ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ ಗುಂಡಿಗೆ, ಲಾಠಿ ಏಟಿಗೆ ಹೆದರದ ಕಾಂಗ್ರೆಸ್ ಕಾರ್ಯಕರ್ತರು ನಿಮ್ಮ ಸರ್ಕಾರಕ್ಕೆ ಹೆದರುತ್ತಾರ : ಸಿದ್ದರಾಮಯ್ಯ – Vishwnaews24
ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ ಗುಂಡಿಗೆ, ಲಾಠಿ ಏಟಿಗೆ ಹೆದರದ ಕಾಂಗ್ರೆಸ್ ಕಾರ್ಯಕರ್ತರು ನಿಮ್ಮ ಸರ್ಕಾರಕ್ಕೆ ಹೆದರುತ್ತಾರ..
ಇ.ಡಿ ನೋಟಿಸ್ ಮೂಲಕ ಕಾಂಗ್ರೆಸ್ ನಾಯಕರನ್ನು ಹೆದರಿಸಬಹುದು ಎಂದುಕೊಂಡಿದ್ದರೆ ಅದು ಸಾಧ್ಯವಿಲ್ಲ..
ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬಂದು ದೇಶದ ಕಾನೂನು, ಸಂವಿಧಾನವನ್ನು ಎತ್ತಿ ಹಿಡಿಯುವ ಕೆಲಸ ಮಾಡುತ್ತದೆ..
ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ಒಬ್ಬಂಟಿಗರಲ್ಲ, ಅವರ ಜೊತೆ ಪಕ್ಷದ ಕೋಟ್ಯಂತರ ಕಾರ್ಯಕರ್ತರು ಇದ್ದಾರೆ.
ಬೆಂಗಳೂರು: ಇಡಿ ಮೂಲಕ ಕಾಂಗ್ರೆಸ್ ನಾಯಕರನ್ನು ಹೆದರಿಸಬಹುದು ಎಂದುಕೊಂಡಿದ್ದರೆ ಅದು ಸಾಧ್ಯವಿಲ್ಲ. ಸ್ವಾತಂತ್ರ್ಯ ಹೋರಾಟದಲ್ಲಿ ಬ್ರಿಟಿಷರ ಗುಂಡಿಗೆ, ಲಾಠಿ ಏಟಿಗೆ ಹೆದರದ ಕಾಂಗ್ರೆಸ್ ಕಾರ್ಯಕರ್ತರು ನಿಮ್ಮ ಸರ್ಕಾರಕ್ಕೆ ಹೆದರುತ್ತಾರ ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಎಐಸಿಸಿ ಅಧ್ಯಕ್ಷರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರಿಗೆ ಇ.ಡಿ ನೋಟಿಸ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಬಿಜೆಪಿಯ ದ್ವೇಷ ರಾಜಕಾರಣ ಖಂಡಿಸಿ ಕೆಪಿಸಿಸಿ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಪ್ರಧಾನಿಯಾದ ಮೇಲೆ ಸರ್ಕಾರದ ಎಲ್ಲ ಸ್ವತಂತ್ರ ಸಂಸ್ಥೆಗಳನ್ನು ಅವರ ಕೈಗೊಂಬೆಗಳಾಗಿ ಮಾಡಿಕೊಳ್ಳುತ್ತಿದ್ದಾರೆ. ಅದು ರಿಸರ್ವ್ ಬ್ಯಾಂಕ್, ಸಿಎಜಿ, ಸಿಬಿಐ, ಇ.ಡಿ, ಎನ್ಎಸ್ಎಸ್ಒ ಇವು ಯಾವುದೇ ಇರಬಹುದು. ಈ ಎಲ್ಲಾ ಸಂಸ್ಥೆಗಳು ತಮ್ಮ ತಾಳಕ್ಕೆ ತಕ್ಕಂತೆ ಕುಣಿಯುವಂತೆ ಮಾಡಿಕೊಂಡಿದ್ದಾರೆ. ಇ.ಡಿ ಹಾಗೂ ಆದಾಯ ತೆರಿಗೆ ಇಲಾಖೆಗಳನ್ನು ವಿರೋಧ ಪಕ್ಷದವರ ಮೇಲೆ ಛೂ ಬಿಡುವ ಕೆಲಸ ಮಾಡುತ್ತಿದ್ದಾರೆ. ಸ್ವತಂತ್ರ ಭಾರತದ ಇತಿಹಾಸದಲ್ಲಿ ಯಾವತ್ತೂ ಕೂಡ ಸ್ವಾಯತ್ತ ಸಂಸ್ಥೆಗಳನ್ನು ಈ ರೀತಿ ದುರುಪಯೋಗ ಮಾಡಿಕೊಂಡ ಉದಾಹರಣೆಗಳಿಲ್ಲ ಎಂದು ಕಿಡಿಕಾರಿದರು.
ಇಡಿ, ಸಿಬಿಐ, ಐಟಿ ಈ ಎಲ್ಲಾ ಸಂಸ್ಥೆಗಳು ಮೋದಿ ಅವರಿಗೆ ವಿರುದ್ಧವಾಗಿರುವವರ ಮೇಲೆ ದಾಳಿ ಮಾಡಬೇಕು, ಅವರ ಮೇಲೆ ಮೊಕದ್ದಮೆಗಳನ್ನು ಹಾಕಬೇಕಿದೆ. ಇಂದು ದೇಶದ ಪ್ರಗತಿಯ ಅಂಕಿ ಅಂಶಗಳು ಯಾರಿಗೂ ಸಿಗಬಾರದು ಎಂದು ಎನ್ಎಸ್ಎಸ್ ಅನ್ನು ನಿಷ್ಕ್ರಿಯಗೊಳಿಸಿದ್ದಾರೆ. ಯೋಜನಾ ಆಯೋಗವನ್ನು ತೆಗೆದು ಹಾಕಿ ತಮಗೆ ಬೇಕಾದಂತೆ ಕುಣಿಯುವ ನೀತಿ ಆಯೋಗವನ್ನು ರಚನೆ ಮಾಡಿದ್ದಾರೆ. ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ಮೇಲೆ ಸಂವಿಧಾನದ ಎಲ್ಲ ಸಂಸ್ಥೆಗಳನ್ನು ತಮ್ಮ ಕೈಗೊಂಬೆ ಮಾಡಿಕೊಂಡು, ಪ್ರಜಾಪ್ರಭುತ್ವವನ್ನು ಹತ್ತಿಕ್ಕುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಇಂದು ಸಾಂಕೇತಿಕವಾಗಿ ಮುಷ್ಕರ ಆರಂಭವಾಗಿದೆ. ಕಾಂಗ್ರೆಸ್ನ ಕೋಟ್ಯಂತರ ಕಾರ್ಯಕರ್ತರು ಬೀದಿಗೆ ಇಳಿದು ಸರ್ಕಾರ ನಡೆಯದಂತೆ ಹೋರಾಟ ಮಾಡುತ್ತಾರೆ. ಎಲ್ಲ ಸರ್ಕಾರಿ ಕಚೇರಿಗಳನ್ನು ಬಂದ್ ಮಾಡಬೇಕಾಗುತ್ತದೆ. ಇಂದು ಇಡಿ ಮುತ್ತಿಗೆ ಹಾಕುತ್ತಿದ್ದೇವೆ, ಈ ಹೋರಾಟ ನಿರಂತರವಾಗಿ ನಡೆಯುತ್ತದೆ. ಈಗಾಗಲೇ ಅನೇಕ ಜನರ ಮೇಲೆ ಇ.ಡಿ ದಾಳಿ ಮಾಡಿಸಿದ್ದಾರೆ ಮತ್ತು ಇನ್ನೂ ಯಾರ ಮೇಲೆ ದಾಳಿಗೆ ಬಿಡೋದು ಎಂದು ಹುಡುಕುತ್ತಾ ಇದ್ದಾರೆ. ನಮಗೆ ಸಂವಿಧಾನ, ಸುಪ್ರೀಂಕೋರ್ಟ್, ಹೈಕೋರ್ಟ್ ಇದೆ. ಅಲ್ಲಿ ನ್ಯಾಯ ಕೇಳುತ್ತೇವೆ. ನರೇಂದ್ರ ಮೋದಿ ಅವರೇ ಕಾಂಗ್ರೆಸ್ನವರನ್ನು ಹೆದರಿಸುವ ಹುಚ್ಚು ಸಾಹಸ ಬಿಡಿ. ಇಲ್ಲದಿದ್ದರೆ ನಿಮಗೆ ಕಾಂಗ್ರೆಸ್ ಕಾರ್ಯಕರ್ತರು ತಕ್ಕ ಶಾಸ್ತಿ ಮಾಡುತ್ತಾರೆ ಎಂಬ ಎಚ್ಚರಿಕೆ ನೀಡಲು ಬಯಸುತ್ತೇನೆ. ದೇಶದ ಆರ್ಥಿಕತೆ ಪಾತಾಳಕ್ಕಿಳಿದಿದೆ, ಭ್ರಷ್ಟಾಚಾರ ಮುಗಿಲು ಮುಟ್ಟಿದೆ, ಇದನ್ನು ಮುಚ್ಚಿಡಲು ಇ.ಡಿ ಮುಂದೆಬಿಟ್ಟು ನಮ್ಮನ್ನು ಬೆದರಿಸುತ್ತೀರ ಮೋದಿ ಅವರೇ? ನೀವು ಶಾಶ್ವತವಾಗಿ ಅಧಿಕಾರದಲ್ಲಿ ಗೂಟ ಹೊಡೆದುಕೊಂಡ ಕೂರಲು ಆಗಲ್ಲ. ಇದಕ್ಕೆ ಅವಕಾಶವನ್ನು ನಾವು ಕೊಡಲ್ಲ. ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬಂದು ದೇಶದ ಕಾನೂನು, ಸಂವಿಧಾನವನ್ನು ಎತ್ತಿ ಹಿಡಿಯುವ ಕೆಲಸ ಮಾಡುತ್ತದೆ ಎಂದರು.
ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ಒಬ್ಬಂಟಿಗರಲ್ಲ, ಅವರ ಜೊತೆ ಪಕ್ಷದ ಕೋಟ್ಯಂತರ ಕಾರ್ಯಕರ್ತರು ಇದ್ದಾರೆ. ಎಲ್ಲರ ಹಕ್ಕುಗಳನ್ನು ಕಿತ್ತುಕೊಳ್ಳಲು ಅಥವಾ ಹತ್ತಿಕ್ಕಲು ನಿಮ್ಮಿಂದ ಸಾಧ್ಯವಿಲ್ಲ. ನರೇಂದ್ರ ಮೋದಿ ಅವರೇ, ನಿಮ್ಮ ಸಂವಿಧಾನ ವಿರೋಧಿ ನಡೆಯನ್ನು ಬಿಡಿ. 2015ರಲ್ಲಿ ಮುಕ್ತಾಯವಾದ ಕೇಸಿಗೆ ಮರು ಚಾಲನೆ ನೀಡಿದ ನಿಮ್ಮ ದ್ವೇಷ ರಾಜಕಾರಣಕ್ಕೆ ನಮ್ಮ ಧಿಕ್ಕಾರವಿದೆ. ನಾವೆಲ್ಲ ಕಲ್ಲು ಬಂಡೆಗಳಂತೆ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರ ಜೊತೆ ನಿಲ್ಲೋಣ. ಈ ಅನ್ಯಾಯವನ್ನು ಖಂಡಿಸೋಣ ಎಂದು ಕರೆ ನೀಡಿದರು.
