ವಿಧಾನ ಪರಿಷತ್ ಉಪಸಭಾಪತಿ ಎಸ್ ಎಲ್ ಧರ್ಮೇಗೌಡ ಆತ್ಮಹತ್ಯೆ : ಬಿ.ಎಸ್ ವೈ ಸೇರಿ ಅನೇಕ ಗಣ್ಯರ ಸಂತಾಪ -Vishwanews24

Featured, ರಾಜ್ಯ ನ್ಯೂಸ್

ವಿಧಾನ ಪರಿಷತ್ ಉಪಸಭಾಪತಿ ಎಸ್ ಎಲ್ ಧರ್ಮೇಗೌಡ ಆತ್ಮಹತ್ಯೆ : ಬಿ.ಎಸ್ ವೈ ಸೇರಿ ಅನೇಕ ಗಣ್ಯರ ಸಂತಾಪ -Vishwanews24

ಬೆಂಗಳೂರು-: ವಿಧಾನ ಪರಿಷತ್ ಉಪಸಭಾಪತಿ ಎಸ್ ಎಲ್ ಧರ್ಮೇಗೌಡ ಅವರು ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣ್ದ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಾವು ರಾಜಕೀಯ ವಲಯದಲ್ಲಿ ಆಘಾತ ಸೃಷ್ಟಿಸಿದೆ.

ಧರ್ಮೇಗೌಡ ಅವರ ಸಾವಿಗೆ ರಾಜಕೀಯ ವಲಯದ ಹಲವು ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಈ ಸಂಗತಿ‌ ಕೇಳಿ ಆಘಾತವಾಗಿದೆ. ಧರ್ಮೇಗೌಡರು ಸಜ್ಜನ, ಸನ್ನಡತೆಯುಳ್ಳವರಾಗಿದ್ದರು. ಅವರನ್ನು ಕಳೆದುಕೊಂಡಿದ್ದು ನಮ್ಮ ರಾಜ್ಯದ ನಷ್ಟ‌. ಅವರ ಕುಟುಂಬ ಹಾಗೂ ಬಂಧುಮಿತ್ರರಿಗೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

ಸಿಎಂ ಬಿ.ಎಸ್ ಯಡಿಯೂರಪ್ಪ ಮೃತರ ಆತ್ಮಕ್ಕೆ ಸದ್ಗತಿ ಕೋರಿದ್ದಾರೆ. ಘಟನೆ ಬಗ್ಗೆ ಹಿರಿಯ ಅಧಿಕಾರಿಗಳಿಂದ ಮಾಹಿತಿ ತರಿಸಿಕೊಳ್ಳುತ್ತಿದ್ದೇನೆ. ಶಾಸಕರಾಗಿ, ಉಪಸಭಾಪತಿಗಳಾಗಿ ಅವರು ಉತ್ತಮ ಜನಮನ್ನಣೆ ಗಳಿಸಿದ್ದರು ಎಂದಿದ್ದಾರೆ.

ಧರ್ಮೇಗೌಡರ ಸಾವಿನ ಸುದ್ದಿ ಕೇಳಿ ದಿಗ್ಭ್ರಮೆಯಾಗಿದೆ. ಇದನ್ನು ನಂಬಲಿಕ್ಕೆ ಸಾಧ್ಯವಾಗುತ್ತಿಲ್ಲ. ಅವರು ನನ್ನ ಸೋದರನಂತೆ ಇದ್ದರು.ಅವರ ದುರಂತ ಅಂತ್ಯ ಅತ್ಯಂತ ದುಃಖವನ್ನುಂಟು ಮಾಡಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಖೇದ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ವಿಧಾನ ಪರಿಷತ್ ಉಪಸಭಾಪತಿ ಶ್ರೀ ಧರ್ಮೇಗೌಡ ರವರ ಅಕಾಲಿಕ ನಿಧನದ ಸುದ್ದಿ ಕೇಳಿ ಆಘಾತವಾಗಿದೆ.ಮೃತರ ಆತ್ಮಕ್ಕೆ ಸದ್ಗತಿ ದೊರಕಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಎಂದು ಬಿಜೆಪಿ ರಾಜ್ಯಾಧ್ಯಕಷ ನಳೀನ್ ಕುಮಾರ್ ಕಟೀಲು ಸಂತಾಪ ವ್ಯಕ್ತಪಡಿಸಿದ್ದಾರೆ