ಗಂಗೊಳ್ಳಿ ದೋಣಿ ದುರಂತ : ಮೃತರ ಕುಟುಂಬಗಳಿಗೆ ಸರಕಾರದಿಂದ ಹೆಚ್ಚಿನ ಪರಿಹಾರ: ಸಚಿವೆ ಹೆಬ್ಬಾಳ್ಕರ್ ಭರವಸೆ – vishwanews24
ಗಂಗೊಳ್ಳಿ ದೋಣಿ ದುರಂತ : ಮೃತರ ಕುಟುಂಬಗಳಿಗೆ ಸರಕಾರದಿಂದ ಹೆಚ್ಚಿನ ಪರಿಹಾರ: ಸಚಿವೆ ಹೆಬ್ಬಾಳ್ಕರ್ ಭರವಸೆ
ಬೆಂಗಳೂರು: ಉಡುಪಿ ಜಿಲ್ಲೆಯ ಗಂಗೊಳ್ಳಿಯಲ್ಲಿ ಮೀನುಗಾರಿಕೆಗೆ ತೆರಳಿ ದೋಣಿ ಮಗುಚಿ ನಾಪತ್ತೆಯಾಗಿದ್ದ ಮೂವರು ಮೀನುಗಾರರ ನಿಧನಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಸಂತಾಪ ಸೂಚಿಸಿದ್ದಾರೆ. ಮೃತರ ಸರ ಕುಟುಂಬಗಳಿಗೆ ಸರಕಾರದಿಂದ ಹೆಚ್ಚಿನ ಪರಿಹಾರ ಒದಗಿಸುವ ಭರವಸೆ ನೀಡಿದ್ದಾರೆ.
ಕಳೆದ ಮಂಗಳವಾರ (ಜುಲೈ 15) ಮೀನುಗಾರರು ನಾಪತ್ತೆಯಾದ ಕ್ಷಣದಿಂದಲೂ ಜಿಲ್ಲಾಡಳಿತದೊಂದಿಗೆ ಸತತ ಸಂಪರ್ಕದಲ್ಲಿದ್ದು, ಕ್ಷಣ ಕ್ಷಣಕ್ಕೂ ಮಾಹಿತಿ ಪಡೆಯುತ್ತಿದ್ದೆ. ಇಂದು ಮೀನುಗಾರರು ಜೀವಂತವಾಗಿ ವಾಪಸ್ ಬರದ ವಿಷಯ ಕೇಳಿ ತೀವ್ರ ದುಃಖವಾಯಿತು. ಮೃತರಾದ ರೋಹಿತ್ ಖಾರ್ವಿ, ಸುರೇಶ್ ಖಾರ್ವಿ ಹಾಗೂ ಜಗನ್ನಾಥ್ ಖಾರ್ವಿ ಅವರ ಕುಟುಂಬ ವರ್ಗದವರನ್ನು ಶೀಘ್ರವೇ ಭೇಟಿಯಾಗಿ ಸಾಂತ್ವನ ಹೇಳುವೆ ಎಂದು ಸಚಿವರು ಹೇಳಿದ್ದಾರೆ.
ಸರಕಾರದಿಂದ ಹೆಚ್ಚಿನ ಪರಿಹಾರ:
ಶೀಘ್ರದಲ್ಲಿ ಉಡುಪಿ ಜಿಲ್ಲೆಗೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ತುಂಬುವ ಕೆಲಸ ಮಾಡಲಿದ್ದೇನೆ. ಜೊತೆಗೆ ಸರ್ಕಾರದಿಂದ ನಿಯಮಾನುಸಾರ ಪರಿಹಾರ ಒದಗಿಸುವ ಪ್ರಾಮಾಣಿಕ ಕೆಲಸ ಮಾಡಲಿದ್ದೇನೆ. ದುಃಖದ ಈ ಸಮಯದಲ್ಲಿ ಮೃತರ ಕುಟುಂಬಗಳ ದುಃಖದಲ್ಲಿ ನಾನೂ ಭಾಗಿಯಾದ್ದೇನೆ. ಅಗಲಿದ ಆತ್ಮಗಳಿಗೆ ಭಗವಂತ ಶಾಂತಿ ನೀಡಲಿ ಹಾಗೂ ಕುಟುಂಬಸ್ಥರಿಗೆ ನೋವು ಸಹಿಸುವ ಶಕ್ತಿ ದಯಪಾಲಿಸಲಿ ಪ್ರಾರ್ಥಿಸುತ್ತೇನೆ. ಹಾಗೂ ಕುಟುಂಬಸ್ಥರು ಯಾವುದೇ ಕಾರಣಕ್ಕೆ ಧೈರ್ಯವನ್ನು ಕಳೆದುಕೊಳ್ಳಬಾರದು ಎಂದು ವಿನಂತಿಸುತ್ತೇನೆ ಎಂದು ಸಚಿವರು ತಿಳಿಸಿದ್ದಾರೆ.
