5 ಲಕ್ಷ ಹೆಕ್ಟೇರ್ ಜಮೀನು ಅನ್ನು 15 ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ರೈತರಿಗೆ ಹಂಚಲಾಗುವುದು : ಕಂದಾಯ ಸಚಿವ – Vishwanews24
5 ಲಕ್ಷ ಹೆಕ್ಟೇರ್ ಜಮೀನು ಅನ್ನು 15 ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ರೈತರಿಗೆ ಹಂಚಲಾಗುವುದು,..
ಅರಣ್ಯ ಇಲಾಖೆ ವಶದಲ್ಲಿದ್ದ 6 ಲಕ್ಷ ಹೆಕ್ಟೇರ್ ಭೂಮಿ ಕಂದಾಯ ಇಲಾಖೆಗೆ ಹಸ್ತಾಂತರ..
ಬೆಂಗಳೂರು: ಅರಣ್ಯ ಇಲಾಖೆಯಿಂದ ಕಂದಾಯ ಇಲಾಖೆಗೆ 6 ಲಕ್ಷ ಹೆಕ್ಟೇರ್ ಭೂಮಿ ಹಸ್ತಾಂತರವಾಗಲಿದ್ದು, ಈ ಪೈಕಿ ಸುಮಾರು 5 ಲಕ್ಷ ಹೆಕ್ಟೇರ್ ಅನ್ನು 15 ವರ್ಷಗಳಿಂದ ಸಾಗುವಳಿ ಮಾಡುತ್ತಿರುವವರಿಗೆ ಹಂಚಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ಮೊದಲು ಡೀಮ್ಡ್ ಫಾರೆಸ್ಟ್ ಎಂದು ಗುರುತಿಸಿ ಅರಣ್ಯ ಇಲಾಖೆ ವಶದಲ್ಲಿದ್ದ 6 ಲಕ್ಷ ಹೆಕ್ಟೇರ್ ಭೂಮಿ ಈಗ ಕಂದಾಯ ಇಲಾಖೆಗೆ ಹಸ್ತಾಂತರ ವಾಗಲಿದೆ ಎಂದು ಹೇಳಿದರು.
ಇಲಾಖೆಯು ತನ್ನ ಅಗತ್ಯಕ್ಕೆ ಬೇಕಾದ ಭೂಮಿ ಯನ್ನು ಹೊರತುಪಡಿಸಿ ಉಳಿದ ಭೂಮಿಯನ್ನು ರೈತರಿಗೆ ಹಂಚಲಿದೆ. ಈ ಮೂಲಕ ಮೈಸೂರು, ಚಾಮರಾಜನಗರ, ಶಿವಮೊಗ್ಗ ಸಹಿತ ರಾಜ್ಯಾದ್ಯಂತ ಇರುವ ಬಗರ್ ಹುಕುಂ ಸಮಸ್ಯೆಗೆ ಶಾಶ್ವತ ತೆರೆ ಬೀಳಲಿದೆ ಎಂದು ತಿಳಿಸಿದರು.
ಕಂದಾಯ ಇಲಾಖೆಗೆ ಮರಳಿ ಬರುವ ಪೈಕಿ ಎಷ್ಟು ಪ್ರಮಾಣದ ಭೂಮಿ ಸರಕಾರದ ಅಗತ್ಯಕ್ಕೆ ಬೇಕು ಎಂದು ಗುರುತಿಸಲಾಗುತ್ತಿದ್ದು, ಆಸ್ಪತ್ರೆ ಸಹಿತ ಸಾರ್ವಜನಿಕ ಸೇವೆಯ ಕಟ್ಟಡಗಳಿಗೆ ಇದು ಬಳಕೆಯಾಗಲಿದೆ ಎಂದರು.
