ಶೋಭಾ ಕರಂದ್ಲಾಜೆ ಸೋಲಿನ ಭಯದಿಂದ ಮೋದಿ ಹೆಸರಿನಲ್ಲಿ ಮತ ನೀಡಿ ಎಂದು ಹೇಳುತ್ತಿರುವುದು :ಪ್ರಮೋದ್‌ ಮಧ್ವರಾಜ್‌

Featured, ಉಡುಪಿ

ಉಡುಪಿ: ಕಳೆದ ಬಾರಿ ಮೋದಿ ಅಲೆಯಲ್ಲಿ ಗೆದ್ದವರು ಯಾವುದೇ ಅಭಿವೃದ್ಧಿ ಕೆಲಸ ಮಾಡದೆ ಹೆಸರನ್ನು ಉಳಿಸಿಕೊಳ್ಳಲಿಲ್ಲ. ತನ್ನ ಅಧಿಕಾರಾವಧಿಯಲ್ಲಿ ಜನರ ಸಮಸ್ಯೆಗೆ ಸ್ಪಂದಿಸದೆ ಈಗ ಮೋದಿ ಅವರ ಮುಖ ನೋಡಿ ಮತ ನೀಡಿ ಎಂದು ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರು ಹೇಳುತ್ತಿರುವುದು ತನ್ನ ಸೋಲಿನ ಭಯದಿಂದ ಎಂದು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಪ್ರಮೋದ್‌ ಮಧ್ವರಾಜ್‌ ತಿಳಿಸಿದರು.

ಅವರು ಚಿಕ್ಕಮಗಳೂರಿನ ಉಪ್ಪಳ್ಳಿ ಕ್ರಾಸ್‌ನ ಬಹಿರಂಗ ಚುನಾವಣಾ ಸಭೆಯಲ್ಲಿ ಮತದಾರರನ್ನು ಉದ್ದೇಶಿಸಿ ಮಾತನಾಡಿದರು.

ಮೋದಿ ಅವರೂ ಜನತೆಗೆ ನೀಡಿದ ಭರವಸೆ ಈಡೇರಿಸಿಲ್ಲ. ಶೋಭಾ ಕರಂದ್ಲಾಜೆ ಚಿಕ್ಕಮಗಳೂರಿನ ನೀರಾವರಿ ಸಮಸ್ಯೆ, ನೀರಿನ ಸಮಸ್ಯೆ, ರೈತರ ಸಮಸ್ಯೆಗಾಗಲೀ ಹಾಗೆಯೇ ರಾಷ್ಟ್ರೀಯ ಹೆದ್ದಾರಿ ಸಮಸ್ಯೆಯನ್ನು ಪರಿಹರಿಸುವಲ್ಲಿ ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಎಂದರು.

ಕಸ್ತೂರಿ ರಂಗನ್‌ ವರದಿ ಅನುಷ್ಠಾನದಂತೆ ಅರಣ್ಯ ಒತ್ತುವರಿ ತೆರವುಗೊಳಿಸುವ ಸಂದರ್ಭ ಮೂಲ ನಿವಾಸಿಗಳಿಗೆ ಪುನರ್ವಸತಿ ಕಲ್ಪಿಸದೆ ತೆರವುಗೊಳಿಸಬಾರದೆಂದು ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಲು ವಕೀಲರನ್ನು ನೇಮಕ ಮಾಡುವಲ್ಲಿ ಕ್ರಮ ಕೈಗೊಳ್ಳದೆ ಶೋಭಾ ಅವರು ತನ್ನ ಜವಾಬ್ದಾರಿಯನ್ನು ನಿರ್ವಹಿಸಲು ವಿಫ‌ಲರಾಗಿದ್ದಾರೆ ಎಂದು ಪ್ರಮೋದ್‌ ಹೇಳಿದರು.