ಚುನಾವಣೆ ಆಯೋಗ ಮಲಗಿದೆ ಎಂದು ಆರೋಪಿಸಿ ರಸ್ತೆಯಲ್ಲಿ ಮಲಗಿ ವಿನೂತನವಾಗಿ ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್ – Vishwanews24
ಪರಿಷತ್ ಚುನಾವಣೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ , ಚುನಾವಣೆ ಆಯೋಗ ಮಲಗಿದೆ ಎಂದು ಆರೋಪಿಸಿ ರಸ್ತೆಯಲ್ಲಿ ಮಲಗಿ ವಿನೂತನವಾಗಿ ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್ – Vishwanews24
ಮೈಸೂರು: ವಿಧಾನ ಪರಿಷತ್ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಶುಕ್ರವಾರ ಮತದಾನ ನಡೆಯಲಿದೆ. ಹೀಗಿರುವಾಗಲೇ ಪರಿಷತ್ ಚುನಾವಣೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿ ಪಕ್ಷೇತರ ಅಭ್ಯರ್ಥಿ ವಾಟಾಳ್ ನಾಗರಾಜ್ ವಿನೂತನ ಪ್ರತಿಭಟನೆ ನಡೆಸಿದರು.
ಮೈಸೂರು ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜಮಾಯಿಸಿದ ವಾಟಾಳ್ ನಾಗರಾಜ್, ಚುನಾವಣೆ ಆಯೋಗ ಮಲಗಿದೆ ಎಂದು ಆರೋಪಿಸಿ ರಸ್ತೆಯಲ್ಲಿ ಮಲಗಿ ವಿನೂತನವಾಗಿ ಪ್ರತಿಭಟನೆ ನಡೆಸಿದರು. ಚುನಾವಣೆ ಹಣದ ಹೊಳೆ ಹರಿಯುತ್ತಿದೆ. ಸಾಕಷ್ಟು ಭ್ರಷ್ಟಾಚಾರ ನಡೆಯುತ್ತಿದ್ದರೂ ಚುನಾವಣಾ ಆಯೋಗ ಮಲಗಿದೆ. ಚುನಾವಣ ಆಯೋಗದ ನೀತಿಯನ್ನು ಖಂಡಿಸುತ್ತೇನೆ ಎಂದರು.
ರಾಜಕೀಯ ಪಕ್ಷದವರು ಮತದಾರರಿಗೆ ಆಮಿಷವೊಡ್ಡುತ್ತಿದ್ದಾರೆ. ಇದು ನಿಲ್ಲದೆ ಹೋದರೆ ಪ್ರಜಾಪ್ರಭುತ್ವ ಉಳಿಯುವುದು ಹೇಗೆ. ಇದು ನಿಲ್ಲಬೇಕು. ಇದಕ್ಕೆಲ್ಲ ಕಡಿವಾಣ ಹಾಕಲು ಹೊಸ ಚುನಾವಣಾ ಕಾಯ್ದೆ ಜಾರಿಯಾಗಬೇಕು ಎಂದು ಆಗ್ರಹಿಸಿದರು.
ಚುನಾವಣಾ ಆಯೋಗ ಭ್ರಷ್ಟಾಚಾರವನ್ನ ತಡೆಹಿಡಿಯಬೇಕು . ಹಿಂದೆಂದಿಗಿಂತಲೂ ಈ ಸಲ ಪರಿಷತ್ ಎಲೆಕ್ಷನ್ನಲ್ಲಿ ಸಿಕ್ಕಾಪಟ್ಟೆ ಹಣ ಖರ್ಚು ಮಾಡಲಾಗುತ್ತಿದೆ. ಚುನಾವಣಾ ಆಯೋಗ ಹದ್ದಿನಕಣ್ಣು ವಹಿಸಬೇಕು . ರಾಜಕೀಯ ಪಕ್ಷಗಳು ಹಣಬಲ ಇರುವವರಿಗೆ ಮಾತ್ರ ಅವಕಾಶ ನೀಡುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ವಾಟಾಳ್ ಆಕ್ರೋಶ ವ್ಯಕ್ತಪಡಿಸಿದರು.
ಗ್ರಾಮ ಪಂಚಾಯತಿ ಸದಸ್ಯರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರಿಗೆ ನೀಡುತ್ತಿರುವ ಗೌರವ ಧನ ಸಾಕಾಗುತ್ತಿಲ್ಲ. ಮತಗಳನ್ನು ಕೆಲ ಅಭ್ಯರ್ಥಿಗಳು ಖರೀದಿ ಮಾಡುತ್ತಿದ್ದಾರೆ. ದಯಮಾಡಿ ಮತದಾರರು ಆಸೆ ಆಮಿಷಗಳಿಗೆ ಬಲಿಯಾಗಬೇಡಿ. ಚುನಾವಣಾ ಆಯೋಗ ಕಟ್ಟೆಚ್ಚರ ವಹಿಸಿ ಅಕ್ರಮ ತಡೆಯಬೇಕು ಎಂದು ವಾಟಾಳ್ ನಾಗರಾಜ್ ಒತ್ತಾಯಿಸಿದರು. ಇತ್ತೀಚಿನ ವರ್ಷಗಳಲ್ಲಿ ನೈತಿಕ ರಾಜಕಾರಣ ಮರೆಯಾಗುತ್ತಿದೆ. ಹಣಬಲ ಇದ್ದವರು ಮಾತ್ರ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಪ್ರವೃತ್ತಿ ಹೆಚ್ಚಾಗುತ್ತಿದೆ . ಇದೆಲ್ಲವೂ ಭವಿಷ್ಯಕ್ಕೆ ಮಾರಕವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಪಾರ್ಥಿವ ಶರೀರ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಅಪಘಾತ – Vishwanews24
