ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು : ಐವನ್ ಡಿಸೋಜ -Vishwanews24
ಮಂಗಳೂರು: ‘ಆಪರೇಷನ್ ಕಮಲ’ದ ಮೂಲಕ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ರಾಜೀನಾಮೆ ಕೊಡಿಸಿರುವುದನ್ನು ಒಪ್ಪಿಕೊಂಡಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಆಗ್ರಹಿಸಿದರು.
ಮಂಗಳವಾರ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಯಡಿಯೂರಪ್ಪ ಮತ್ತು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಜತೆಗೂಡಿ ನಮ್ಮ ಪಕ್ಷಗಳ ಶಾಸಕರನ್ನು ಆಮಿಷವೊಡ್ಡಿ ರಾಜೀನಾಮೆ ಕೊಡಿಸಿದ್ದಾರೆ. ಯಡಿಯೂರಪ್ಪ ಅವರೇ ಒಪ್ಪಿಕೊಂಡಿರುವ ಆಡಿಯೊ ಈಗ ಸುಪ್ರೀಂಕೋರ್ಟ್ ಮುಂದಿದೆ. ಇನ್ನು ಅವರು ಅಧಿಕಾರದಲ್ಲಿ ಮುಂದುವರಿಯಬಾರದು’ ಎಂದರು.
ಆಡಿಯೊದಲ್ಲಿರುವ ಧ್ವನಿ ತನ್ನದೇ ಎಂದು ಯಡಿಯೂರಪ್ಪ ಅವರು ಮೊದಲು ಒಪ್ಪಿಕೊಂಡಿದ್ದರು. ಈಗ ತಮ್ಮ ಹೇಳಿಕೆಯನ್ನು ತಿರುಚಲಾಗಿದೆ ಎಂದು ಹೇಳುತ್ತಿದ್ದಾರೆ. ಆಡಿಯೊ ಬಹಿರಂಗವಾದ ಬಳಿಕ ಗಲಿಬಿಲಿಗೊಂಡಿರುವ ಅವರು ತಮ್ಮನ್ನು ಭೇಟಿ ಮಾಡಲು ಬರುವವರು ಮೊಬೈಲ್ ತರದಂತೆ ನಿರ್ಬಂಧ ಹೇರಿದ್ದಾರೆ ಎಂದು ಟೀಕಿಸಿದರು.
2008ರಲ್ಲಿ ಕೂಡ ಬಿಜೆಪಿ ಆಪರೇಷನ್ ಕಮಲದ ಮೂಲಕ ವಿರೋಧ ಪಕ್ಷಗಳ ಶಾಸಕರನ್ನು ಸೆಳೆದುಕೊಂಡಿತ್ತು. 2018ರಲ್ಲೂ ಅದನ್ನೇ ಮಾಡುತ್ತಿದೆ. ಆಪರೇಷನ್ ಕಮಲ ನಡೆಸುತ್ತಿಲ್ಲ ಎಂದು ಬಿಜೆಪಿ ನಾಯಕರು ಪದೇ ಪದೇ ಹೇಳುತ್ತಿದ್ದರು. ಈಗ ಅವರ ನಿಜ ಬಣ್ಣ ಬಯಲಾಗಿದೆ ಎಂದರು.
