ರಾಜ್ಯದ ಗ್ರಾಮಿಣ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವರಿಂದ ಸಿಹಿಸುದ್ದಿ -Vishwanews24

Featured, ರಾಜ್ಯ ನ್ಯೂಸ್

ರಾಜ್ಯದ ಗ್ರಾಮಿಣ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವರಿಂದ ಸಿಹಿಸುದ್ದಿ -Vishwanews24

ಬೆಂಗಳೂರು : ದೂರದ ಸ್ಥಳಗಳಿಂದ ಶಾಲಾ-ಕಾಲೇಜುಗಳಿಗೆ ತೆರಳುವ ಮಕ್ಕಳು ಸಮಯಕ್ಕೆ ಸರಿಯಾಗಿ ತಲುಪಲು ಅನುಕೂಲವಾಗುವಂತೆ ರಾಜ್ಯದ ಎಲ್ಲ ಭಾಗಗಳಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್‌ಗಳು ಸಂಚರಿಸಲಿವೆ. ಈ ಬಗ್ಗೆ ಸಂಬಂಧಪಟ್ಟ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳಿಗೆ ಸೂಚನೆ ನೀಡಿರುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್ ತಿಳಿಸಿದರು.

ಪ್ರೌಢ ಶಾಲೆ 9 ಮತ್ತು 10ನೇ ತರಗತಿಗಳು, ಪಿಯು ತರಗತಿಗಳು ಪುನಾರಂಭವಾಗಿದ್ದು, ಹಾಜರಾಗುವ ಮಕ್ಕಳ ಸಂಖ್ಯೆ ದಿನೇ ದಿನೇ ಏರುತ್ತಿದೆ. ಹೀಗಾಗಿ, ರಾಜ್ಯದ ಹಲವು ಭಾಗಗಳಲ್ಲಿ ಶಾಲೆ ಸಮಯಕ್ಕೆ ಬಸ್‌ಗಳು ಸಂಚರಿಸುವುದು ಅತ್ಯಗತ್ಯವಾಗಿದೆ. ಕೋವಿಡ್ ಲಾಕ್‌ಡೌನ್ ಪೂರ್ವದಲ್ಲಿ ಶಾಲಾ ಅವಧಿಗೆ ಸರಿಯಾಗಿ ಮಕ್ಕಳು ತಲುಪುವಂತೆ ಬಸ್ ಸಂಚರಿಸುತ್ತಿದ್ದವು. ಈಗ ಅದೇ ರೀತಿ ಬಸ್‌ಗಳು ಸಮಯಕ್ಕೆ ಸರಿಯಾಗಿ ಸಂಚರಿಸಬೇಕು ಎಂದು ಸಚಿವರು ಸೂಚಿಸಿದ್ದಾರೆ.

ತರಗತಿಗಳ ಅವಧಿಗೆ ಸರಿಯಾಗಿ ಬಸ್ ಸಂಚಾರದಿಂದ ಮಕ್ಕಳ ಹಾಜರಾತಿ ಇನ್ನಷ್ಟು ಹೆಚ್ಚಳವಾಗುತ್ತದೆ. ಬಸ್‌ಗಳಲ್ಲಿ ಸಂಚರಿಸುವ ಮಕ್ಕಳು ಕೋವಿಡ್ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು. ಮಕ್ಕಳು ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಸಲಹೆ, ಸೂಚನೆಗಳನ್ನು ನಿರ್ವಾಹಕರು ನೀಡುತ್ತಿರಬೇಕು ಎಂದು ಸಚಿವ ಬಿ.ಸಿ ನಾಗೇಶ್ ತಿಳಿಸಿದರು.

ಇನ್ನು ರಾಜ್ಯ ಸರ್ಕಾರ ಸೆಪ್ಟೆಂಬರ್ 15ರ ಒಳಗಾಗಿ ರಾಜ್ಯದ ಎಲ್ಲಾ ಶಾಲೆಗಳಿಗೆ ಪಠ್ಯ ಪುಸ್ತಕಗಳನ್ನು ತಲುಪಿಸುವ ಗುರಿಯನ್ನು ಹೊಂದಿದೆ. ಈಗಾಗಲೇ ಶೇ 50ಕ್ಕಿಂತ ಹೆಚ್ಚು ಪಠ್ಯ ಪುಸ್ತಕಗಳನ್ನು ಸರಬರಾಜು ಮಾಡಲಾಗಿದೆ. ಶೇ 70ಕ್ಕೂ ಹೆಚ್ಚು ಪಠ್ಯ ಪುಸ್ತಕಗಳು ಮುದ್ರಣಗೊಂಡಿದ್ದು, ಸರಬರಾಜಿಗೆ ಸಿದ್ಧವಾಗಿದೆ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಈ ಮೂಲಕ ಶಾಲಾ ಆರಂಭದ ನಂತ್ರ ಪಠ್ಯ ಪುಸ್ತಕಗಳ ನಿರೀಕ್ಷೆಯಲ್ಲಿದ್ದಂತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.