ಕಣಿವೆ ರಾಜ್ಯದಲ್ಲಿ ಶಾಂತಿ ಸ್ಥಾಪನೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಪ್ರಮಖ ಉದ್ದೇಶ : ಅಮಿತ್ ಶಾ -Vishwanews24
ನವದೆಹಲಿ, : ಕಣಿವೆಯಲ್ಲಿ ಶಾಂತಿ ಸ್ಥಾಪನೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮುಖ್ಯ ಉದ್ದೇಶವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಅಮಿತ್ ಶಾ ರಾಜ್ಯಸಭೆಯಲ್ಲಿ ಜಮ್ಮು-ಕಾಶ್ಮೀರ ಮೀಸಲು ವಿಧೇಯಕ -2019 ಮಂಡಿಸಿದ ಬಳಿಕ ಮಾತನಾಡಿದರು. ಈ ವೇಳೆ ಜಮ್ಮು ಕಾಶ್ಮೀರದಲ್ಲಿ ಕೈಗೊಳ್ಳಲಾಗಿರುವ ಅಭಿವೃದ್ಧಿ ಯೋಜನೆಗಳ ಬಗ್ಗೆ ಶಾ ವಿವರಿಸಿದರು.
ನಿರಂತರ ಉಗ್ರರ ದಾಳಿ ಹಾಗೂ ಬಾಂಬ್ ಸ್ಪೋಟಕ್ಕೆ ತತ್ತರಿಸಿ ಹೋಗುತ್ತಿರುವ ಜನ ಮತ್ತು ವಿದ್ಯಾರ್ಥಿಗಳಿಗೆ ಆಶ್ರಯ ನೀಡುವ ಕೆಲಸವಾಗಬೇಕಿದೆ. ಮಸೂದೆಯಿಂದ ಕಥುವಾ, ಸಾಂಬಾ ಮತ್ತು ಜಮ್ಮುವಿನಲ್ಲಿ ವಾಸಿಸುವ 3.5 ಲಕ್ಷ ಜನರಿಗೆ ಸಹಾಯವಾಗಲಿದೆ ಎಂದು ಹೇಳಿದರು.
ಸದ್ಯ ಕಾನೂನಿನ ಪ್ರಕಾರ ರಾಜ್ಯದಲ್ಲಿ ಶೇಕಡಾ 43 ರಷ್ಟು ಮೀಸಲಾತಿ ನೀಡಲಾಗುತ್ತಿದೆ. ಈ ಪೈಕಿ ಶೇ. 3ರಷ್ಟು ನಿಯಂತ್ರಣ ರೇಖೆಯ ಉದ್ದಕ್ಕೂ ವಾಸಿಸುವ ಜನರಿಗೆ ಲಭ್ಯವಾಗುತ್ತಿದೆ. ನಾವು ಜಾರಿಗೆ ಮಾಡಲಿರುವ ನೂತನ ಮಸೂದೆ ರಾಜ್ಯದ ಅಂತರಾಷ್ಟ್ರೀಯ ಗಡಿಯಲ್ಲಿ ವಾಸಿಸುವ ಜನರಿಗೆ ಶೇಕಡಾ 3 ರಷ್ಟು ಮೀಸಲಾತಿ ವಿಸ್ತರಿಸಲು ಅವಕಾಶ ನೀಡುತ್ತದೆ ಎಂದು ಹೇಳಿದರು.
ಮೋದಿ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಕಣಿವೆ ರಾಜ್ಯದಲ್ಲಿ ಉಗ್ರವಾದಕ್ಕೆ ಬಂಡವಾಳ ಪೂರೈಕೆಯಾಗುತ್ತಿದುದು ಸಂಪೂರ್ಣ ಬಂದ್ ಆಗಿದೆ ಎಂದು ಹೇಳಿದರು.
