ಕಾರ್ಕಳ: ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಾ.14 ರಂದು ಬಿಜೆಪಿಯಿಂದ ಪ್ರತಿಭಟನೆ – vishwanews24
ಕಾರ್ಕಳ: ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಮಾ.14 ರಂದು ಬಿಜೆಪಿಯಿಂದ ಪ್ರತಿಭಟನೆ
ಕಾರ್ಕಳ :ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಮಾರ್ಚ್ 14ರಂದು ಗ್ರಾಮ ಮಟ್ಟದಿಂದ ಪುರಸಭೆ ಹಾಗೂ ನಗರ ಪಾಲಿಕೆ ಮಟ್ಟದವರೆಗೆ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ತಿಳಿಸಿದ್ದಾರೆ.
ಕಾರ್ಕಳ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ತಪ್ಪು ನೀತಿಗಳ ಪರಿಣಾಮ ಕೆಂಪುಕಲ್ಲು ಮತ್ತು ಮರಳು ಪೂರೈಕೆ ಆಗದೇ ಬಡಜನರು ಸಂಕಷ್ಟ ಎದುರಿಸುತ್ತಿದ್ದಾರೆ. ಇದರ ಪರಿಣಾಮ ಕಟ್ಟಡ ಕಾರ್ಮಿಕರಿಗೆ ಉದ್ಯೋಗದ ಕೊರತೆ ಉಂಟಾಗಿ ಜೀವನ ನಡೆಸುವುದು ಕಷ್ಟಕರವಾಗಿದೆ ಎಂದು ಆರೋಪಿಸಿದರು.
ಸ್ಟಾಂಪ್ ಡ್ಯೂಟಿ ಹೆಚ್ಚಳ ಹಾಗೂ ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಜನರ ಹಣವನ್ನು ದೋಚಲಾಗುತ್ತಿದೆ. ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷಗಳಾದರೂ ಒಂದು ಹೊಸ ರೇಷನ್ ಕಾರ್ಡ್ ಕೂಡ ನೀಡಿಲ್ಲ. ಬದಲಾಗಿ ಸಾವಿರಾರು ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಿ ಬಡವರ ಅನ್ನಕ್ಕೆ ಕಲ್ಲು ಹಾಕಿದಂತಾಗಿದೆ ಎಂದು ಅವರು ಟೀಕಿಸಿದರು.
ಇದನ್ನೂ ಓದಿ:👇
ಡೀಮ್ಡ್ ಅರಣ್ಯವನ್ನು ರದ್ದುಪಡಿಸಿದ ಬಳಿಕವೂ ಬಡವರಿಗೆ ನಿವೇಶನ ನೀಡದೇ ಅರ್ಜಿದಾರರ ಅರ್ಜಿಗಳನ್ನು ಸಕಾರಣವಿಲ್ಲದೆ ತಿರಸ್ಕರಿಸಲಾಗುತ್ತಿದೆ. ಕರಾವಳಿ ಪ್ರವಾಸೋದ್ಯಮ ಅಭಿವೃದ್ಧಿಗೆ ಯಾವುದೇ ಪ್ರಾಮುಖ್ಯತೆ ನೀಡದೇ, ಅಗತ್ಯ ಅನುದಾನ ಒದಗಿಸದಿರುವುದು ಹಾಗೂ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸದಿರುವುದು ಸರ್ಕಾರದ ವೈಫಲ್ಯವನ್ನು ತೋರಿಸುತ್ತದೆ ಎಂದರು.
ವಿಧವಾ ವೇತನ, ವೃದ್ಧಾಪ್ಯ ವೇತನ ಹಾಗೂ ಸಂಧ್ಯಾ ಸುರಕ್ಷಾ ಪಿಂಚಣಿ ಯೋಜನೆಗಳಲ್ಲಿ ಗೊಂದಲ ಉಂಟಾಗಿದೆ. ಅಘೋಷಿತ ಲೋಡ್ ಶೆಡ್ಡಿಂಗ್ ಹಾಗೂ ನಿರಂತರ ವಿದ್ಯುತ್ ದರ ಏರಿಕೆಯಿಂದ ಜನತೆ ಸಂಕಷ್ಟ ಅನುಭವಿಸುತ್ತಿದ್ದಾರೆ. ಜೊತೆಗೆ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ರಾಜ್ಯ ಬಜೆಟ್ನಲ್ಲಿ ಕರಾವಳಿ ಭಾಗವನ್ನು ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಹಿಂದೂ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ. ಗ್ರಾಮ ಪಂಚಾಯತ್ನಿಂದ ವಿಧಾನಸೌಧದವರೆಗೆ ಭ್ರಷ್ಟಾಚಾರ ಹೆಚ್ಚಾಗಿದೆ ಎಂದು ಅವರು ದೂರಿದರು.
ಇದನ್ನೂ ಓದಿ:👇
ಶಿವಮೊಗ್ಗ : ನೀರಿನ ಟ್ಯಾಂಕರ್ಗೆ ಸ್ಕೂಟಿ ಡಿಕ್ಕಿ ; ಕಾರ್ಕಳ ಮೂಲದ ಮೆಡಿಕಲ್ ವಿದ್ಯಾರ್ಥಿನಿ ಸಾವು – vishwanews24
ಜವಳಿ ಪಾರ್ಕ್ ಕುರಿತು ಮಾತನಾಡಿದ ಅವರು, ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಯೋಜನೆ ರೂಪಿಸಲಾಗಿದ್ದರೂ ಎರಡು ಬಾರಿ ಟೆಂಡರ್ ಕರೆಯಲಾಗಿದ್ದರೂ ಟೆಂಡರ್ದಾರರು ಮುಂದೆ ಬಂದಿಲ್ಲ. ಈ ಕುರಿತು ಶಾಸಕ ಸುನೀಲ್ ಕುಮಾರ್ ಈಗಾಗಲೇ ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ್ದು, ರಾಜ್ಯ ಸರ್ಕಾರವೇ ನೇರವಾಗಿ ಜವಳಿ ಪಾರ್ಕ್ ಆರಂಭಿಸಬೇಕು ಎಂದು ಆಗ್ರಹಿಸಿದ್ದಾರೆ ಎಂದು ತಿಳಿಸಿದರು.
