ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ‘ಪುಣ್ಯಕೋಟಿ ದತ್ತು ಯೋಜನೆ’ ಆರಂಭ : ಬಜೆಟ್ ನಲ್ಲಿ ಬೊಮ್ಮಾಯಿ ಘೋಷಣೆ – Vishwanews24
ಗೋಶಾಲೆಗಳಲ್ಲಿರುವ ಗೋವುಗಳನ್ನು ದತ್ತು ತೆಗೆದುಕೊಳ್ಳುವುದನ್ನು ಪ್ರೋತ್ಸಾಹಿಸುವ ಸಲುವಾಗಿ ‘ಪುಣ್ಯಕೋಟಿ ದತ್ತು ಯೋಜನೆ’ ಆರಂಭ
ರಾಜ್ಯದಲ್ಲಿರುವ ಗೋಶಾಲೆಗಳ ಸಂಖ್ಯೆಯನ್ನು 31ರಿಂದ 100ಕ್ಕೆ ಹೆಚ್ಚಳ , ಈ ಉದ್ದೇಶಕ್ಕೆ ₹ 50 ಕೋಟಿ ಅನುದಾನ..
ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ‘ಪುಣ್ಯಕೋಟಿ ದತ್ತು ಯೋಜನೆ’ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಬೊಮ್ಮಾಯಿ ಅವರು ಇಂದು (ಮಾ.04) ವಿಧಾನಸಭೆಯಲ್ಲಿ 2022–23ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸಿದರು. ಈ ವೇಳೆ ಮಾತನಾಡಿದ ಅವರು, ರಾಜ್ಯದ ಗೋಶಾಲೆಗಳಲ್ಲಿರುವ ಗೋವುಗಳನ್ನು ಸಾರ್ವಜನಿಕರು ಮತ್ತು ಖಾಸಗಿ ಸಂಸ್ಥೆಗಳು ವಾರ್ಷಿಕ ₹ 11,000ಕ್ಕೆ ದತ್ತು ತೆಗೆದುಕೊಳ್ಳುವುದನ್ನು ಪ್ರೋತ್ಸಾಹಿಸುವ ಸಲುವಾಗಿ ‘ಪುಣ್ಯಕೋಟಿ ದತ್ತು ಯೋಜನೆ’ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.
ಗೋವುಗಳ ರಕ್ಷಣೆಗೆ ಬಿಜೆಪಿ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ ಎಂದ ಅವರು, ರಾಜ್ಯದಲ್ಲಿ ಕಳೆದ ವರ್ಷ ಜಾರಿಗೊಳಿಸಲಾಗಿರುವ ಗೋ ಹತ್ಯಾ ನಿಷೇಧ ಅಧಿನಿಯಮ–2020ರ ಹಿನ್ನೆಲೆಯಲ್ಲಿ, ಸದ್ಯ ರಾಜ್ಯದಲ್ಲಿರುವ ಗೋಶಾಲೆಗಳ ಸಂಖ್ಯೆಯನ್ನು 31ರಿಂದ 100ಕ್ಕೆ ಹೆಚ್ಚಿಸಲಾಗುವುದು. ಈ ಉದ್ದೇಶಕ್ಕೆ ₹ 50 ಕೋಟಿ ಅನುದಾನ ನೀಡಲಾಗುವುದು ಎಂದಿದ್ದಾರೆ.
ರಾಜ್ಯದ ಗೋ ತಳಿಗಳ ಸಂರಕ್ಷಣೆಯನ್ನು ಗಮನದಲ್ಲಿರಿಸಿ, ಗೋ ಸಂತತಿಯನ್ನು ಹೆಚ್ಚಿಸುವ ಉದ್ದೇಶದಿಂದ ಕೆಎಂಎಫ್ ಮೂಲಕ 2 ಸಾವಿರ ತಳಿಗಳನ್ನು ರೈತರಿಗೆ ಹಂಚಿಕೆ ಮಾಡಲಾಗುವುದು ಎಂದೂ ಮಾಹಿತಿ ನೀಡಿದ್ದಾರೆ.
