ಮಂಗಳೂರು ಗೋಲಿಬಾರ್ ಪ್ರಕರಣ : ಮೃತರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಮಮತಾ ದೀದಿ -Vishwanews24
ಕೋಲ್ಕತ್ತಾ: ಸಿಎಎ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಗೋಲಿಬಾರ್’ನಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 5 ಲಕ್ಷ ರುಪಾಯಿ ನೀಡುವುದಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಸಿಎಂ ಯಡಿಯೂರಪ್ಪ ಗೋಲಿಬಾರ್’ನಲ್ಲಿ ಮೃತಪಟ್ಟವರ ಕುಟುಂಬದ ಪರಿಹಾರ ಘೋಷಣೆ ಹಿಂಪಡೆದ ಬೆನ್ನಲ್ಲೇ, ಮಮತಾ ಬ್ಯಾನರ್ಜಿ ಈ ಘೋಷನೆ ಮಾಡಿದ್ದಾರೆ.
ಸಿಎಎ ಮತ್ತು ಎನ್ ಆರ್ ಸಿ ವಿರೋಧಿಸಿ ಪಶ್ಚಿಮ ಬಂಗಾಳದಲ್ಲಿ ಸ್ವತಃ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೇ ಪ್ರತಿಭಟನೆಗಿಳಿದಿದ್ದು, ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಾತ್ರವಲ್ಲ, ಪ್ರತಿಭಟನೆಯನ್ನು ವಿದ್ಯಾರ್ಥಿಗಳು ಮುಂದುವರೆಸಬೇಕು ಎಂದು ಮನವಿ ಮಾಡಿದರು. ನಿಮ್ಮ ಪ್ರಜಾಪ್ರಭುತ್ವದ ಹಕ್ಕಿಗಾಗಿ ಪ್ರಜಾಪ್ರಭುತ್ವದ ರೀತಿಯಲ್ಲಿ ಪ್ರತಿಭಟನೆ ಮುಂದುವರೆಸಬೇಕು ಎಂದು ಹೇಳಿದ್ದಾರೆ.
ಇದೇ ವೇಳೆ ಮಾತನಾಡಿದ ಅವರು, ಮಂಗಳೂರಿನಲ್ಲಿ ಹಿಂಸಾಚಾರದ ವೇಳೆ ಪೊಲೀಸರ ಗುಂಡೇಟಿನಿಂದ ಮೃತಪಟ್ಟಿದ್ದ ಇಬ್ಬರ ಕುಟುಂಬಕ್ಕೆ ತಲಾ 5 ಲಕ್ಷ ರುಪಾಯಿ ಚೆಕ್ ನೀಡಲಾಗುತ್ತದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
