ಬೆಂಗಳೂರು: ಇತ್ತೀಚೆಗೆ ರಾಮಮೂರ್ತಿನಗರ ಫ್ಲ್ಯಾಟ್ನಲ್ಲಿ ನಡೆದ ಮಂಗಳೂರು ಮೂಲದ ಟೆಕಿ ಶರ್ಮಿಳಾ ಸಾವಿನ ಪ್ರಕರಣ ಸ್ಫೋಟಕ ತಿರುವು ಪಡೆದುಕೊಂಡಿದೆ. ಅಸಲಿಗೆ ಶರ್ಮಿಳಾದ್ದು ಅಸಹಜ ಸಾವಲ್ಲ. ನೆರೆ ಮನೆಯ ಪಿಯುಸಿ ವಿದ್ಯಾರ್ಥಿಯೊಬ್ಬ ಆಕೆ ಮೇಲೆ ಹಲ್ಲೆ ನಡೆಸಿ ಬಳಿಕ ಮನೆಗೆ ಬೆಂಕಿ ಹಚ್ಚಿ ಉಸಿರುಗಟ್ಟುವಂತೆ ಕೊಲೆಗೈದ ಪರಾರಿಯಾಗಿರುವುದು ವೈದ್ಯಕೀಯ ವರದಿಯಲ್ಲಿ ಬೆಳಕಿಗೆ ಬಂದಿದೆ.
ಈ ಸಂಬಂಧ ಕೊಡಗು ಜಿಲ್ಲೆ ವಿರಾಜಪೇಟೆ ಮೂಲದ ಕರ್ನಾಲ್ ಕುರೈ(18) ಎಂಬಾತನನ್ನು ಬಂಧಿಸಲಾಗಿದೆ. ಆರೋಪಿ ಜ.3ರಂದು ಶರ್ಮಿಳಾ(34) ಮೇಲೆ ಹಲ್ಲೆ ನಡೆಸಿದ್ದ. ಬಳಿಕ ಸಾಕ್ಷ್ಯ ನಾಶ ಪಡಿಸುವ ಉದ್ದೇಶದಿಂದ ಮನೆಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದ ಎಂದು ಪೊಲೀಸರು ಹೇಳಿದರು.
ಮಂಗಳೂರಿನ ಕಾವೂರು ಮೂಲದ ಶರ್ಮಿಳಾ ಒಂದೂವರೆ ವರ್ಷದಿಂದ ಸುಬ್ರಹ್ಮಣ್ಯ ಲೇಔಟ್ನ ಅಪಾರ್ಟ್ಮೆಂಟ್ನಲ್ಲಿ ಸ್ನೇಹಿತೆ ಜತೆ ವಾಸವಾಗಿದ್ದರು. ಸಮೀಪದ ಸಾಫ್ಟ್ವೇರ್ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದರು. ರಜೆಯಿದ್ದರಿಂದ ಈಕೆಯ ಸ್ನೇಹಿತೆ ಊರಿಗೆ ತೆರಳಿದ್ದರು. ಹೀಗಾಗಿ ಒಬ್ಬರೇ ಇದ್ದರು. ಇನ್ನು ಪಕ್ಕದ ಫ್ಲ್ಯಾಟ್ನಲ್ಲಿ ತಾಯಿ ಜತೆ ವಾಸವಾಗಿದ್ದ ಆರೋಪಿಗೆ ಶರ್ಮಿಳಾ ಮತ್ತು ಆಕೆ ಸ್ನೇಹಿತೆ ಪರಿಚಯವಿತ್ತು ಎಂದು ಪೊಲೀಸರು ಹೇಳಿದರು.
ಜ.3ರಂದು ಸಂಜೆ ಶರ್ಮಿಳಾ ಮನೆಯಲ್ಲಿ ಒಬ್ಬರೇ ಇರುವುದನ್ನುಕಂಡ ಆರೋಪಿ, ಸೈಡ್ ಕಿಟಕಿ ಮೂಲಕ ಮನೆ ಪ್ರವೇಶಿಸಿದ್ದಾನೆ. ಹಿಂದಿನಿಂದ ಬಂದು ಶರ್ಮಿಳಾರನ್ನು ತಬ್ಬಿಕೊಂಡಿದ್ದಾನೆ. ಅದರಿಂದ ಗಾಬರಿಗೊಂಡ ಆಕೆ ಜೋರಾಗಿ ಕೂಗಿಕೊಂಡು ಆತನನ್ನು ದೂರ ತಳ್ಳಿದ್ದಾರೆ. ಆದರೂ ಆರೋಪಿ ತನ್ನ ಭಾವನೆಗಳನ್ನು ಹೇಳಿಕೊಂಡು ದೈಹಿಕವಾಗಿ ತನಗೆ ಸಹಕಾರ ನೀಡುವಂತೆ ಪೀಡಿಸಿದ್ದಾನೆ.
ಆಗ ಕೋಪಗೊಂಡ ಶರ್ಮಿಳಾ ಆರೋಪಿಗೆ ಎಚ್ಚರಿಕೆ ನೀಡಿ ಮನೆಯಿಂದ ಹೊರಗಡೆ ಹೋಗುವಂತೆ ತಿಳಿಸಿದ್ದಾರೆ. ಅದರಿಂದ ವಿಚಲಿತಗೊಂಡ ಆರೋಪಿ, ಏಕಾಏಕಿ ಶರ್ಮಿಳಾ ಮೇಲೆ ಹಲ್ಲೆ ನಡೆಸಿದ್ದಾನೆ. ಕುತ್ತಿಗೆ ಮತ್ತು ಕೈಗಳಿಗೆ ಗಾಯವಾಗಿದೆ. ಬಳಿಕ ಆಕೆಯ ಮೂಗು ಮತ್ತು ಬಾಯಿ ಮುಚ್ಚಿದ್ದಾನೆ. ಕ್ಷಣಾರ್ಧದಲ್ಲೇ ಆಕೆಯ ಮೂಗಿನಿಂದ ರಕ್ತಸ್ರಾವ ಉಂಟಾಗಿ ಮೃತಪಟ್ಟಿದ್ದಾರೆ. ಅದು ಆಕೆ ಬಟ್ಟೆ ಮೇಲೆ ಬಿದ್ದಿದ್ದೆ. ಅದರಿಂದ ಗಾಬರಿಗೊಂಡ ಆರೋಪಿ, ಸಾಕ್ಷ್ಯ ನಾಶ ಪಡಿಸುವ ಉದ್ದೇಶದಿಂದ ಆಕೆಯ ಇತರೆ ಬಟ್ಟೆಗಳನ್ನು ಹಾಸಿಗೆ ಮೇಲೆ ಹಾಕಿ ಬೆಂಕಿ ಹಚ್ಚಿ, ಸೈಡ್ ಕಿಟಕಿ ಮೂಲಕ ಪರಾರಿಯಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದರು.
ವೈದ್ಯಕೀಯ ವರದಿಯಲ್ಲಿ ಬಹಿರಂಗ
ಮೊದಲಿಗೆ ಶಾರ್ಟ್ ಸರ್ಕ್ಯೂಟ್ನಿಂದ ಉಂಟಾದ ಬೆಂಕಿಯಿಂದ ಉಸಿರುಗಟ್ಟಿ ಶರ್ಮಿಳಾ ಮೃತಪಟ್ಟಿದ್ದಾಳೆ ಎಂದು ಹೇಳಲಾಗಿದೆ. ಆದರೆ, ಮರಣೋತ್ತರ ಪರೀಕ್ಷೆಯಲ್ಲಿ ಆಕೆಯ ಕುತ್ತಿಗೆ ಭಾಗ, ಕೈಗಳ ಮೇಲೆ ಬಲವಾದ ಗಾಯಗಳಾಗಿರುವುದು ಪತ್ತೆಯಾಗಿದೆ. ಅಲ್ಲದೆ, ವೈದ್ಯರು, ಶರ್ಮಿಳಾ ಬೆಂಕಿಯ ಹೊಗೆಯಿಂದ ಪ್ರಜ್ಞೆ ಕಳೆದುಕೊಂಡಿಲ್ಲ. ಅದಕ್ಕಿಂತ ಮೊದಲೇ ಈಕೆ ಮೇಲೆ ಹಲ್ಲೆ ನಡೆಸಿ, ಉಸಿರುಗಟ್ಟಿಸಲಾಗಿದೆ. ಜತೆಗೆ ಆಕೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಪ್ರಯತ್ನ ನಡೆದಾಗ ಹಲ್ಲೆ ಆಗಿರುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದ್ದರು.
ಈ ಹಿನ್ನೆಲೆಯಲ್ಲಿ ತನಿಖೆ ಆರಂಭಿಸಿದ ಪೊಲೀಸರು, ಫ್ಲ್ಯಾಟ್ನಲ್ಲಿದ್ದ ಕೆಲ ಅಸ್ಸಾಂ ಮೂಲದ ನಾಲೈದು ಮಂದಿ ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಬಳಿಕ ಅನುಮಾನದ ಮೇರೆಗೆ ಕರ್ನಾಲ್ ಕುರೈನನ್ನು ವಶಕ್ಕೆ ಪಡೆದು ಪೊಲೀಸ್ ಶೈಲಿಯಲ್ಲಿ ವಿಚಾರಣೆ ನಡೆಸಿದಾಗ ಸತ್ಯ ಬಾಯಿಬಿಟ್ಟಿದ್ದಾನೆ. ಆಕೆ ಮೇಲೆ ಪ್ರೇಮಾಂಕುರವಾಗಿದ್ದು, ಆಕೆ ನಿರಾಕರಿಸಿದಳು ಎಂದೆಲ್ಲ ಹೇಳಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಹೀಗಾಗಿ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದ ರಾಮಮೂರ್ತಿನಗರ ಠಾಣೆ ಪೊಲೀಸರು, ಇದೀಗ ಶರ್ಮಿಳಾ ಸ್ನೇಹಿತನ ದೂರಿನ ಮೇರೆಗೆ ಕೊಲೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಈ ಸಂಬಂಧ ರಾಮಮೂರ್ತಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಠಾಣಾಧಿಕಾರಿ ಜಿ.ಜೆ.ಸತೀಶ್ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…