ಇದು ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವಿರೋಧಿ ಸರ್ಕಾರವಾಗಿದ್ದು, ಅಧಿಕಾರದಲ್ಲಿ ಮುಂದುವರಿಯುವ ನೈತಿಕ್ತೆ ಇಲ್ಲ : ಡಿ.ಕೆ ಶಿ -Vishwanews24

Featured, ರಾಜ್ಯ ನ್ಯೂಸ್

ಇದು ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವಿರೋಧಿ ಸರ್ಕಾರವಾಗಿದ್ದು, ಅಧಿಕಾರದಲ್ಲಿ ಮುಂದುವರಿಯುವ ನೈತಿಕ್ತೆ ಇಲ್ಲ : ಡಿ.ಕೆ ಶಿ -Vishwanews24

ಬೆಂಗಳೂರು : ದಲಿತರ ಅಭಿವೃದ್ಧಿಗಾಗಿ ಮೀಸಲಿಟ್ಟ ಹಣವನ್ನು ರಾಜ್ಯ ಸರ್ಕಾರ ಫ್ಲೈಓವರ್ ಕಾಮಗಾರಿಗೆ ಬಳಸಿರುವುದು ಈ ವರ್ಗದ ಜನರ ಬಗ್ಗೆ ಬಿಜೆಪಿ ಸರ್ಕಾರಕ್ಕಿರುವ ಬದ್ಧತೆಯನ್ನು ತೋರುತ್ತದೆ. ಇದು ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವಿರೋಧಿ ಸರ್ಕಾರವಾಗಿದ್ದು, ಅಧಿಕಾರದಲ್ಲಿ ಮುಂದುವರಿಯುವ ನೈತಿಕ್ತೆ ಇಲ್ಲ. ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹಾಗೂ ಸಚಿವ ಶ್ರೀರಾಮುಲು ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಗ್ರಹಿಸಿದ್ದಾರೆ.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಇಡಿ ಭಾರತದ ಇತಿಹಾಸದಲ್ಲಿ ಬೆಳಗಾವಿ ಅಧಿವೇಶನದಲ್ಲಿ ನಮ್ಮ ಸರ್ಕಾರ ಸಂವಿಧಾನಾತ್ಮಕವಾಗಿ ಕಾನೂನು ಜಾರಿಗೆ ತಂದಿದ್ದೆವು. 30 ಸಾವಿರ ಕೋಟಿ ಹಣವನ್ನು ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಅಭಿವೃದ್ಧಿಗೆ ಮೀಸಲಿಟ್ಟು ಆ ಹಣವನ್ನು ಅವರಿಗಾಗಿಯೇ ಖರ್ಚು ಮಾಡಲು ನಾವು ಕಾನೂನು ರೂಪಿಸಿದ್ದೆವು ಎಂದರು.

ಕಳೆದ ಬಜೆಟ್ ನಲ್ಲಿ ಇದು 17 ಸಾವಿರ ಕೋಟಿಗೆ ಇಳಿದಿತ್ತು. ಆರ್ಥಿಕ ಸಂಪನ್ಮೂಲ ಕೊರತೆ ಪರಿಸ್ಥಿತಿ ಅರಿತು ನಾವು ಈ ಬಗ್ಗೆ ಮಾತನಾಡಿರಲಿಲ್ಲ. ಈಗ 10 ಸಾವಿರ ಕೋಟಿಗೆ ಬಂದಿದ್ದು, ಜತೆಗೆ ಆ ಹಣವನ್ನು ಬೇರೆ ಇಲಾಖೆಗೆ ವರ್ಗಾವಣೆ ಮಾಡಿದೆ. ಇದು ಬಿಜೆಪಿಯು ಅಲ್ಪಸಂಖ್ಯಾತರು, ಹಿಂದುಳಿದವರು ಹಾಗೂ ದಲಿತರ ವಿಚಾರವಗಿ ಬದ್ಧತೆ ಹೊಂದಿಲ್ಲ ಎಂಬುದಕ್ಕೆ ಸಾಕ್ಷಿ ಎಂದರು.

ಕಾರಜೋಳ ಅವರು ಹಾಗೂ ಶ್ರೀರಾಮುಲು ಅವರಿಗೆ ಸ್ವಾಭಿಮಾನ ಇದ್ದರೆ ಕೂಡಲೇ ರಾಜೀನಾಮೆ ನೀಡಬೇಕು. ಕಾರಜೋಳ ಅವರು ಉಪಮುಖ್ಯಮಂತ್ರಿಯಾಗಿ ಅವರ ಧ್ವನಿ ಕಳೆದುಕೊಂಡಿದ್ದಾರೆ. ಬಿಜೆಪಿಯ ದಲಿತ ವಿರೋಧಿ ನೀತಿಯನ್ನು ಇವರಿಂದ ತಡೆಯಲು ಸಾಧ್ಯವಾಗಿಲ್ಲ. ಈ ಇಬ್ಬರ ಸಮ್ಮತಿ ಇಲ್ಲದೆ ಈ ಇಲಾಖೆ ಹಣವನ್ನು ವರ್ಗಾವಣೆ ಮಾಡಲು ಸಾಧ್ಯವಿಲ್ಲ. ಇದು ದಲಿತ ವಿರೋಧಿ ಸರ್ಕಾರವಾಗಿದ್ದು, ಇದು ಅಧಿಕಾರದಲ್ಲಿ ಮುಂದುವರಿಯಲು ಯಾವುದೇ ನೈತಿಕತೆ ಇಲ್ಲ ಎಂಬುದಾಗಿ ಕಿಡಿಕಾರಿದರು.

ಈ ಭಾಗದಲ್ಲಿ ಕಾಂಗ್ರೆಸ್ ಶಾಸಕರು ಹೆಚ್ಚಾಗಿದ್ದಾರೆ. ಹೀಗಾಗಿ ಕಲ್ಯಾಣ ಕರ್ನಾಟಕಕ್ಕೆ ನಿಗದಿ ಮಾಡಿರುವ 1500 ಕೋಟಿ ಹಣ ಬಿಡುಗಡೆ ಮಾಡಿದರೆ ನಮ್ಮ ಶಾಸಕರಿಗೆ ಅನುಕೂಲವಾಗುತ್ತದೆ ಎಂಬ ಉದ್ದೇಶದಿಂದ ಬಿಜೆಪಿ ಸರ್ಕಾರ ಈ ಭಾಗವನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿದ್ದಾರೆ ಎಂದರು.