ಮೆಂಟಲ್ ಗಿರಾಕಿಗಳ ಹೇಳಿಕೆ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ; ರಮೇಶ್ ಜಾರಕಿಹೊಳಿ’ಗೆ ಡಿ.ಕೆ ಶಿ – Vishwanews24
ಮೆಂಟಲ್ ಗಿರಾಕಿಗಳ ಹೇಳಿಕೆ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ; ರಮೇಶ್ ಜಾರಕಿಹೊಳಿ’ಗೆ ಡಿ.ಕೆ ಶಿವಕುಮಾರ್
ಬೆಂಗಳೂರು: ‘ಕಾಂಗ್ರೆಸ್ ಪಕ್ಷದ ಕುರಿತು ಆಧಾರರಹಿತ ಆರೋಪ ಮಾಡುತ್ತಾ ಬಾಯಿಗೆ ಬಂದಂತೆ ಮಾತನಾಡುವ ಮೆಂಟಲ್ ಗಿರಾಕಿಗಳ ಹೇಳಿಕೆ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಪಕ್ಷ ಹಿನಾಯ ಪರಿಸ್ಥಿತಿಯಲ್ಲಿದ್ದು, ಬಿಜೆಪಿ ಸಚಿವರಿಗೆ ಸಿ.ಡಿ. ತೋರಿಸಿ ಪಕ್ಷಕ್ಕೆ ಕರೆದುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ನೀಡಿರುವ ಹೇಳಿಕೆ ಕುರಿತು ಮಾಧ್ಯಮಗಳು ಸದಾಶಿವನಗರ ನಿವಾಸದ ಬಳಿ ಸೋಮವಾರ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು.
ಬಿಜೆಪಿ ಪಕ್ಷದಲ್ಲಿ ಆಂತರಿಕವಾಗಿ ಏನೇನಾಗುತ್ತಿದೆಯೋ ಅದನ್ನು ಮೊದಲು ನೋಡಿಕೊಳ್ಳಲಿ. ನಿಮ್ಹಾನ್ಸ್ ಸೇರಬೇಕಾದ ಗಿರಾಕಿಗಳು ಹೇಳಿದ್ದಕ್ಕೆಲ್ಲ ನಾನು ಪ್ರತಿಕ್ರಿಯಿಸುವುದಿಲ್ಲ. ಅವರನ್ನು ಆಸ್ಪತ್ರೆಗೆ ಸೇರಿಸುವುದು ಉತ್ತಮ’ ಎಂದು ತಿರುಗೇಟು ನೀಡಿದರು.
ಡಿ.ಕೆ. ಶಿವಕುಮಾರ್ ಅವರ ಕೈಗೆ ರಾಜ್ಯ ಸಿಕ್ಕರೆ ಡಿ.ಕೆ. ಶಿವಕುಮಾರ್ ಟೋಲ್ ಎಂಬ ಮತ್ತೊಂದು ಟೋಲ್ ಹಾಕುತ್ತಾರೆ ಎಂಬ ರಮೇಶ್ ಜಾರಕಿಹೊಳಿ ಅವರ ಆರೋಪದ ಬಗ್ಗೆ ಪ್ರಶ್ನಿಸಿದಾಗ, ‘ಟೋಲ್ ವಿಚಾರವಾಗಿ ಮಾತನಾಡುವುದೇ ಆದರೆ, ಸದ್ಯಕ್ಕೆ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಟೋಲ್ ವಿಚಾರವಾಗಿ ಮಾತನಾಡೋಣ. ಮಿಕ್ಕ ವಿಚಾರವನ್ನು ನಂತರ ಮಾತನಾಡೋಣ’ ಎಂದರು.
