ತಮಿಳುನಾಡು: ಭಾರೀ ಮಳೆಗೆ ತತ್ತರಿಸಿದ ಚೆನ್ನೈ, ಇನ್ನೂ ಎರಡು ದಿನ ರೆಡ್ ಅಲರ್ಟ್ – Vishwanews24
ತಮಿಳುನಾಡು: ಭಾರೀ ಮಳೆಗೆ ತತ್ತರಿಸಿದ ಚೆನ್ನೈ, ಇನ್ನೂ ಎರಡು ದಿನ ರೆಡ್ ಅಲರ್ಟ್ – Vishwanews24
ಚೆನ್ನೈ: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಭಾನುವಾರ ತಮಿಳುನಾಡಿನ 38 ಜಿಲ್ಲೆಗಳ ಪೈಕಿ 36 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಚೆನ್ನೈನಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ಹಲವು ಪ್ರದೇಶಗಳು ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಅಷ್ಟೇ ಅಲ್ಲ ಭಾರೀ ಮಳೆಯ ಹಿನ್ನೆಲೆಯಲ್ಲಿ ನಾಲ್ಕು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಎರಡು ದಿನಗಳ ಕಾಲ ರಜೆ ಘೋಷಿಸಲಾಗಿದೆ ಎಂದು ವರದಿ ತಿಳಿಸಿದೆ.ಸಂಚಾರ ವ್ಯವಸ್ಥೆ ಅಸ್ತವ್ಯಸ್ತ ಪರಿಣಾಮ ಸೋಮವಾರ(ನವೆಂಬರ್ 08) ಬಹುತೇಕ ಸರ್ಕಾರಿ ಕಚೇರಿಗಳು ಬಂದ್ ಆಗಿದ್ದು, ಖಾಸಗಿ ಕಚೇರಿಯ ಉದ್ಯೋಗಿಗಳಿಗೆ ರಜೆ ನೀಡಿ ಅಥವಾ ವರ್ಕ್ ಫ್ರಂ ಹೋಮ್ ಕೊಡುವಂತೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮನವಿ ಮಾಡಿಕೊಂಡಿದ್ದಾರೆ.
ರಾಜಧಾನಿ ಚೆನ್ನೈನಲ್ಲಿ 24 ಗಂಟೆಗಳಲ್ಲಿ 134.29 ಮಿಮೀ ರಷ್ಟು ಅತೀ ಹೆಚ್ಚು ಮಳೆ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಗರದ ಹಲವಾರು ರಸ್ತೆಗಳು ಸಂಪೂರ್ಣ ಜಲಾವೃತಗೊಂಡಿದ್ದು, ತಗ್ಗು ಪ್ರದೇಶಗಳಲ್ಲಿರುವ ಮನೆಗಳು ನೀರಿನಲ್ಲಿ ಮುಳುಗಡೆಗೊಂಡಿದೆ. ಅಲ್ಲದೇ ಹೆಚ್ಚುವರಿ ನೀರನ್ನು ಬಿಡುಗಡೆ ಮಾಡಲು ಮೂರು ಜಲಾಶಯಗಳ ಗೇಟ್ಗಳನ್ನು ತೆರೆಯಲಾಗಿದೆ.
ಭಾನುವಾರ ಬೆಳಗ್ಗೆವರೆಗೆ ಚೆನ್ನೈನಲ್ಲಿ ಧಾರಾಕಾರ ಮಳೆ ಸುರಿದ ಪರಿಣಾಮ ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದವು. ಬರೋಬ್ಬರಿ 21 ಸೆಂಟಿ ಮೀಟರ್ ಮಳೆ ಸುರಿದಿರುವುದಾಗಿ ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಉಡುಪಿ: ಮನೆ ಬಾಗಿಲು ಮುರಿದು 18.35 ಲಕ್ಷ ರೂ. ಮೌಲ್ಯದ ಚಿನ್ನಾಭರಣ ನಗದು ಕಳ್ಳತನ – Vishwanews24
ಪ್ರಧಾನಿ ನರೇಂದ್ರ ಮೋದಿ ಅವರು, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ಕರೆ ಮಾಡಿ ರಾಜ್ಯದ ಪರಿಸ್ಥಿತಿ ಸಂವಹನ ನಡೆಸಿದ್ದು, ರಕ್ಷಣಾ ಮತ್ತು ಪರಿಹಾರ ಕುರಿತಂತೆ ಕೇಂದ್ರದಿಂದ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಇಲ್ಲಿಯವರೆಗೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್ಡಿಆರ್ಎಫ್) ನಾಲ್ಕು ತಂಡಗಳನ್ನು ರಾಜ್ಯದಲ್ಲಿ ನಿಯೋಜಿಸಲಾಗಿದೆ.
ಬಂಗಾಳ ಕೊಲ್ಲಿಯಲ್ಲಿ ಉಂಟಾದ ಚಂಡಮಾರುತದ ಪರಿಣಾಮ ತಮಿಳುನಾಡಿನ ಉತ್ತರ ಕರಾವಳಿ ಪ್ರದೇಶದಲ್ಲಿ ಭಾರೀ ಮಳೆಯಾಗಿತ್ತು. ಅಲ್ಲದೇ ಮಂಗಳವಾರ ಮತ್ತು ಬುಧವಾರ ಕೂಡಾ ಭಾರೀ ಮಳೆಯಾಗಲಿದೆ ಎಂದು ಅಧಿಕಾರಿಗಳು ಮುನ್ನೆಚ್ಚರಿಕೆ ನೀಡಿದ್ದಾರೆ.
