ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ರಾಜ್ಯ ಗೃಹ ಸಚಿವರು ರಾಜೀನಾಮೆ ನೀಡುವುದು ಸೂಕ್ತ : ಕೆ. ಉದಯಕುಮಾರ್ ಶೆಟ್ಟಿ
ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ರಾಜ್ಯ ಗೃಹ ಸಚಿವರು ರಾಜೀನಾಮೆ ನೀಡುವುದು ಸೂಕ್ತ : ಕೆ. ಉದಯಕುಮಾರ್ ಶೆಟ್ಟಿ
ಉಡುಪಿ : ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸಿದ ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಅಮಾನುಷ ಹತ್ಯೆಯ ನೆನಪು ಮಾಸುವ ಮುನ್ನ ಅದೇ ಮಾದರಿಯಲ್ಲಿ ಹುಬ್ಬಳ್ಳಿಯ ವೀರಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಎಂಬ ಯುವತಿಯ ಕೊಲೆಯಾಗಿದೆ. ಈ ಘಟನೆಯನ್ನು ಉಡುಪಿ ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದ ಅಭಿವೃದ್ಧಿಯನ್ನು ಮರೆತಿರುವ ಕಾಂಗ್ರೆಸ್ ಸರಕಾರ ಕನಿಷ್ಠ ಪಕ್ಷ ರಾಜ್ಯದ ಜನತೆಯ ಪ್ರಾಣ ರಕ್ಷಣೆಯ ಕೆಲಸ ಕಾರ್ಯಗಳನ್ನೂ ಮಾಡುತ್ತಿಲ್ಲ.
ಹುಬ್ಬಳ್ಳಿಯ ವೀರಾಪುರದ 21 ವರ್ಷದ ಅಂಜಲಿ ಅಂಬಿಗೇರ ಎಂಬ ಯುವತಿಯನ್ನು ಪ್ರೀತಿಸುತ್ತಿದ್ದ ಗಿರೀಶ್ ಅಲಿಯಾಸ್ ವಿಶ್ವ ಎಂ. ಸಾವಂತ್ ಎಂಬಾತ ಮೇ 15ರ ಮುಂಜಾನೆ ಆಕೆಯನ್ನು ಬರ್ಬರವಾಗಿ ಹತ್ಯೆಗೈದಿರುವುದು ನಾಗರಿಕ ಸಮಾಜವನ್ನು ಮಗದೊಮ್ಮೆ ಭಯಭೀತಿಯಲ್ಲಿ ನಲುಗುವಂತೆ ಮಾಡಿದೆ.
ನೇಹಾ ಹತ್ಯೆ ಪ್ರಕರಣವನ್ನು ಸಾಮಾನ್ಯ ಘಟನೆ ಎಂದಿರುವ ಗೃಹ ಸಚಿವರು ಮತ್ತು ಸರಕಾರದ ಲಘು ಹೇಳಿಕೆಗಳು ಹಾಗೂ ಆರೋಪಿಯ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳದಿರುವುದು ಇಂತಹ ಹೇಯ ಕೃತ್ಯಗಳ ಪುನರಾವರ್ತನೆಗೆ ಮುಖ್ಯ ಕಾರಣವಾಗಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಪರಮೇಶ್ವರ್ ರವರು ರಾಜ್ಯದಲ್ಲಿ ನಡೆಯುತ್ತಿರುವ ಅಮಾನುಷ ಹತ್ಯೆಗಳ ನೈತಿಕ ಹೊಣೆ ಹೊರಬೇಕಾಗಿದೆ. ಈ ನಿಟ್ಟಿನಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆಯ ಹೊಣೆ ಹೊತ್ತಿರುವ ಗೃಹ ಸಚಿವರು ತಕ್ಷಣ ರಾಜೀನಾಮೆ ಸಲ್ಲಿಸಿ, ಈ ಹತ್ಯೆಯ ಪ್ರಕರಣಗಳನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಪತ್ರಿಕಾ ಗೋಷ್ಠಿಯಲ್ಲಿ ಸರಕಾರವನ್ನು ಆಗ್ರಹಿಸಿದರು.
