ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದು ಆತ್ಮಹತ್ಯೆಗೆ ಸಮಾನ : ಪ್ರಧಾನಿ ಮೋದಿ – Vishwanews24
ನವದೆಹಲಿ: ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದು ಆತ್ಮಹತ್ಯೆಗೆ ಸಮಾನ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಡಾ.ಬಿ.ಆರ್.ಅಂಬೇಡ್ಕರ್ ಹೇಳಿಕೆಯನ್ನು ಪುನರುಚ್ಛರಿಸಿದರು.ಲೋಕಸಭೆಯಲ್ಲಿಂದು ರಾಷ್ಟ್ರಪತಿ ಭಾಷಣದ ಬಳಿಕ ವಂದನಾ ನಿರ್ಣಯದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಪಕ್ಷ ಮೋದಿಯನ್ನು ದ್ವೇಷಿಸುವಂತೆ, ವಿರೋಧ ಪಕ್ಷ ಇಡೀ ದೇಶವನ್ನೇ ದ್ವೇಷಿಸಲು ಪ್ರಾರಂಭಿಸಿದೆ. ಲಂಡನ್ ನಲ್ಲಿ ಪತ್ರಿಕಾಗೋಷ್ಟಿಯನ್ನು ಆಯೋಜಿಸುವ ಮೂಲಕ ಭಾರತವನ್ನು ಕೆಲ ಮಟ್ಟದಲ್ಲಿ ಬಿಂಬಿಸಲು ಕಾಂಗ್ರೆಸ್ ಪ್ರಯತ್ನಿಸಿದೆ ಎಂದು ಮೋದಿ ಆರೋಪಿಸಿದರು.
ಮುಂದುವರೆದು ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಜನರ ಬೇಡಿಕೆಗಳ ಬಗ್ಗೆ ಯಾವುದೇ ಸೂಕ್ಷ್ಮ ಕಾಳಜಿ ಇಲ್ಲ. ಬದಲಾಗಿ ಭ್ರಷ್ಟಾಚಾರವನ್ನು ಪ್ರೋತ್ಸಾಹಿಸುವ ಕಡೆ ಹೆಚ್ಚು ಗಮನ ಹರಿಸುತ್ತದೆ. ಪ್ರತಿ ಬಾರ್ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೂ ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೇರುತ್ತದೆ. ಹಾಗಾಗಿ ಬೆಲೆ ಏರಿಕೆ ಮತ್ತು ಕಾಂಗ್ರೆಸ್ ಎರಡೂ ಒಂದೇ ಎಂದು ಟೀಕಿಸಿದರು. ಅಷ್ಟೇ ಅಲ್ಲದೆ, ಕಾಂಗ್ರೆಸ್ ಕುಟುಂಬ ರಾಜಕಾರಣದ ಬಗ್ಗೆ ಮೋದಿ ಕಟುವಾಗಿ ಟೀಕಿಸಿದರು.
ನಾವು ಭ್ರಷ್ಟಾಚಾರ ಮುಕ್ತ ಆಡಳಿತ ನೀಡಿದ್ದೇವೆ. ಆದರೆ ಯುಪಿಎ ಅವಧಿಯಲ್ಲಿ ದಲ್ಲಾಳಿಗಳಿಲ್ಲದೆ ಯಾವುದೇ ಒಪ್ಪಂದ ಆಗೇ ಇಲ್ಲ ಎಂದು ವ್ಯಂಗ್ಯವಾಡಿದರು. ರಾಫೆಲ್ ಯುದ್ಧ ವಿಮಾನ ಖರೀದಿಯಲ್ಲಿ ಯಾವುದೇ ಮಧ್ಯವರ್ತಿಗಳು ಇಲ್ಲ.
ಹೀಗಾಗಿ ಕಾಂಗ್ರೆಸ್ ಸಮಸ್ಯೆ ಕಾಣಿಸುತ್ತಿದೆ ಎಂದರು.ಜನರಿಗೆ ನಾವು ನೀಡುರುವ ಆಶ್ವಾಸನೆಗಳನ್ನು ನಾವು ಈಡೇರಿಸಿದ್ದೇವೆ. ಯಾವುದೇ ಸವಾಲುಗಳಿಗೆ ಹೆದರಿ ಓಡಿಹೋಗಿಲ್ಲ. ನಮ್ಮ ಸರ್ಕಾರ ಭ್ರಷ್ಟಾಚಾರದ ವಿರುದ್ಧ ಹೋರಾಡಿದೆ, ಹೋರಾಡುತ್ತದೆ ಎಂದರು.

