ಉಪ ಚುನಾವಣೆ: ಕಾಂಗ್ರೆಸ್ ಪಕ್ಷ ಅತೀ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ: ಸಿದ್ದರಾಮಯ್ಯ -Vishwanews24
ಕಲಬುರಗಿ: ಉಪ ಚುನಾವಣೆಯ ನಂತರ ಕಾಂಗ್ರೆಸ್ ಪಕ್ಷ ಅತೀ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಬಿಜೆಪಿ ಸರ್ಕಾರ ಪತನವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.
ಈ ಕುರಿತು ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಡಿ.5ರಂದು 15 ಕ್ಷೇತ್ರಗಳಲ್ಲಿ ನಡೆಯುವ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅತೀ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿಯವರು 15 ಕ್ಷೇತ್ರದಲ್ಲಿ ಸ್ವತಂತ್ರವಾಗಿ ಸ್ಪರ್ಧಿಸುತ್ತೇವೆಂಬ ಹೇಳಿಕೆ ನೀಡಿದ್ದಾರೆ. ಅವರೇ ಮೈತ್ರಿಯ ಬಗ್ಗೆ ಆಸಕ್ತಿಯಿಲ್ಲದ ಮೇಲೆ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯಿಲ್ಲ, ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಏಕಾಂಗಿಯಾಗಿಯೇ ಸ್ಪರ್ಧಿಸಿ ಹೆಚ್ಚು ಸ್ಥಾನ ಗೆಲ್ಲಲಿದೆ ಎಂದರು.
ಬಿಜೆಪಿ ಸರ್ಕಾರದ ಅಣತಿಯಂತೆ ಚುನಾವಣಾ ಆಯೋಗ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿದ ಸಿದ್ದರಾಮಯ್ಯ ರಾಜ್ಯದ ಸ್ಪೀಕರ್ 17 ಜನರನ್ನು ಅನರ್ಹಗೊಳಿಸಿದ್ದಾರೆ, ಆದರೆ ಚುನಾವಣೆ ಆಯೋಗ ಅನರ್ಹ ಶಾಸಕರಿಗೆ ಚುನಾವಣೆಯಲ್ಲಿ ನಿಲ್ಲಲು ಅನುಕೂಲವಾಗುವಂತೆ ಮೊದಲು ಚುನಾವಣೆ ದಿನಾಂಕ ಘೋಷಣೆ ಮಾಡಿ ಸುಪ್ರೀಂಕೋರ್ಟನಲ್ಲಿ ಹೋಗಿ ಅನರ್ಹ ಶಾಸಕರ ಸ್ಪರ್ದೆಗೆ ಯಾವುದೇ ಅಡೆತಡೆಯಿಲ್ಲ ಎಂದು ಹೇಳಿಕೆ ನೀಡಿ ಅನರ್ಹರಿಗೆ ಅನುಕೂಲವಾಗುವಂತೆ ಮಾಡಿರುವುದೇ ಇದಕ್ಕೆ ಸಾಕ್ಷಿ. ನನ್ನ 40 ವರ್ಷದ ರಾಜಕೀಯ ಜೀವನದಲ್ಲಿ ಒಂದು ತಿಂಗಳಿಗಿಂತ ಮುಂಚೆ ದಿನಾಂಕ ಪ್ರಕಟಿಸಿರುವುದು ನಾನೂ ಎಂದು ನೋಡಿಲ್ಲ ಎಂದರು.
