ಒಬ್ಬನೇ ಒಬ್ಬ ಅಕ್ರಮ ವಲಸಿಗನಿಗೆ ದೇಶದಲ್ಲಿ ಉಳಿದುಕೊಳ್ಳಲು ಅವಕಾಶ ನೀಡೋಲ್ಲ : ಅಮಿತ್‌ ಶಾ -Vishwanews24

Featured, ದೇಶ, ರಾಷ್ಟ್ರ ನ್ಯೂಸ್

ಗುವಾಹಟಿ : ‘ರಾಷ್ಟ್ರೀಯ ಪೌರತ್ವ ನೋಂದಣಿಯನ್ನು (ಎನ್‌ಆರ್‌ಸಿ) ಕಾಲಮಿತಿಯೊಳಗೆ ಪೂರ್ಣಗೊಳಿಸಲಾಗುವುದು ಮತ್ತು ಅಕ್ರಮವಾಗಿ ವಲಸೆ ಬಂದವರಿಗೆ ಇಲ್ಲಿ ಉಳಿಯಲು ಅವಕಾಶ ನೀಡುವುದಿಲ್ಲ’ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭಾನುವಾರ ಸ್ಪಷ್ಟಪಡಿಸಿದರು.

ದೇಶದಲ್ಲಿ ಒಬ್ಬನೇ ಅಕ್ರಮ ವಲಸಿಗರಿಗೆ ಉಳಿದುಕೊಳ್ಳಲು ಇನ್ಮುಂದೆ ಜಾಗವಿಲ್ಲ ಎಂದು ಬಿಜೆಪಿ ಚಾಣಕ್ಯ ಅಮಿತ್ ಶಾ ಅಸ್ಸಾಂನಲ್ಲಿ ಗುಡುಗಿದ್ದಾರೆ.

ಈಶಾನ್ಯ ಮಂಡಳಿಯ (ಎನ್‌ಇಸಿ) ಅಧ್ಯಕ್ಷರೂ ಆಗಿರುವ ಶಾ ಅವರು ಭಾನುವಾರ ಎನ್‌ಇಸಿಯ 68ನೇ ಅಧಿವೇಶನದಲ್ಲಿ ಈಶಾನ್ಯದ ಎಂಟು ರಾಜ್ಯಗಳ ಮುಖ್ಯಮಂತ್ರಿಗಳನ್ನು ಉದ್ದೇಶಿಸಿ ಮಾತನಾಡಿದರು.

ಗೃಹ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ತಮ್ಮ ಮೊದಲ ಅಸ್ಸಾಂ ಭೇಟಿಯಲ್ಲಿ ರಾಷ್ಟ್ರೀಯ ಪೌರತ್ವ ನೊಂದಣಿ ಬಗ್ಗೆ ಅಮಿತ್ ಶಾ ಮಾತನಾಡಿದ್ದಾರೆ.

ಎನ್,ಆರ್.ಸಿ ಕುರಿತಾಗಿ ವಿವಿಧ ರೀತಿಯ ಪ್ರಶ್ನೆಗಳು, ಅಭಿಪ್ರಾಯ ವ್ಯಕ್ತವಾಗುತ್ತಿದೆ ಆದರೆ ಅಕ್ರಮ ವಲಸಿಗರ ವಿರುದ್ಧ ಕಠಿಣ ಕ್ರಮಕ್ಕೆ ಕೇಂದ್ರ ಸರ್ಕಾರ ಬದ್ದವಾಗಿದ್ದು, ಒಬ್ಬನೇ ಒಬ್ಬ ಅಕ್ರಮ ವಲಸಿಗನಿಗೆ ದೇಶದಲ್ಲಿ ಉಳಿದುಕೊಳ್ಳಲು ಅವಕಾಶ ನೀಡೋಲ್ಲ ಎಂದು ಅಮಿತ್ ಶಾ ಗುಡುಗಿದ್ದಾರೆ.

ಈಶಾನ್ಯ ರಾಜ್ಯಗಳಿಗೆ ನೀಡಲಾಗಿರುವ ವಿಶೇಷ ಸ್ಥಾನಮಾನ 371 ಅನುಚ್ಚೇದವನ್ನು ರದ್ದು ಮಾಡುವ ಯಾವುದೇ ಉದ್ದೇಶವನ್ನು ಕೇಂದ್ರ ಸರ್ಕಾರ ಹೊಂದಿಲ್ಲ ಎಂದು ಹೇಳಿದರು. ರಾಷ್ಟ್ರೀಯ ಪೌರತ್ವ ನೊಂದಣಿ ದಾಖಲೆ ಅಂತಿಮ ಪಟ್ಟಿ ಬಿಡುಗಡೆಯಾಗಿದ್ದು, 19 ಲಕ್ಷಕ್ಕೂ ಅಧಿಕ ಜನರು ಎನ್ ಆರ್ ಸಿ ಪಟ್ಟಿಯಿಂದ ಹೊರಗುಳಿಸಿದ್ದು, 3.11 ಕೋಟಿ ಜನರನ್ನು ಪಟ್ಟಿಯಲ್ಲಿ ಸೇರಿಸಲಾಗಿದೆ ಎಂದರು .