ಮೈತ್ರಿ ಸರಕಾರ : 2019ರಲ್ಲಿ ಮೋದಿಗೆ ಹಿನ್ನಡೆ ಆಗುತ್ತಾ???
ಬೆಂಗಳೂರು: 2019ರ ಲೋಕಸಭಾ ಚುನಾವಣೆ ಮೋದಿಯನ್ನು ಮಣಿಸಲು ವಿರೋಧ ಪಕ್ಷಗಳು ಮಹಾಮೈತ್ರಿಗೆ ಕರೆ ನೀಡಿದ ಪರಿಣಾಮ ದಕ್ಷಿಣ ಭಾರತದಲ್ಲಿ ಕರ್ನಾಟಕದ ಮೂಲಕ ಪ್ರವೇಶಿಸಲು ಮುಂದಾಗಿದ್ದ ಬಿಜೆಪಿಯ ಬಾಗಿಲು ಬಂದ್ ಆಗಿದೆ. ಬಿಜೆಪಿಗೆ ಅಧಿಕಾರ ತಪ್ಪಿಸಲು ಜೆಡಿಎಸ್ ಕಾಂಗ್ರೆಸ್ ತೆಗೆದುಕೊಂಡ ರಾಜಕೀಯ ನಡೆ 2019ರಲ್ಲಿ ಲೋಕಸಭಾ ಚುನಾವಣೆಯ ವೇಳೆ ಪ್ರಧಾನಿ ಮೋದಿಯ ಶಕ್ತಿಯನ್ನು ಕುಂದಿಸುತ್ತಾ ಎನ್ನುವ ಪ್ರಶ್ನೆ ಈಗ ಎದ್ದಿದೆ.
ಹೌದು, ಇಲ್ಲಿಯವರೆಗೆ ಹಳೆ ಮೈಸೂರಿನಲ್ಲಿ ಜಾಸ್ತಿ ಪ್ರಭಾವ ಹೊಂದಿದ್ದ ಜೆಡಿಎಸ್ ಈಗ ಸರ್ಕಾರ ರಚಿಸಿದ ಪರಿಣಾಮ ಮುಂದೆ ರಾಜ್ಯವ್ಯಾಪಿ ತನ್ನ ಬಲವನ್ನು ವಿಸ್ತರಿಸುತ್ತಾ? ಕಾಂಗ್ರೆಸ್ ಶಕ್ತಿಯನ್ನು ಕಡಿಮೆ ಮಾಡುತ್ತಾ? ಅಥವಾ ಲೋಕಸಭಾ ಚುನಾವಣೆಯಲ್ಲಿ ಈ ಎರಡು ಪಕ್ಷಗಳು ಬಿಜೆಪಿಯನ್ನು ಸೋಲಿಸುತ್ತಾ ಎನ್ನುವ ವಿಶ್ಲೇಷಣೆ ಆರಂಭವಾಗಿದೆ.
ಸದ್ಯಕ್ಕೆ ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಗೆ ಭದ್ರ ನೆಲೆ ಇರುವುದು ಕರ್ನಾಟಕದಲ್ಲಿ. ಹೀಗಾಗಿ ಕಾಂಗ್ರೆಸ್ ಜೆಡಿಎಸ್ ಜೊತೆ ಚುನಾವಣಾ ಪೂರ್ವಮೈತ್ರಿ ಮಾಡಿಕೊಂಡರೆ ಒಟ್ಟು 28 ಕ್ಷೇತ್ರಗಳಿರುವ ಕರ್ನಾಟಕದಲ್ಲಿ ಬಿಜೆಪಿಗೆ ಬಲವಾದ ಹೊಡೆತ ಬೀಳುವ ಸಾಧ್ಯತೆಯಿದೆ. ಯಾಕೆಂದರೆ ಮೂರು ಲೋಕಸಭಾ ಚುನಾವಣೆಯ ಮತಗಳಿಕೆಯ ಪ್ರಮಾಣವನ್ನು ತೆಗೆದುಕೊಂಡು ದಳ ಮತ್ತು ಕಾಂಗ್ರೆಸ್ ಮತವನ್ನು ಸೇರಿಸಿದರೆ 50%ಕ್ಕೂ ಹೆಚ್ಚು ಮತಗಳು ಆಗುತ್ತದೆ. ಒಂದು ವೇಳೆ ಮಾತುಕತೆ ಯಶಸ್ವಿಯಾಗಿ ಈ ಚುನಾವಣೆಯಲ್ಲೂ ಮೈತ್ರಿ ಮಾಡಿಕೊಂಡರೆ ಬಿಜೆಪಿಗೆ ಹೊಡೆತ ನೀಡುವ ಸಾಧ್ಯತೆಯನ್ನು ಅಲ್ಲಗೆಳೆಯುವಂತಿಲ್ಲ.
ಈ ವಿಧಾನಸಭಾ ಚುನಾವಣೆಯಲ್ಲಿ ಜನ ಸಿದ್ದರಾಮಯ್ಯನವರ ಆಡಳಿತದಿಂದ ರೋಸಿ ಹೋಗಿ ಜನ ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ ಪಕ್ಷವನ್ನು ಬೆಂಬಲಿಸಿದ್ದಾರೆ ಹೊರತು ಬಿಜೆಪಿ ವಿರುದ್ಧದ ದ್ವೇಷದಿಂದ ಅಲ್ಲ. ರಾಜ್ಯದಲ್ಲಿ ಆಡಳಿತದಲ್ಲಿರುವ ಪಕ್ಷವನ್ನು ಕರ್ನಾಟಕದ ಜನ ಒಪ್ಪುತ್ತಾರೆ ಎನ್ನುವುದು ಶುದ್ಧ ಸುಳ್ಳು. ಈ ವಾದವನ್ನು ಮುಂದಿಟ್ಟರೆ 2014ರಲ್ಲೂ ಇಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನವನ್ನು ಗೆಲ್ಲಬೇಕಿತ್ತು. ಸದ್ಯ ವಿರೋಧ ಪಕ್ಷಗಳಲ್ಲಿ ಮೋದಿಗೆ ಸರಿಸಮಾನವಾದ ನಾಯಕರಿಲ್ಲ. ಸಂಪುಟ ರಚನೆಯಾಗುವಾಗಲೇ ಭಿನ್ನಾಭಿಪ್ರಾಯಗಳು ಬಂದಿದ್ದು, ಅವರಿಗೆ ಅವರ ಶಾಸಕರ ಮೇಲೆ ನಂಬಿಕೆ ಇಲ್ಲದೇ ಅವರನ್ನು ರೆಸಾರ್ಟ್ ನಲ್ಲಿ ಕೂಡಿ ಹಾಕಿದ್ದಾರೆ. ಹೀಗಿರುವಾಗ ಸರ್ಕಾರ ಒಂದು ವರ್ಷ ಪೂರೈಸುತ್ತದೆ ಎನ್ನುವ ನಂಬಿಕೆಯೇ ನಮಗಿಲ್ಲ. 2019ರ ಚುನಾವಣೆಯಲ್ಲಿ ಎಲ್ಲಾ 28 ಕ್ಷೇತ್ರಗಳನ್ನು ಗೆಲ್ಲಲು ನಾವು ಪ್ರಯತ್ನ ಮಾಡುತ್ತೇವೆ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.
