ವರನಟನಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಮನವಿ -Vishwanews24

Featured, ರಾಜ್ಯ ನ್ಯೂಸ್, ಸಿನಿಮಾ

ಬೆಂಗಳೂರು,:ವರನಟ ಡಾ.ರಾಜ್‍ಕುಮಾರ್ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕೆಂದು ಅಖಿಲ ಕರ್ನಾಟಕ ಶಿವರಾಜ್‍ಕುಮಾರ್ ಹಾಗೂ ರಾಜರತ್ನ ಪುನೀತ್‍ರಾಜ್‍ಕುಮಾರ್ ಅಭಿಮಾನಿಗಳ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿಕೊಂಡಿದ್ದಾರೆ.

ಬಿಬಿಎಂಪಿ ಆಡಳಿತ ಪಕ್ಷದ ಮಾಜಿ ನಾಯಕ ಎನ್.ಆರ್.ರಮೇಶ್ ನೇತೃತ್ವದಲ್ಲಿಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾದ ಸಂಘದ ಪದಾಧಿಕಾರಿಗಳು ಈ ಮನವಿ ಮಾಡಿಕೊಂಡಿದ್ದಾರೆ.

ಕನ್ನಡದ ನಾಡು-ನುಡಿಯನ್ನು ಮುಗಿಲೆತ್ತರಕ್ಕೇರಿಸಿದ ಕರ್ನಾಟಕ ರತ್ನ, ಪದ್ಮಭೂಷಣ ಡಾ.ರಾಜ್‍ಕುಮಾರ್ ಅವರಿಗೆ ಭಾರತ ರತ್ನ ನೀಡುವಂತೆ ಶಿಫಾರಸು ಮಾಡುವುದರ ಜತೆಗೆ ಚಾಮರಾಜನಗರ ತಾಲ್ಲೂಕಿಗೆ ಡಾ.ರಾಜ್‍ಕುಮಾರ್ ತಾಲ್ಲೂಕು ಎಂದು ಮರುನಾಮಕರಣ ಮಾಡಬೇಕು ಹಾಗೂ ಮಾಗಡಿ ರಸ್ತೆಯ ಮೆಟ್ರೋ ನಿಲ್ದಾಣಕ್ಕೆ ರಾಜ್‍ಕುಮಾರ್ ನಿಲ್ದಾಣ ಎಂದು ಹೆಸರಿಡುವಂತೆ ಅಭಿಮಾನಿಗಳು ಒತ್ತಾಯಿಸಿದರು.

ಇದೇ ಸಂದರ್ಭದಲ್ಲಿ ಚಿತ್ರರಂಗದಲ್ಲಿ 34 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವ ಕರುನಾಡ ಚಕ್ರವರ್ತಿ ಶಿವರಾಜ್‍ಕುಮಾರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡುವಂತೆಯೂ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಅಭಿಮಾನಿಗಳು ಮನವಿ ಮಾಡಿಕೊಂಡರು.

ಅಭಿಮಾನಿಗಳ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆಶ್ವಾಸನೆ ಈಡೇರಿಸುವ ಭರವಸೆ ನೀಡಿದ್ದಾರೆ ಎಂದು ಎನ್.ಆರ್.ರಮೇಶ್ ತಿಳಿಸಿದ್ದಾರೆ.