ಹಿಂದೂ ಧರ್ಮಕ್ಕೆ ಕಳಂಕ ತಂದ ಕಾಂಗ್ರೆಸ್ ಗೆ ಜನ ಬುದ್ದಿ ಕಲಿಸಬೇಕು: ಅಮಿತ್ ಶಾ
ಬೆಂಗಳೂರು: ಹಿಂದೂ ಭಯೋತ್ಪಾದನೆ– ಕೇಸರಿ ಭಯೋತ್ಪಾದನೆ’ ಎಂದು ಹೇಳುವ ಮೂಲಕ ಕಾಂಗ್ರೆಸ್ ನಾಯಕರು ಹಿಂದೂ ಧರ್ಮದ ಪಾವಿತ್ರ್ಯವನ್ನು ಹಾಳು ಮಾಡುತ್ತಿದ್ದಾರೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಆರೋಪಿಸಿದ್ದಾರೆ. ಹಿಂದೂ ಧರ್ಮಕ್ಕೆ ಭಯೋತ್ಪಾದನೆಯ ಕಳಂಕ ಅಂಟಿಸಿದ ಕಾಂಗ್ರೆಸ್ ಗೆ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಬುಧವಾರ ನಡೆದ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರ ಸಭೆಯಲ್ಲಿ ಮಾತನಾಡಿದ ಅವರು, ಮೆಕ್ಕಾ ಮಸೀದಿ ಬಾಂಬ್ ಸ್ಫೋಟದ ಆರೋಪಿಗಳನ್ನು ನಿರ್ದೋಷಿಗಳೆಂದು ನ್ಯಾಯಾಲಯ ಬಿಡುಗಡೆ ಮಾಡಿದೆ. ಬಾಂಬ್ ಸ್ಫೋಟ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷ ಹಿಂದೂ ಧರ್ಮವನ್ನು ಎಳೆದು ತಂದಿತು. ಧರ್ಮ ಮತ್ತು ಸಂಸ್ಕೃತಿಗೆ ಅವಮಾನ ಮಾಡಿದ ಕಾರಣಕ್ಕೆ ಕರ್ನಾಟಕದ ಜನತೆ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ. ಮನೆ ಬಾಗಿಲಿಗೆ ಮತ ಕೇಳಲು ಬರುವ ಕಾಂಗ್ರೆಸ್ ನಾಯಕರನ್ನು ಈ ಬಗ್ಗೆ ಪ್ರಶ್ನಿಸಬೇಕು ಎಂದು ಶಾ ಹೇಳಿದರು.
ಬಿಜೆಪಿಯ ವಿಜಯರಥ ಕರ್ನಾಟಕ ತಲುಪಿದೆ. ಇಲ್ಲಿ ಪಕ್ಷ ವಿಜಯ ಸಾಧಿಸಲಿದೆ. ಇದರಿಂದ ದಕ್ಷಿಣದ ರಾಜ್ಯಗಳಾದ ತಮಿಳುನಾಡು, ಆಂಧ್ರ ಪ್ರದೇಶ, ಕೇರಳ ಮತ್ತು ತೆಲಂಗಾಣಕ್ಕೆ ದಾರಿ ಮಾಡಲಿದೆ ಎಂದು ಶಾ ತಿಳಿಸಿದರು.
ಭಯೋತ್ಪಾದನೆಗೆ ಯಾವುದೇ ಧರ್ಮ, ಜಾತಿ ಇರುವುದಿಲ್ಲ. ಭಯೋತ್ಪಾದನೆಯೇ ಖಂಡನಾರ್ಹ. ಇದನ್ನು ಅರಿಯದೇ ಹಿಂದೂ ಭಯೋತ್ಪಾದನೆ ಎಂದು ಹೇಳಿಕೆ ನೀಡುವುದು ಸರಿಯಲ್ಲ. ಇನ್ನಾದರೂ ಅವರು ಇಂತಹ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು ಎಂದರು.
