ಮೊದಲ ಬಾರಿಗೆ ಕನ್ನಡದ ಕೃತಿಗೆ ಬೂಕರ್ ಪ್ರಶಸ್ತಿ ; ಪ್ರತಿಷ್ಠಿತ ಅಂತರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಸಾಹಿತಿ ಬಾನು ಮುಷ್ತಾಕ್ – vishwanews24

Featured, ಅಂತಾರಾಷ್ಟ್ರೀಯ ನ್ಯೂಸ್, ರಾಜ್ಯ ನ್ಯೂಸ್

ಮೊದಲ ಬಾರಿಗೆ ಕನ್ನಡದ ಕೃತಿಗೆ ಬೂಕರ್ ಪ್ರಶಸ್ತಿ ; ಪ್ರತಿಷ್ಠಿತ ಅಂತರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಸಾಹಿತಿ ಬಾನು ಮುಷ್ತಾಕ್

ಇದು ಕನ್ನಡ, ಕನ್ನಡಿಗ ಮತ್ತು ಕರ್ನಾಟಕ ಸಂಭ್ರಮಿಸುವ ಹೊತ್ತು : ಸಿಎಂ ಅಭಿನಂದನೆ

ಲಂಡನ್: ಕನ್ನಡದ ಪ್ರಸಿದ್ಧ ಸಾಹಿತಿ ಬಾನು ಮುಷ್ತಾಕ್ ಅವರು ಪ್ರತಿಷ್ಠಿತ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಬಾನು ಮುಷ್ತಾಕ್ ಅವರ ‘ಹಸೀನಾ ಮತ್ತು ಇತರ ಕತೆಗಳು’ ಕೃತಿಯ ಇಂಗ್ಲಿಷ್ ಅನುವಾದಿತ ಹಾರ್ಟ್ ಲ್ಯಾಂಪ್‌ಗೆ ಪ್ರಶಸ್ತಿ ಸಿಕ್ಕಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಕನ್ನಡದ ಕೃತಿಗೆ ಈ ಪ್ರತಿಷ್ಠಿತ ಪ್ರಶಸ್ತಿ ಲಭಿಸಿರುವುದು ವಿಶೇಷ.

ಬೂಕರ್ ಪ್ರಶಸ್ತಿ 50 ಸಾವಿರ ಪೌಂಡ್‌ (ಅಂದಾಜು 57.28 ಲಕ್ಷ ರೂ.) ಒಳಗೊಂಡಿದೆ. ಇದೇ ಅನುವಾದಿತ ಕೃತಿಗೆ ‘ಪೆನ್ ಟ್ರಾನ್ಸ್‌ಲೇಟ್ಸ್’ ಪ್ರಶಸ್ತಿಯೂ ಸಿಕ್ಕಿತ್ತು.

1990 ಮತ್ತು 2023ರ ನಡುವೆ ಪ್ರಕಟಗೊಂಡ 12 ಕತೆಗಳನ್ನೊಳಗೊಂಡ ಈ ಸಂಕಲನವನ್ನು ದೀಪಾ ಭಸ್ತಿ ಅವರು ಕನ್ನಡದಿಂದ ಇಂಗ್ಲಿಷ್‌ಗೆ ಅನುವಾದಿಸಿದ್ದರು. ಮುಸ್ಲಿಂ ಸಮುದಾಯದ ಬಾಲಕಿಯರು ಹಾಗೂ ಹೆಣ್ಣುಮಕ್ಕಳ ದೈನಂದಿನ ಬದುಕನ್ನು ಆಧಾರಿಸಿ ಈ ಕತೆಯನ್ನು ಬರೆಯಲಾಗಿತ್ತು.

ಉಡುಪಿ:  ಮೇ 22 ರಂದು ನೇರ ಸಂದರ್ಶನ – vishwanews24

ಮೇ 21ರಂದು ಲಂಡನ್‌ನಲ್ಲಿ ಟೇಟ್ ಮಾಡರ್ನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಪ್ರಶಸ್ತಿಯನ್ನು ಘೋಷಿಸಲಾಯಿತು. ಫ್ರೆಂಚ್‌ನಿಂದ ಅನುವಾದವಾದ ಎರಡು ಕೃತಿಗಳು, ಜಪಾನ್‌, ಇಟಾಲಿಯನ್‌ ಹಾಗೂ ಡ್ಯಾನಿಷ್‌ ಭಾಷೆಯ ತಲಾ ಒಂದು ಕೃತಿ ‘ಶಾರ್ಟ್‌ ಲಿಸ್ಟ್‌’ನಲ್ಲಿದ್ದವು. ಶಾರ್ಟ್ ಲಿಸ್ಟ್‌ನಲ್ಲಿ ಆಯ್ಕೆಯಾಗಿದ್ದ ಎಲ್ಲರನ್ನೂ ಲಂಡನ್‌ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತ್ತು.

2025ನೇ ಸಾಲಿನ ಬೂಕರ್ ಪ್ರಶಸ್ತಿ ವಿಜೇತ ಖ್ಯಾತ ಲೇಖಕಿ ಬಾನು ಮುಷ್ತಾಕ್ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿನ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, “ಅಂತಾರಾಷ್ಟ್ರೀಯ ಬೂಕರ್ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾಗಿರುವ ಕನ್ನಡದ ಹೆಮ್ಮೆಯ ಲೇಖಕಿ ಬಾನು ಮುಷ್ತಾಕ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಇದು ಕನ್ನಡ, ಕನ್ನಡಿಗ ಮತ್ತು ಕರ್ನಾಟಕ ಸಂಭ್ರಮಿಸುವ ಹೊತ್ತು” ಎಂದು ತಿಳಿಸಿದ್ದಾರೆ.

“ಈ ನೆಲದ ಸೌಹಾರ್ದತೆ, ಜಾತ್ಯತೀತತೆ ಮತ್ತು ಸೋದರತ್ವದ ನಿಜ ಮೌಲ್ಯಗಳನ್ನು ಮೈಗೂಡಿಸಿಕೊಂಡು ಬರೆಯುತ್ತಿರುವ ಬಾನು ಮುಷ್ತಾಕ್ ಅವರು ಕನ್ನಡದ ಹಿರಿಮೆಯ ಬಾವುಟವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾರಿಸಿ ನಮಗೆಲ್ಲ ಗೌರವ ತಂದುಕೊಟ್ಟಿದ್ದಾರೆ. ಅವರು ಇನ್ನಷ್ಟು ಕಾಲ ಸತ್ವಯುತವಾಗಿ ಬರೆಯುತ್ತಾ ಕನ್ನಡದ ಕಂಪನ್ನು ಜಗದಗಲಕ್ಕೆ ಪಸರಿಸುತ್ತಾ ಇರಲಿ ಎಂದು ಹಾರೈಸುತ್ತೇನೆ”, ಎಂದು ಸಿಎಂ ಹೇಳಿದ್ದಾರೆ.

ಉಡುಪಿ:  ಮೇ 22 ರಂದು ನೇರ ಸಂದರ್ಶನ – vishwanews24

Leave a Reply