾಷ್ಟ್ರೀಯ ವಕ್ತಾರ ಜೈವೀರ್‌ ಶೆರ್ಗಿಲ್‌ ಆರೋಪಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್‌ ಸಮಿತಿ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಎರಡನೇ ಬಾರಿ ಅಧಿಕಾರಕ್ಕೆ ಬಂದ ಬಳಿಕ ಬಿಜೆಪಿ ಇನ್ನೂ ಪ್ರಚಾರ ಮತ್ತು ವಿಜಯೋತ್ಸವದ ಗುಂಗಿನಲ್ಲೇ ಇದೆ. ವ್ಯಾಪಾರ, ಸಣ್ಣ ಉಳಿತಾಯ ಪಾತಾಳಕ್ಕೆ ಕುಸಿಯುತ್ತಿವೆ. ಉದ್ಯೋಗ ನಷ್ಟ ತೀವ್ರವಾಗಿ ಏರುತ್ತಿದೆ. ಬ್ಯಾಂಕ್‌ ವಂಚನೆ ದೊಡ್ಡ ಪ್ರಮಾಣದಲ್ಲಿ ಹೆಚ್ಚಿದೆ. ವಂಚಕರು ವಿದೇಶಕ್ಕೆ ಪರಾರಿಯಾಗುತ್ತಿದ್ದಾರೆ. ಇದೆಲ್ಲವೂ ದೇಶಕ್ಕೆ ಬಿಜೆಪಿಯ ಕೊಡುಗೆ’ ಎಂದು ವಾಗ್ದಾಳಿ ನಡೆಸಿದರು.

ಆರ್ಥಿಕವಾಗಿ ದಿವಾಳಿಯಾಗಿರುವ ಕೇಂದ್ರ ಸರ್ಕಾರ ಆರ್‌ಬಿಐನಲ್ಲಿದ್ದ ₹ 2 ಲಕ್ಷ ಕೋಟಿಯನ್ನು ಲೂಟಿ ಮಾಡಿದೆ ಎಂದು ಆರೋಪಿಸಿದರು.ದೇಶದ ಹಣಕಾಸು ಪರಿಸ್ಥಿತಿ ಕುರಿತು ತಕ್ಷಣವೇ ಶ್ವೇತಪತ್ರ ಪ್ರಕಟಿಸಬೇಕು. ರಾಷ್ಟ್ರೀಯ ಆರ್ಥಿಕ ತುರ್ತು ಪರಿಸ್ಥಿತಿ ಘೋಷಿಸಬೇಕು ಎಂದು ಆಗ್ರಹಿಸಿದರು.

ಮಾಜಿ ಸಚಿವರಾದ ಬಿ.ರಮಾನಾಥ ರೈ, ಕೆ.ಅಭಯಚಂದ್ರ ಜೈನ್‌, ಶಾಸಕ ಯು.ಟಿ.ಖಾದರ್‌, ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಕೆ.ಹರೀಶ್‌ ಕುಮಾರ್, ಮಾಜಿ ಶಾಸಕ ಬಿ.ಎ.ಮೊಹಿಯುದ್ದೀನ್ ಬಾವಾ, ಎಐಸಿಸಿ ಮಾಧ್ಯಮ ಸಂಯೋಜಕ ಸಂಜೀವ್‌ ಸಿಂಗ್‌, ಎಐಸಿಸಿ ಸಾಮಾಜಿಕ ಜಾಲತಾಣ ಸಂಯೋಜಕಿ ಲಾವಣ್ಯಾ ಬಲ್ಲಾಳ್‌, ಜಿಲ್ಲಾ ಯುವ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಮಿಥುನ್‌ ರೈ ಪತ್ರಿಕಾಗೋಷ್ಠಿಯಲ್ಲಿದ್ದರು.