ಮುಂಬರುವ ಎಲ್ಲಾ ಚುನಾವಣೆಗಳಲ್ಲೂ ಕಾಂಗ್ರೆಸ್ ಜತೆ ಹಾಗೂ ಯಾವುದೇ ಪಕ್ಷದ ಜತೆ ಮೈತ್ರಿ ಮಾಡಿಕೊಳ್ಳುವುದಿಲ್ಲ : ಎಚ್ ಡಿ ದೇವೇಗೌಡ
ಬೆಂಗಳೂರು,: ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರು ಕಾಂಗ್ರೆಸ್ ಜೊತೆಗಿನ ಮೈತ್ರಿ ಮುಗಿದ ಅಧ್ಯಾಯ ಎಂದಿರುವ ದೇವೇಗೌಡ್ರು, ಭವಿಷ್ಯದಲ್ಲಿ ಕಾಂಗ್ರೆಸ್ ಜೊತೆ ಯಾವುದೇ ಮೈತ್ರಿ ಇರುವುದಿಲ್ಲ ಎಂದು ಕಾರ್ಯಕರ್ತರ ಸಭೆಯ ನಂತರ ಹೇಳಿದ್ದಾರೆ.
ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆ ಹಾಗೂ ಎಲ್ಲಾ ಚುನಾವಣೆಗಳಲ್ಲೂ ಕಾಂಗ್ರೆಸ್ ಜತೆ ಹಾಗೂ ಯಾವುದೇ ಪಕ್ಷದ ಜತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದಿದ್ದಾರೆ.
ಪಕ್ಷದ ಕೇಂದ್ರ ಕಚೇರಿ, ಜೆ ಪಿ ಭವನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದ ಗೌಡ್ರು, ರಾಜ್ಯದಲ್ಲಿ ಚುನಾವಣೆ ಯಾವಾಗಲಾದರೂ ಎದುರಾಗಬಹುದು, ಕಾರ್ಯಕರ್ತರು ಮತ್ತು ಮುಖಂಡರು ಸಜ್ಜಾಗಿರುವಂತೆ ಸೂಚಿಸಿದ್ದಾರೆ.
ಇತ್ತೀಚಿಗೆ ನಡೆದಂತಹ ಚುನಾವಣೆಗಳಲ್ಲಿ ಸೋಲುಂಡಂತಹ ಅಭ್ಯರ್ಥಿಗಳ ಸಭೆ ನಡೆಸಿ ಅವರು ಮಾತನಾಡಿದರು. ಸಭೆಯಲ್ಲಿ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಇದ್ದ ಪಕ್ಷದ ಸ್ಥಿತಿಗೂ ಸಾರ್ವತ್ರಿಕ ಚುನಾವಣೆ ಬಳಿಕದ ಸ್ಥಿತಿಗೂ ಹಾಗೂ ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಂಡ ಬಳಿಕದ ಸ್ಥಿತಿಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು. ಹಾಗೂ ಪಕ್ಷದ ಹೀನಾಯ ಸೋಲಿಗೆ ಕಾರಣಗಳ ಬಗ್ಗೆ ಚರ್ಚಿಸಲಾಯಿತು.
ರಾಜ್ಯಾದ್ಯಂತ ಪ್ರವಾಸ ನಡೆಸಿ ಕುಮಾರಸ್ವಾಮಿ ನೇತೃತ್ವದ ಸರಕಾರದ ಹದಿನಾಲ್ಕು ತಿಂಗಳ ಸಾಧನೆಗಳನ್ನು ಮನೆಮನೆಗೆ ತಲುಪಿಸುವಂತೆ ದೇವೇಗೌಡ್ರು ಪಕ್ಷದ ನಾಯಕರಿಗೆ ಸೂಚಿಸಿದ್ದಾರೆ.
ಮುಂದಿನ ದಿನಗಳಲ್ಲಿ ಪಕ್ಷ ಬಲವರ್ಧನೆಗೆ ಸ್ವತಂತ್ರ ಸ್ಪರ್ಧೆಯೇ ಉತ್ತಮ. ಮೈತ್ರಿಯಿಂದ ಸ್ಥಳೀಯ ಮಟ್ಟದಲ್ಲಿ ಯಾವುದೇ ಲಾಭವಿಲ್ಲ ಎಂಬುವುದಾಗಿ ಮುಖಂಡರು ತಿಳಿಸಿದರು. ಈ ಹಿನ್ನೆಲೆಯಲ್ಲಿ ಭವಿಷ್ಯದಲ್ಲಿ ಪಕ್ಷವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಯಾವುದೇ ಪಕ್ಷಗಳ ಜತೆ ಮೈತ್ರಿ ಮಾಡಿಕೊಳ್ಳುವುದು ಬೇಡ ಎಂಬ ನಿರ್ಧಾರಕ್ಕೆ ಜೆಡಿಎಸ್ ಬಂದಿದೆ.
