ಕಣ್ಮರೆಯಾದ ಮೀನುಗಾರರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ : ಜಯಮಾಲಾ -Vishwanews24
ಉಡುಪಿ. : ಉಡುಪಿಯ ಸುವರ್ಣ ತ್ರಿಭುಜ ಬೋಟ್ನಲ್ಲಿ ಮೀನುಗಾರಿಕೆಗೆ ತೆರಳಿ ಕಣ್ಮರೆಯಾಗಿದ್ದ 7 ಜನ ಮೀನುಗಾರ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 10 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ ಅವರು, ಉಡುಪಿಯಿಂದ ಸುವರ್ಣ ತ್ರಿಭುಜ ಬೋಟ್ನಲ್ಲಿ ಮೀನುಗಾರಿಕೆಗೆ ತೆರಳಿದ್ದ ಏಳು ಮೀನುಗಾರರು ಕಣ್ಮರೆಯಾಗಿದ್ದಾರೆ. ಮೀನುಗಾರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ಧನ ನೀಡುವ ಆದೇಶವಾಗಿದೆ. ಮೀನುಗಾರ ಸಂಕಷ್ಟ ಪರಿಹಾರ ನಿಧಿ, ಸಿಎಂ ಪರಿಹಾರ ನಿಧಿಯಿಂದ ಹಣ ನೀಡಲಾಗುವುದು. ಸಮುದ್ರದಲ್ಲಿ ಕಣ್ಮರೆಯಾದವರು ಶೀಘ್ರ ಪತ್ತೆಯಾಗಲಿ ಎಂಬುದು ನಮ್ಮ ಆಶಯ ಎಂದು ಹೇಳಿದರು.
ಹೆಚ್ಚಿನ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುತ್ತೇವೆ. ದೊಡ್ಡ ಮೊತ್ತದ ಪರಿಹಾರಕ್ಕಾಗಿ ಕೇಂದ್ರವನ್ನು ಒತ್ತಾಯಿಸುತ್ತೇವೆ ಎಂದು ಭರವಸೆ ನೀಡಿದರು.
ನಾಲ್ಕೂವರೆ ತಿಂಗಳ ಹಿಂದೆ ಉಡುಪಿಯ ಮಲ್ಪೆ ಬಂದರ್ ನಿಂದ ಮೀನುಗಾರಿಕೆ ತೆರಳಿದ್ದ ಸುವರ್ಣ ತ್ರಿಭುಜ ಎಂಬ ಬೋಟಿನ ಅವಶೇಷಗಳು ಮಹಾರಾಷ್ಟ್ರದ ಮಾಲ್ವಾನ್ ಬಳಿ ಸಮುದ್ರದಲ್ಲಿ ಇತ್ತೀಚಿಗೆ ಪತ್ತೆಯಾಗಿದ್ದವು.
