ಐಸಿಐಸಿಐ ಬ್ಯಾಂಕ್‌ ಸಾಲ ವಂಚನೆ ಪ್ರಕರಣ : ವಿಡಿಯೊಕಾನ್ ಗ್ರೂಪ್ ಅಧ್ಯಕ್ಷ ವೇಣುಗೋಪಾಲ್ ಧೂತ್  ಬಂಧನ – Vishwanews24

Featured, ರಾಷ್ಟ್ರ ನ್ಯೂಸ್

ಐಸಿಐಸಿಐ ಬ್ಯಾಂಕ್‌ ಸಾಲ ವಂಚನೆ ಪ್ರಕರಣ : ವಿಡಿಯೊಕಾನ್ ಗ್ರೂಪ್ ಅಧ್ಯಕ್ಷ ವೇಣುಗೋಪಾಲ್ ಧೂತ್  ಬಂಧನ

ಮುಂಬೈ: ಐಸಿಐಸಿಐ ಬ್ಯಾಂಕ್‌ ಸಾಲ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೊಕಾನ್ ಗ್ರೂಪ್ ಅಧ್ಯಕ್ಷ ವೇಣುಗೋಪಾಲ್ ಧೂತ್ ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಎಎನ್‌ಐ ಟ್ವೀಟಿಸಿದೆ.

ಇತ್ತೀಚೆಗೆ, ಐಸಿಐಸಿಐ ಬ್ಯಾಂಕ್‌ನ ಮಾಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಮತ್ತು ವ್ಯವಸ್ಥಾಪಕ ನಿರ್ದೇಶಕಿ ಚಂದಾ ಕೊಚ್ಚರ್‌, ಅವರ ಗಂಡ ದೀಪಕ್‌ ಕೊಚ್ಚರ್‌ ಅವರನ್ನು ಸಿಬಿಐ ಬಂಧಿಸಿತ್ತು. ಬಳಿಕ ಮುಂಬೈನ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿ 3 ದಿನಗಳ ಕಸ್ಟಡಿಗೆ ಪಡೆದಿತ್ತು. ಇದಾದ ಎರಡೇ ದಿನಗಳಲ್ಲಿ ಸಿಬಿಐ ವೇಣುಗೋಪಾಲ್ ಅವರನ್ನು ಬಂಧಿಸಿದೆ.

ಐಸಿಐಸಿಐ ಬ್ಯಾಂಕ್‌ನ ಕ್ರೆಡಿಟ್ ಪಾಲಿಸಿ, ಆರ್‌ಬಿಐ ಮಾರ್ಗಸೂಚಿ ಮತ್ತು ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿ ವಿಡಿಯೊಕಾನ್ ಗ್ರೂಪ್‌ನ ಕಂಪನಿಗಳಿಗೆ ₹3,250 ಕೋಟಿ ಸಾಲ ಮಂಜೂರು ಮಾಡಲಾಗಿದೆ ಎಂಬುದು ಸಿಬಿಐ ಆರೋಪವಾಗಿದೆ.

ಕ್ರಿಮಿನಲ್ ಪಿತೂರಿ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಗೆ ಸಂಬಂಧಿಸಿದ ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಚಂದಾ ಕೊಚ್ಚರ್, ಅವರ ಪತಿ ದೀಪಕ್ ಕೊಚ್ಚರ್ ಮತ್ತು ವಿಡಿಯೊಕಾನ್ ಗ್ರೂಪ್‌ನ ವೇಣುಗೋಪಾಲ್ ಧೂತ್, ನ್ಯೂಪವರ್ ರಿನ್ಯೂವಬಲ್ಸ್, ಸುಪ್ರೀಂ ಎನರ್ಜಿ, ವಿಡಿಯೋಕಾನ್ ಇಂಟರ್‌ನ್ಯಾಶನಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಮತ್ತು ವಿಡಿಯೋಕಾನ್ ಇಂಡಸ್ಟ್ರೀಸ್ ಲಿಮಿಟೆಡ್ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿತ್ತು.
ವಿಡಿಯೊಕಾನ್ ಗ್ರೂಪ್, ಐಸಿಐಸಿಐ ಬ್ಯಾಂಕ್‌ನಿಂದ ₹ 3,250 ಕೋಟಿ ಸಾಲ ಪಡೆದ ಕೆಲ ತಿಂಗಳ ನಂತರ ವಿಡಿಯೊಕಾನ್ ಪ್ರವರ್ತಕ ವೇಣುಗೋಪಾಲ್, ನ್ಯೂಪವರ್‌ನಲ್ಲಿ ಕೋಟ್ಯಂತರ ರೂಪಾಯಿ ಹೂಡಿಕೆ ಮಾಡಿದ್ದರು.

ಸುರತ್ಕಲ್ ಜಲೀಲ್ ಹತ್ಯೆ ಪ್ರಕರಣ – ಇದಕ್ಕೆ ಸರ್ಕಾರದ ನಿರ್ಲಕ್ಷ್ಯವೇ ಕಾರಣ : ವಿಮೆನ್ ಇಂಡಿಯಾ ಮೂವ್ಮೆಂಟ್ ಖಂಡನೆ – Vishwanews24

ಆರೋಪಿಯು(ಚಂದಾ ಕೊಚ್ಚರ್) ಐಸಿಐಸಿಐ ಬ್ಯಾಂಕ್‌ಗೆ ವಂಚನೆ ಮಾಡುವ ದೃಷ್ಟಿಯಿಂದ ಇತರರ ಜೊತೆ ಸೇರಿಕೊಂಡು ಖಾಸಗಿ ಕಂಪನಿಗೆ ಸಾಲವನ್ನು ಮಂಜೂರು ಮಾಡಿದ್ದಾರೆ ಎಂಬುದು ಸಿಬಿಐ ಆರೋಪವಾಗಿದೆ.

ಪ್ರಕರಣ ಕುರಿತಂತೆ 2019ರಲ್ಲಿ ಸಿಬಿಐ ಎಫ್‌ಐಆರ್ ದಾಖಲಿಸಿತ್ತು.

Leave a Reply