370ನೇ ವಿಧಿ ರದ್ಧು : ಅಧಿಕಾರವನ್ನು ಹೀಗೆ ದುರುಪಯೋಗ ಪಡಿಸಿಕೊಂಡಿರುವುದು ನಮ್ಮ ದೇಶದ ರಾಷ್ಟ್ರೀಯ ಭದ್ರತೆಯ ಮೇಲೆ ದುಷ್ಪರಿಣಾಮಗಳನ್ನು ಉಂಟು ಮಾಡಲಿದೆ : ರಾಹುಲ್ ಗಾಂಧಿ -Vishwanews24

Featured, ರಾಷ್ಟ್ರ ನ್ಯೂಸ್

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಿಂದ ಲಡಾಖ್ ವಿಭಜಿಸಿ ಎರಡು ಕೇಂದ್ರಾಡಳಿತ ಪ್ರದೇಶಗಳನ್ನು ರೂಪಿಸುವ ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿ ರದ್ದತಿ ಕುರಿತು  ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ‘ಜನರು ನಿಮಗೆ ಕೊಟ್ಟ ಅಧಿಕಾರವನ್ನು ಕೆಟ್ಟದಾಗಿ ಬಳಸಿದ್ದೀರಿ. ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಹರಿದುಹಾಕಿದ್ದೀರಿ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಏಕಪಕ್ಷೀಯವಾಗಿ ಕಾಶ್ಮೀರವನ್ನು ಹರಿದುಹಾಕಿದ್ದರಿಂದ, ಅಲ್ಲಿನ ಚುನಾಯಿತ ಪ್ರತಿನಿಧಿಗಳನ್ನು ಬಂಧಿಸಿದ್ದರಿಂದ, ಸಂವಿಧಾನದ ಆಶಯಗಳನ್ನು ಉಲ್ಲಂಘಿಸಿದ್ದರಿಂದ ರಾಷ್ಟ್ರೀಯ ಏಕತೆ ವೃದ್ಧಿಯಾಗಿಲ್ಲ. ಈ ದೇಶವು ಜನರಿಂದ ರೂಪುಗೊಂಡಿದೆ. ಭೂಮಿಯ ತುಂಡುಗಳಿಂದ ಅಲ್ಲ’ ಎಂದು ಟ್ವೀಟ್ ಮಾಡಿದ್ದಾರೆ.

ಜಮ್ಮುಕಾಶ್ಮೀರ ಜನತೆಯ ಹಿತಾಸಕ್ತಿಯನ್ನು ಕಡೆಗಣಿಸಿ ಸಂವಿಧಾನವನ್ನು ಉಲ್ಲಂಘಿಸಿ ಕೇಂದ್ರ ಸರ್ಕಾರ ಈ ಏಕಪಕ್ಷೀಯ ನಿರ್ಧಾರ ಕೈಗೊಂಡಿದೆ. ಈ ದೇಶ ಜನರಿಂದ ಸೃಷ್ಟಿಯಾಗಿದೆ ಹೊರತು ಯಾವುದೇ ನಿರ್ಧಿಷ್ಟ ಪ್ರದೇಶದಿಂದಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಸಂವಿಧಾನ ಪ್ರದತ್ತವಾದ ಅಧಿಕಾರವನ್ನು ಉಲ್ಲಂಘಿಸಿ ದುರುಪಯೋಗ ಮಾಡಿಕೊಂಡಿರುವುದರಿಂದ ದೇಶದ ಭದ್ರತೆ ಮೇಲೆ ಅದು ಗಂಭೀರ ಪರಿಣಾಮ ಬೀರುತ್ತದೆ ಎಂದು ಅವರು ಟ್ವೀಟ್‍ನಲ್ಲಿ ಆತಂಕ ವ್ಯಕ್ತಪಡಿಸಿದರು.

 

ಅಧಿಕಾರವನ್ನು ಹೀಗೆ ದುರುಪಯೋಗಪಡಿಸಿಕೊಂಡಿರುವುದು ನಮ್ಮ ದೇಶದ ರಾಷ್ಟ್ರೀಯ ಭದ್ರತೆಯ ಮೇಲೆ ದೂರಗಾಮಿ ದುಷ್ಪರಿಣಾಮಗಳನ್ನು ಉಂಟು ಮಾಡಲಿದೆ’ ಎಂದು ಅವರು ಎಚ್ಚರಿಸಿದ್ದಾರೆ.