ಒಂದು ವೇಳೆ ನಾಳೆಯೇ ಚುನಾವಣೆ ನಡೆದರೂ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ; ಇದು ನೂರಕ್ಕೆ ನೂರು ಸತ್ಯ : ಸಿದ್ದರಾಮಯ್ಯ -Vishwanews24

Featured, ರಾಜ್ಯ ನ್ಯೂಸ್

ಒಂದು ವೇಳೆ ನಾಳೆಯೇ ಚುನಾವಣೆ ನಡೆದರೂ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ; ಇದು ನೂರಕ್ಕೆ ನೂರು ಸತ್ಯ : ಸಿದ್ದರಾಮಯ್ಯ –Vishwanews24

ಬೆಂಗಳೂರು : ”ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪನವರು ಅಧಿಕಾರ ಕಳೆದುಕೊಳ್ಳುವ ಭಯದಲ್ಲಿ ಬಿಜೆಪಿ ಶೇ. 60 ಪಂಚಾಯತ್‌ಗಳಲ್ಲಿ ಗೆದ್ದಿದೆ ಎಂದು ಸುಳ್ಳು ಹೇಳುತ್ತಿದ್ದಾರೆ” ಎಂದು ಹೇಳಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ”ಒಂದು ವೇಳೆ ನಾಳೆಯೇ ಚುನಾವಣೆ ನಡೆದರೂ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ. ಇದು ನೂರಕ್ಕೆ ನೂರು ಸತ್ಯ” ಎಂದಿದ್ದಾರೆ.

 

ಗ್ರಾಮ ಪಂಚಾಯತ್‌ ಚುನಾವಣೆಗೆ ಸಂಬಂಧಿಸಿ ಟ್ವೀಟ್‌ ಮಾಡಿರುವ ಅವರು, ”ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಜಯಗಳಿಸಿದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಿಗೆ ಅಭಿನಂದನೆಗಳು. ನಮ್ಮ ಅಭ್ಯರ್ಥಿಗಳ ಗೆಲುವಿಗೆ ಹಗಲಿರುಳೆನ್ನದೆ ಶ್ರಮಿಸಿದ ಕಾರ್ಯಕರ್ತರಿಗೆ ಹಾಗೂ ಮತ ನೀಡಿ, ಆಶೀರ್ವದಿಸಿದ ಮತದಾರರಿಗೆ ಧನ್ಯವಾದಗಳು” ಎಂದು ತಿಳಿಸಿದ್ದಾರೆ.

”ಗ್ರಾಮಗಳ ಪ್ರಗತಿಯಲ್ಲಿ ದೇಶದ ಉನ್ನತಿ ಅಡಗಿದೆ. ಈ ಕಾರಣಕ್ಕಾಗಿ ಈ ಬಾರಿಯ ಚುನಾವಣೆಯಲ್ಲಿ ಜಯಗಳಿಸಿದ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ತಮ್ಮ ಗ್ರಾಮವನ್ನು ಸದೃಢಗೊಳಿಸುವ ಕಾರ್ಯದಲ್ಲಿ ಪಕ್ಷಾತೀತವಾಗಿ ಕೆಲಸ ಮಾಡಬೇಕೆಂಬುದು ನನ್ನ ಸಲಹೆ” ಎಂದು ಹೇಳಿದ್ದಾರೆ.

”ಇನ್ನೂ ಹಲವು ಜಿಲ್ಲೆಗಳಲ್ಲಿ ಮತ ಎಣಿಕೆ ಕಾರ್ಯ ಪೂರ್ಣಗೊಂಡು ಫಲಿತಾಂಶ ಹೊರಬಂದಿಲ್ಲ, ಮೀಸಲಾತಿ ಅಡಿ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಹಂಚಿಕೆಯಾಗಿಲ್ಲ, ಆಗಲೇ ಯಡಿಯೂರಪ್ಪ ಅವರು ನಮ್ಮ ಪಕ್ಷ 3800ಕ್ಕೂ ಅಧಿಕ ಪಂಚಾಯತಿಗಳಲ್ಲಿ ಗೆದ್ದಿದೆ ಎಂದು ಹೇಳಿಕೆ ನೀಡುತ್ತಿರುವುದು ಹಾಸ್ಯಾಸ್ಪದ” ಎಂದು ಲೇವಡಿ ಮಾಡಿದ್ದಾರೆ.

”ಅಧಿಕಾರ ಕಳೆದುಕೊಳ್ಳುವ ಭಯದಲ್ಲಿ ಯಡಿಯೂರಪ್ಪನವರು ಬಿಜೆಪಿ 60% ಪಂಚಾಯತಿಗಳಲ್ಲಿ ಗೆದ್ದಿದೆ ಎಂದು ಸುಳ್ಳು ಹೇಳುತ್ತಿದ್ದಾರೆ. ನನಗಿರುವ ಮಾಹಿತಿ ಪ್ರಕಾರ ಗೆದ್ದ ಹೆಚ್ಚಿನ ಸಂಖ್ಯೆಯ ಪಂಚಾಯತಿ ಸದಸ್ಯರು ಕಾಂಗ್ರೆಸ್ ಕಾರ್ಯಕರ್ತರಾಗಿದ್ದಾರೆ” ಎಂದು ಹೇಳಿದ್ದಾರೆ.

”ಯಡಿಯೂರಪ್ಪನವರ ಮುಖ್ಯಮಂತ್ರಿ ಕುರ್ಚಿಯೇ ಅಲ್ಲಾಡ್ತಿದೆ, ಅದರ ನಡುವೆಯೂ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತೆ ಎಂದು ಹಗಲುಗನಸು ಕಾಣ್ತಿದ್ದಾರೆ. ಒಂದು ವೇಳೆ ನಾಳೆಯೇ ಚುನಾವಣೆ ನಡೆದರೂ ಕಾಂಗ್ರೆಸ್ ಪಕ್ಷ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ. ಇದು ನೂರಕ್ಕೆ ನೂರು ಸತ್ಯ” ಎಂದಿದ್ದಾರೆ.