ಬೆಂಗಳೂರು ಗಲಭೆ :ಗಲಭೆಗೆ ಕಾರಣವಾದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ ಕ್ರಮ ಕೈಗೊಳ್ಳಿ ಸರ್ಕಾರಕ್ಕೆ ನಮ್ಮ ಸಂಪೂರ್ಣ ಸಹಕಾರವಿದೆ : ಸಿದ್ದರಾಮಯ್ಯ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು ಗಲಭೆ ಸೃಷ್ಟಿಸಿದ ಕಿಡಿಗೇಡಿಗಳನ್ನು ಬಂಧಿಸಿ ಅವರ ವಿರುದ್ದ ಕ್ರಮ ಕೈಗೊಳ್ಳಿ, ಸರ್ಕಾರಕ್ಕೆ ನಮ್ಮ ಸಂಪೂರ್ಣ ಸಹಕಾರವಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯನವರು ಹೇಳಿದ್ದಾರೆ.

 

ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಸಂಬಂಧಿಯೋರ್ವ ಧಾರ್ಮಿಕ ಅವಹೇಳನಕಾರಿ ಪೋಸ್ಟ್ ಹಾಕಿದ್ದರೆಂಬ ಕಾರಣಕ್ಕೆ ಕೆ.ಕಿ ಹಳ್ಳಿ, ಡಿ.ಜೆ ಹಳ್ಳಿ, ಕಾವಲ್ ಬೈರಸಂದ್ರದಲ್ಲಿ ಗಲಭೆ ಸೃಷ್ಟಿಸಿ ಬೆಂಕಿ ಹಾಕಿದ ಘಟನೆ ಹಾಗೂ ಪೋಸ್ಟ್‌ ಹಾಕುವ ಮೂಲಕ ಪ್ರಚೋಧನೆ ನೀಡಿರುವುದನ್ನು ಸಿದ್ದರಾಮಯ್ಯ ಅವರು ಸರಣಿ ಟ್ವೀಟ್‌ ಮೂಲಕ ಖಂಡಿಸಿದ್ದಾರೆ.

”ಗಲಭೆಗೆ ಪ್ರಚೋದಿಸಿದ್ದ ಮತ್ತು ಹಿಂಸಾಚಾರದ ಮೂಲಕ ಪ್ರತಿಕ್ರಿಯಿಸಿದ್ದ ಕಿಡಿಗೇಡಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಬೆಂಗಳೂರು ಪೊಲೀಸ್ ಕಮಿಷನರ್‌ಗೆ ತಿಳಿಸಿದ್ದೇನೆ. ಶಾಂತಿ ಸ್ಥಾಪನೆಯ ರಾಜ್ಯ ಸರ್ಕಾರದ ಪ್ರಯತ್ನಕ್ಕೆ ನಮ್ಮ ಪಕ್ಷದ ಸಂಪೂರ್ಣ ಸಹಕಾರ ಇದೆ” ಎಂದು ಹೇಳಿದ್ದಾರೆ.

”ಇಂತಹ ಕೋಮು ಗಲಭೆಗಳಲ್ಲಿ‌ ಸಾವು-ನೋವಿಗೆ ಈಡಾಗುವವರು ಅಮಾಯಕರು ಎಂಬ ಸತ್ಯವನ್ನು ಅನುಭವದ ಪಾಠ ನಮಗೆ ಹೇಳಿಕೊಟ್ಟಿದೆ. ಮೊದಲು ಎರಡೂ ಧರ್ಮಗಳ ಹಿರಿಯರು ಒಂದೆಡೆ ಕೂತು ಪರಸ್ಪರ ಮಾತುಕತೆ ಮೂಲಕ ಶಾಂತಿ ಸ್ಥಾಪನೆಗೆ ಪ್ರಯತ್ನ ನಡೆಸಬೇಕೆಂದು ಕೋರುತ್ತೇನೆ” ಎಂದು ಮನವಿ ಮಾಡಿದ್ದಾರೆ.

”ಪೊಲೀಸ್ ಠಾಣೆಯ ಮೇಲೆ ನಡೆದ ದಾಳಿ ಖಂಡನೀಯ. ಇದರಿಂದ ಪೊಲೀಸರು ನೈತಿಕ ಸ್ಥೈರ್ಯ‌ ಕಳೆದು ಕೊಳ್ಳಬಾರದು. ಇಂತಹ ಪ್ರಕರಣಗಳ ಸಂದರ್ಭಗಳಲ್ಲಿ ಪೊಲೀಸರು ತಕ್ಷಣ ವಿವೇಚನೆಯಿಂದ ನಿರ್ಧಾರ ಕೈಗೊಂಡು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಸಣ್ಣ ನಿರ್ಲಕ್ಷ್ಯ ಅನಾಹುತಕ್ಕೆ ದಾರಿಮಾಡಿಕೊಡುತ್ತದೆ” ಎಂದು ಅಭಿಪ್ರಾಯ ಪಟ್ಟಿದ್ದಾರೆ.