ಉಡುಪಿ ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಸರ್ಕಾರದ ಚಿಂತನೆ : ಡಿಸಿಎಂ ಡಾ.ಜಿ.ಪರಮೇಶ್ವರ್ – vishwanews24
ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಭಾಗದ ಅಭಿವೃದ್ಧಿ, ಪ್ರವಾಸೋದ್ಯಮಕ್ಕೆ ಆದ್ಯತೆ : ಡಿಸಿಎಂ ಡಾ.ಜಿ.ಪರಮೇಶ್ವರ್
ಉಡುಪಿ : ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಬೆಳಪು ಗ್ರಾಮದಲ್ಲಿರುವ ಮಂಗಳೂರು ವಿಶ್ವವಿದ್ಯಾನಿಲಯದ ‘ಸ್ನಾತಕೋತ್ತರ ಅಧ್ಯಯನ ಮತ್ತು ಅತ್ಯಾಧುನಿಕ ಸಂಶೋಧನಾ ಕೇಂದ್ರ’ದ ಕಟ್ಟಡವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಕುರಿತು ಸರ್ಕಾರದ ಹಂತದಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಸುಮಾರು 53.85 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ಈ ಕಟ್ಟಡವನ್ನು ಪರಿಶೀಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಲವು ವರ್ಷಗಳಿಂದ ಬಳಕೆಯಾಗದೆ ಖಾಲಿ ಬಿದ್ದಿರುವ ಕಟ್ಟಡ ಮತ್ತು ಕ್ಯಾಂಪಸ್ ಅನ್ನು ಸೂಕ್ತ ಉದ್ದೇಶಗಳಿಗೆ ಬಳಸುವ ಬಗ್ಗೆ ಪರಿಶೀಲನೆ ನಡೆಯುತ್ತಿದೆ ಎಂದು ಹೇಳಿದರು.
ಇದನ್ನೂ ಓದಿ :
ಕರಾವಳಿಯ ವಾತಾವರಣ ಕೆಡಿಸಲು ಹಾಗೂ ವೋಟ್ ಬ್ಯಾಂಕ್ಗಾಗಿ ಕ್ಯಾಬಿನಟ್ ಸಭೆ : ಯತ್ನಾಳ್ ಲೇವಡಿ – vishwanews24
2014–15ರ ಬಜೆಟ್ನಲ್ಲಿ ಮಂಗಳೂರಿನಲ್ಲಿ ವಿಜ್ಞಾನ ಕೇಂದ್ರ ಸ್ಥಾಪಿಸುವ ಘೋಷಣೆ ಮಾಡಲಾಗಿತ್ತು. ಕೇಂದ್ರ ಸರ್ಕಾರದ ರೂಸಾ (RUSA) ಯೋಜನೆಯಡಿ ಈ ಯೋಜನೆ ಅನುಷ್ಠಾನಗೊಳ್ಳಬೇಕಾಗಿದ್ದರೂ, ಯೋಜನೆ ಸ್ಥಗಿತಗೊಂಡ ಹಿನ್ನೆಲೆಯಲ್ಲಿ ಕಾಮಗಾರಿ ಅರ್ಧಕ್ಕೆ ನಿಂತಿದೆ ಎಂದು ವಿವರಿಸಿದರು.
ರಾಜ್ಯದಲ್ಲಿ ಕ್ರೀಡಾ ವಿಶ್ವವಿದ್ಯಾನಿಲಯ ಸ್ಥಾಪಿಸುವ ಚಿಂತನೆ ಇದ್ದು, ಅದು ಇಲ್ಲಿ ಸಾಧ್ಯವೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ. ಜೊತೆಗೆ ಉಡುಪಿ ಜಿಲ್ಲೆಗೆ ವೈದ್ಯಕೀಯ ಕಾಲೇಜು ಸ್ಥಾಪಿಸುವ ಸಾಧ್ಯತೆಯನ್ನೂ ಅಧ್ಯಯನ ಮಾಡಲಾಗುತ್ತಿದೆ ಎಂದು ಹೇಳಿದರು.
ಕರಾವಳಿಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಭಾಗದ ಜ್ವಲಂತ ಸಮಸ್ಯೆಗಳು, ಅಭಿವೃದ್ಧಿ ಯೋಜನೆಗಳು ಮತ್ತು ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಮಹತ್ವದ ವಿಷಯಗಳ ಕುರಿತು ಚರ್ಚಿಸಿ ಅಗತ್ಯ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ಡಿಸಿಎಂ ತಿಳಿಸಿದರು.
ಇದನ್ನೂ ಓದಿ :
ಕರ್ನಾಟಕದ ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮಕ್ಕೆ ಅಪಾರ ಅವಕಾಶಗಳಿದ್ದು, ಉಡುಪಿಯಲ್ಲಿ ನಡೆಯುವ ಅಂತಾರಾಷ್ಟ್ರೀಯ ಸರ್ಫಿಂಗ್ ಸೇರಿದಂತೆ ವಿವಿಧ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಮೂಲಕ ಉದ್ಯೋಗ ಮತ್ತು ಆರ್ಥಿಕ ಚಟುವಟಿಕೆಗಳನ್ನು ಹೆಚ್ಚಿಸುವ ಉದ್ದೇಶ ಸರ್ಕಾರಕ್ಕಿದೆ ಎಂದರು.
ದೊಡ್ಡ ಕೈಗಾರಿಕೆಗಳಿಗಿಂತ ಸಾಫ್ಟ್ ಇಂಡಸ್ಟ್ರಿಗಳನ್ನು ಕರಾವಳಿ ಭಾಗಕ್ಕೆ ತರಲು ಪ್ರಯತ್ನಿಸಲಾಗುವುದು ಎಂದು ಅವರು ಹೇಳಿದರು.
ಉಡುಪಿ ಕ್ರೀಡಾಂಗಣ, ಮಂಗಳೂರಿನ ಮಂಗಳ ಸ್ಟೇಡಿಯಂ ಸೇರಿದಂತೆ ಕರಾವಳಿ ಭಾಗದ ಪ್ರಮುಖ ಕ್ರೀಡಾಂಗಣಗಳ ಅಭಿವೃದ್ಧಿ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಗತ್ಯ ನಿರ್ಧಾರಗಳನ್ನು ಕೈಗೊಳ್ಳಲಾಗುವುದು ಎಂದು ಡಾ. ಪರಮೇಶ್ವರ್ ತಿಳಿಸಿದರು.
ಸೆ.21, 22 ಮತ್ತು 23ರಂದು ನಡೆಯಲಿರುವ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಕಸ್ತೂರಿ ರಂಗನ್ ವರದಿ ಹಾಗೂ ರಾಜ್ಯದಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯ ಕುರಿತು ಸಮಗ್ರ ಚರ್ಚೆ ನಡೆಯಲಿದೆ. ರೈತರಿಗೆ ಅಗತ್ಯ ನೆರವು ಮತ್ತು ಸರ್ಕಾರ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಈ ಅಧಿವೇಶನದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಡಿಸಿಎಂ ಹೇಳಿದರು.
ಇದನ್ನೂ ಓದಿ :
ಉಡುಪಿ: ವಿದ್ಯಾರ್ಥಿಗಳಿಗೆ MDMA ಮಾರಾಟ: ಇಬ್ಬರ ಬಂಧನ – vishwanews24
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ., ಮಂಗಳೂರು ವಿವಿ ರಿಜಿಸ್ಟ್ರಾರ್ ಸಂತೋಷ್ ಬಿ.ಜಗಲಾಸರ್, ಕರ್ನಾಟಕ ಗೃಹ ಮಂಡಳಿ ಇಂಜಿನಿಯರ್ ಸಹನಾ, ಬೆಳಪು ಪಂಚಾಯಿತಿ ಮಾಜಿ ಅಧ್ಯಕ್ಷರಾದ ದೇವಿಪ್ರಸಾದ್ ಶೆಟ್ಟಿ, ಗುತ್ತಿಗೆದಾರ ವಾಸುದೇವ್ ಶೆಟ್ಟಿ ಮುಂತಾದವರು ಇದ್ದರು.
