ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ , ಬಿಜೆಪಿಗೆ ಬೆಂಬಲ ಘೋಷಿಸಿದ ಎಚ್ .ನಾಗೇಶ್ -Vishwanews24
ಬೆಂಗಳೂರು, ಜುಲೈ 8: ಕಳೆದ ತಿಂಗಳಷ್ಟೇ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದ ಮುಳಬಾಗಿಲು ಪಕ್ಷೇತರ ಶಾಸಕ ಎಚ್ ನಾಗೇಶ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರು ಬಿಜೆಪಿಗೆ ಬೆಂಬಲ ಘೋಷಿಸಿದ್ದಾರೆ.
ಸರ್ಕಾರದ ಬುಡ ಅಲುಗಾಡಲು ಆರಂಭಿಸಿರುವುದರಿಂದ ಮತ್ತು ಅತೃಪ್ತ ಶಾಸಕರ ಗುಂಪಿನಲ್ಲಿ ತಮಗೆ ಸಚಿವ ಸ್ಥಾನ ದೊರೆತಿರುವುದಕ್ಕೆ ಅಸಮಾಧಾನ ಹೆಚ್ಚಾಗಿದೆ ಎಂಬ ಕಾರಣಗಳಿಂದ ಅವರು ರಾಜೀನಾಮೆ ನೀಡಿ ಸಮ್ಮಿಶ್ರ ಸರ್ಕಾರದಿಂದ ಹೊರಬರಲು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ.

ಸಮ್ಮಿಶ್ರ ಸರಕಾರದಲ್ಲಿ ಸಣ್ಣ ಕೈಗಾರಿಕೆ ಸಚಿವರಾಗಿ 20 ದಿನಗಳ ಹಿಂದೆ ಅಧಿಕಾರ ಸ್ವೀಕರಿಸಿದ್ದ ನಾಗೇಶ್ ಇಂದು ಬೆಳಗ್ಗೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಆಯೋಜಿಸಿದ್ದ ಉಪಾಹಾರ ಸಭೆಯಲ್ಲಿ ಭಾಗವಹಿಸಿರಲಿಲ್ಲ. ಅವರು ಇಂದು ಬೆಳಗ್ಗೆ ನೇರವಾಗಿ ರಾಜಭವನಕ್ಕೆ ತೆರಳಿ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಜೊತೆಗೆ ತಾನು ಬಿಜೆಪಿಯನ್ನು ಬೆಂಬಲಿಸುವುದಾಗಿ ಪತ್ರವೊಂದನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ.
ನಾಗೇಶ್ ಅವರಿಗೆ ಸಣ್ಣ ಕೈಗಾರಿಕೆಗಳ ಸಚಿವ ಸ್ಥಾನವನ್ನು ನೀಡಲಾಗಿತ್ತು. ಆದರೆ, ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಸಮ್ಮಿಶ್ರ ಸರ್ಕಾರಕ್ಕೆ ಮತ್ತೊಂದು ಆಘಾತ ನೀಡಿದೆ.

