ಟಿಪ್ಪು ಜಯಂತಿ ಆಚರಣೆ ರದ್ದು ಮಾಡಿರುವುದು ಅಪರಾಧ : ಸಿದ್ದರಾಮಯ್ಯ -Vishwanews24
ಬೆಂಗಳೂರು : ದ್ವೇಷ ರಾಜಕಾರಣ ಮಾಡುವುದಿಲ್ಲವೆಂದು ಹೇಳಿದ 24 ಗಂಟೆಯೊಳಗೆ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಟಿಪ್ಪು ಜಯಂತಿಯನ್ನು ರದ್ದು ಮಾಡುವ ಮೂಲಕ ಸಿಎಂ ಬಿಎಸ್ ಯಡಿಯೂರಪ್ಪ ವಚನ ಭಷ್ಟ್ರರಾಗಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಕಿಡಿಕಾರಿದೆ.
ಸಿಎಂ ಯಡಿಯೂರಪ್ಪ ಈ ನಡೆಗೆ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಟಿಪ್ಪು ಜಯಂತಿ ರದ್ದು ಮಾಡಿದ್ದು ಅಪರಾಧ. ಟಿಪ್ಪು ಸುಲ್ತಾನ್ ಒಬ್ಬ ಅಲ್ಪಸಂಖ್ಯಾತ. ಮೈಸೂರು ರಾಜ್ಯದಲ್ಲಿ ರಾಜನಾಗಿ ಬ್ರಿಟಿಷರ ವಿರುದ್ಧ ಹೋರಾಡಿದವನು ಟಿಪ್ಪು. ಈ ಹಿನ್ನೆಲೆಯಲ್ಲಿ ಅವರಿಗೆ ಗೌರವ ಸಲ್ಲಿಸಲು ಅವರ ಜಯಂತಿಯನ್ನು ಆಚರಣೆ ಮಾಡಲು ತೀರ್ಮಾನ ಮಾಡಿದ್ದೆವು. ಇತಿಹಾಸದ ಅರಿವಿಲ್ಲದ ಬಿಜೆಪಿಯವರು ದುರುದ್ದೇಶದಿಂದ ಅಲ್ಪಸಂಖ್ಯಾತರ ದ್ವೇಷದಿಂದ ಈ ರೀತಿ ಮಾಡಿದ್ದಾರೆ ಎಂದು ಹರಿಹಾಯ್ದರು.
ಟಿಪ್ಪು ಜಯಂತಿ ಆಚರಣೆ ರದ್ದು ಮಾಡಿರುವುದು ಅಪರಾಧ. ಟಿಪ್ಪು ಸುಲ್ತಾನ್ ಬ್ರಿಟೀಷರ ವಿರುದ್ಧ ಹೋರಾಡುತ್ತಲೇ ವೀರಮರಣ ಹೊಂದಿದ ಹುತಾತ್ಮ. ಕೋಮುವಾದವನ್ನೇ ತಲೆಯಲ್ಲಿ ತುಂಬಿಕೊಂಡಿರುವ ಬಿಜೆಪಿ ನಾಯಕರು ಇತಿಹಾಸದ ಅರಿವಿಲ್ಲದ ಮೂಢರು.
— Siddaramaiah (@siddaramaiah) July 30, 2019
ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಜಾರಿಗೆ ತಂದಿದ್ದ ಟಿಪ್ಪು ಜಯಂತಿಯನ್ನು ರದ್ದು ಮಾಡಿ ನೂತನ ಬಿಜೆಪಿ ಸರ್ಕಾರ ಆದೇಶಿದೆ. ಈ ಕುರಿತು ಮಾತನಾಡಿರುವ ಸಿಎಂ ಯಡಿಯೂರಪ್ಪ, ಹಿಂದೆಲ್ಲಾ ಟಿಪ್ಪು ಜಯಂತಿ ಸಂದರ್ಭದಲ್ಲಿ ಅಲ್ಲಲ್ಲಿ ಗಲಾಟೆ, ಘರ್ಷಣೆಗಳಾಗಿತ್ತು. ಅದು ಪುನರಾವರ್ತನೆಯಾಗಬಾರದೆಂದು ಶಾಸಕರ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಯಂತಿ ಆಚರಣೆ ರದ್ದು ಮಾಡಲು ಮುಂದಾಗಿವೆ ಎಂದಿದ್ದಾರೆ.
