ಕಟೀಲು, ಧರ್ಮಸ್ಥಳ, ಕುಕ್ಕೆಯಲ್ಲಿ ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ ದರ್ಶನಕ್ಕೆ ಅವಕಾಶ -Vishwanews24

Featured, ದಕ್ಷಿಣ ಕನ್ನಡ

ಕಟೀಲು, ಧರ್ಮಸ್ಥಳ, ಕುಕ್ಕೆಯಲ್ಲಿ ಬೆಳಿಗ್ಗೆ 7 ರಿಂದ ಸಂಜೆ 7 ರವರೆಗೆ ದರ್ಶನಕ್ಕೆ ಅವಕಾಶ..

ಯಾವುದೇ ಸೇವೆಗಳಿಗೆ ಅವಕಾಶವಿರುವುದಿಲ್ಲ…

ವಾರಾಂತ್ಯ ಭಕ್ತಾದಿಗಳ ಪ್ರವೇಶವನ್ನು ಸಂಪೂರ್ಣ ನಿರ್ಬಂಧ..

ಜಾತ್ರೆಗಳು, ದೇವಾಲಯದ ಉತ್ಸವಗಳು, ಮೆರವಣಿಗೆಗಳು ನಿಷೇಧ

ಮಂಗಳೂರು : ಕೋವಿಡ್-19 ಸೋಂಕು ನಿಯಂತ್ರಣದ ಹಿನ್ನಲೆಯಲ್ಲಿ ಜಿಲ್ಲೆಯ ಪ್ರಮುಖ ದೇವಸ್ಥಾನಗಳಿಗೆ ಸಂಬಂಧಿಸಿದಂತೆ ಈ ಹಿಂದೆ ವಿಧಿಸಲಾಗಿದ್ದ ಕೆಲವು ನಿರ್ಬಂಧ, ಮಾರ್ಗಸೂಚಿಗಳನ್ನು ಹಿಂಪಡೆದು, ಈ ಕೆಳಗಿನಂತೆ ಆದೇಶ ಹೊರಡಿಸಲಾಗಿದೆ.

ಅವುಗಳು ಇಂತಿವೆ:

1. ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಗಳಲ್ಲಿ ಭಕ್ತಾದಿಗಳಿಗೆ ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆಯವರೆಗೆ ಮಾತ್ರ ತೆರೆದಿರುತ್ತದೆ. ಈ ಸಂದರ್ಭದಲ್ಲಿ ಕಡ್ಡಾಯವಾಗಿ ಸಾಮಾಜಿಕ ಅಂತರ, ಅಗತ್ಯ ಕೋವಿಡ್ ನಿಯಂತ್ರಣ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಭಕ್ತಾದಿಗಳಿಗೆ ದೇವರ ದರ್ಶನ, ತೀರ್ಥಪ್ರಸಾದ, ಅನ್ನಸಂತರ್ಪಣೆಗೆ ಮುಂದಿನ ಆದೇಶದವರೆಗೆ ಅವಕಾಶ ನೀಡಲಾಗಿದೆ. ಆದರೆ ಯಾವುದೇ ಸೇವೆಗಳಿಗೆ ಅವಕಾಶವಿರುವುದಿಲ್ಲ.

2. ವಾರಾಂತ್ಯದಲ್ಲಿ (ಶನಿವಾರ ಮತ್ತು ಭಾನುವಾರ) ಭಕ್ತಾದಿಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ ಹಾಗೂವಸತಿ ಗೃಹಗಳಲ್ಲಿ ತಂಗುವುದಾಗಲೀ ಅಥವಾ ದೇವರ ದರ್ಶನಕ್ಕೆ ಅವಕಾಶವಿರುವುದಿಲ್ಲ.

3. ಶನಿವಾರ ಮತ್ತು ಭಾನುವಾರಗಳಂದು ಎಲ್ಲಾ ರೀತ್ಯಾ ಉತ್ಸವ / ಸೇವೆಗಳು ತೀರ್ಥ, ಪ್ರಸಾದ ಮುಡಿ ಸೇವೆ, ವಸತಿಗಳನ್ನುನಿರ್ಬಂಧಿಸಿ, ಅರ್ಚಕರುಗಳಿಂದ ಸಾಂಪ್ರದಾಯಿಕ ಪೂಜೆಗೆ ಮಾತ್ರ ಅವಕಾಶ ಕಲ್ಪಿಸಿದೆ.

4. ಜಾತ್ರೆಗಳು, ದೇವಾಲಯದ ಉತ್ಸವಗಳು, ಮೆರವಣಿಗೆಗಳು ಇತ್ಯಾದಿಗಳನ್ನು ನಿಷೇಧಿಸಿದೆ.

ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಅಂತಹವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ – 2005 ರ ಕಲಂ 51 ರಿಂದ 60 ರನ್ವಯ, ಐಪಿಸಿ ಕಲಂ 188 ರಂತೆ ಮತ್ತು ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ 2020 ರ ಕಲಂ 4, 5 ಮತ್ತು 10 ರಂತೆ ಕ್ರಮ ಜರಗಿಸಲಾಗುವುದು ಎಂದು ಜಿಲ್ಲಾ ದಂಡಾಧಿಕಾರಿಗಳು, ಜಿಲ್ಲಾ ವಿಪ್ಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆದೇಶ ಹೊರಡಿಸಿದ್ದಾರೆ.