ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಕುಖ್ಯಾತ ಗ್ಯಾಂಗ್‌ಸ್ಟರ್ ಬಂಧನ ; ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು – vishwanews24

Featured, ಉಡುಪಿ

 ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಕುಖ್ಯಾತ ಗ್ಯಾಂಗ್‌ಸ್ಟರ್ ಬಂಧನ ; ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಕುಖ್ಯಾತ ಗ್ಯಾಂಗ್‌ಸ್ಟರ್ ಅನುಜ್ ಪಾಟೀಲ್(35) ಪೊಲೀಸರ ವಶದಿಂದ ಪರಾರಿಯಾಗಲು ಯತ್ನಿಸಿ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದು, ಈ ವೇಳೆ ಪೊಲೀಸರು ಆತ್ಮರಕ್ಷಣೆಗಾಗಿ ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ.

ಪೊಲೀಸರು ಅನುಜ್ ಪಾಟೀಲ್‌ನನ್ನು ಹೆಬ್ರಿಗೆ ಕರೆದೊಯ್ಯುತ್ತಿದ್ದ ವೇಳೆ ಆತ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಕೊಲ್ಲೂರು ಪೊಲೀಸ್ ಠಾಣೆಯ ಸಬ್‌ಇನ್‌ಸ್ಪೆಕ್ಟರ್ ಅವರ ಬಳಿಯಿದ್ದ ಶಸ್ತ್ರಾಸ್ತ್ರವನ್ನು ಕಸಿದುಕೊಂಡು ಗುಂಡು ಹಾರಿಸಲು ಆರೋಪಿ ಪ್ರಯತ್ನಿಸಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಪರಿಸ್ಥಿತಿಯನ್ನು ನಿಯಂತ್ರಿಸಲು ಕುಂದಾಪುರ ಪೊಲೀಸ್ ಠಾಣೆಯ ಸಬ್‌ಇನ್‌ಸ್ಪೆಕ್ಟರ್ ನಂಜ ನಾಯಕ್ ಅವರು ಗುಂಡು ಹಾರಿಸಿದ್ದು, ಗುಂಡು ಅನುಜ್ ಪಾಟೀಲ್‌ನ ಕಾಲಿಗೆ ತಗುಲಿದೆ. ಬಳಿಕ ಗಾಯಗೊಂಡ ಆರೋಪಿಯನ್ನು ತಕ್ಷಣ ಉಡುಪಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾನೆ.

ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಅನುಜ್ ಪಾಟೀಲ್ ಪ್ರಮುಖ ಆರೋಪಿಯಾಗಿದ್ದಾನೆ. ಈತ ಶೂಟರ್‌ಗಳಾದ ರಾಜು ಹಾಗೂ ಆತನ ತಂಡವನ್ನು ಗುತ್ತಿಗೆ ಹತ್ಯೆಗಾಗಿ ಕಳುಹಿಸುವ ಮೂಲಕ ಪ್ರಕರಣದ ಕಾರ್ಯಾಚರಣೆಗೆ ಅಗತ್ಯ ಲಾಜಿಸ್ಟಿಕ್ಸ್ ವ್ಯವಸ್ಥೆ ಮಾಡಿದ್ದಾನೆ ಎಂಬ ಆರೋಪವಿದೆ.

ಬಿಹಾರ ಮೂಲದ ಅನುಜ್ ಪಾಟೀಲ್ ಮುಂಬೈನಲ್ಲಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾನೆ ಎನ್ನಲಾಗಿದ್ದು, 2017ರಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ. ಸಂಘಟಿತ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ ಆತನ ವಿರುದ್ಧ ಮಹಾರಾಷ್ಟ್ರದಲ್ಲಿ ಸಂಘಟಿತ ಅಪರಾಧ ತಡೆ ಕಾಯ್ದೆ (MCOCA) ಅಡಿ ಪ್ರಕರಣ ದಾಖಲಿಸಲಾಗಿದೆ.

ಮಹಾರಾಷ್ಟ್ರ, ಗುಜರಾತ್, ದಮನ್ ಮತ್ತು ದಿಯು ಹಾಗೂ ಕರ್ನಾಟಕ ಸೇರಿದಂತೆ ವಿವಿಧೆಡೆ ಅನುಜ್ ಪಾಟೀಲ್ ವಿರುದ್ಧ ಒಟ್ಟು 11 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಈ ಪೈಕಿ 10 ಪ್ರಕರಣಗಳು ಶಸ್ತ್ರಾಸ್ತ್ರ ಕಾಯ್ದೆಯಡಿ ದಾಖಲಾಗಿರುವುದು ಗಮನಾರ್ಹವಾಗಿದೆ.

ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.

Leave a Reply