ದಕ್ಷಿಣ ಭಾರತದಲ್ಲಿ ಕಮಲ ಅರಳಿಸಲು ಬಿಜೆಪಿ ಆರ್ಎಸ್ಎಸ್ ಜೊತೆ ಅಮಿತ್ ಶಾ ಮಾಸ್ಟರ್ ಪ್ಲಾನ್..
ಮಂಗಳೂರು : ದಕ್ಷಿಣ ಭಾರತದಲ್ಲಿ ಬಿಜೆಪಿ ನೆಲೆ ಗಟ್ಟಿಗೊಳಿಸುವ ನಿಟ್ಟಿನಲ್ಲಿ ಆರ್ಎಸ್ಎಸ್ ರಣತಂತ್ರ ರೂಪಿಸಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಉಪಸ್ಥಿತಿಯಲ್ಲಿ ಬುಧವಾರ ರಾತ್ರಿ ನಡೆದ ಆರ್ಎಸ್ಎಸ್ ದಕ್ಷಿಣ ಭಾರತ ಪ್ರಚಾರ ಬೈಠಕ್ನಲ್ಲಿ ಕೇರಳ ಸೇರಿದಂತೆ ದಕ್ಷಿಣದ ರಾಜ್ಯಗಳಲ್ಲಿ ಬಿಜೆಪಿ ನೆಲೆಯನ್ನು ಗಟ್ಟಿಗೊಳಿಸುವ ಕುರಿತು ವಿಸ್ತೃತ ಚರ್ಚೆ ನಡೆದಿದೆ.
ಶಬರಿಮಲೆ ವಿಷಯದಲ್ಲಿ ಕೇರಳದ ಕಮ್ಯುನಿಸ್ಟ್ ಸರ್ಕಾರ ನಡೆದುಕೊಂಡ ರೀತಿಯನ್ನೇ ಪ್ರಮುಖ ವಿಷಯವನ್ನಾಗಿ ಮಾಡಲು ನಿರ್ಧರಿಸಿ, ಹಿಂದೂಗಳ ಭಾವನೆಗೆ ಸ್ಪಂದಿಸಿ ಅದನ್ನು ರಕ್ಷಿಸುವುದರ ಜತೆಗೆ ಕೇರಳ ಸರ್ಕಾರದ ಹಿಂದೂ ವಿರೋಧಿ ನೀತಿಯನ್ನು ವಿರೋಧಿಸುವ ಕೆಲಸವೂ ಆಗಬೇಕು ಎಂಬ ಮಾತುಗಳು ಕೇಳಿ ಬಂದಿವೆ. ಕೇರಳದಲ್ಲಿ ಬಿಜೆಪಿ ನೆಲೆಯನ್ನು ವಿಸ್ತರಿಸಲು ಕಾರ್ಯಯೋಜನೆ ರೂಪಿಸುವಂತೆ ಬಿಜೆಪಿ ಅಧ್ಯಕ್ಷರಿಗೆ ಆರ್ಎಸ್ಎಸ್ ಪ್ರಮುಖರು ಸಲಹೆ ನೀಡಿದ್ದಾರೆ.
ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಎನ್ಡಿಎ ಮೈತ್ರಿಕೂಟದಿಂದ ಹೊರಹೋಗಿದ್ದು, ಅಲ್ಲಿಯೂ ಬಿಜೆಪಿಗೆ ಶಕ್ತಿ ತುಂಬುವ ಕೆಲಸ ಆಗಬೇಕಾಗಿದೆ. ಇದಕ್ಕಾಗಿ ಸೂಕ್ತ ಪಕ್ಷಗಳ ಜತೆಗೆ ಮೈತ್ರಿ ಮಾಡಿಕೊಳ್ಳಬೇಕು. ತಮಿಳುನಾಡು, ತೆಲಂಗಾಣದಲ್ಲಿಯೂ ಪಕ್ಷದ ಬಲವರ್ಧನೆಗೆ ಕ್ರಮ ಕೈಗೊಳ್ಳಬೇಕು. ಇದೆಲ್ಲವನ್ನೂ ಹಿಂದುತ್ವದ ಆಧಾರದಲ್ಲಿಯೇ ಕಾರ್ಯಗತಗೊಳಿಸಲು ಸಂಘದ ಪ್ರಮುಖರು ಸೂಚನೆ ನೀಡಿದ್ದಾರೆ.
ರಾಮಮಂದಿರ ನಿರ್ಮಾಣಕ್ಕೆ ಕೂಡಲೇ ಕ್ರಮ ಕೈಗೊಳ್ಳಬೇಕು :ಪ್ರಮುಖವಾಗಿ ಅಯೋಧ್ಯೆಯ ರಾಮಮಂದಿರ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು. ಹಿಂದೂಗಳಿಗೆ ಭಾವನಾತ್ಮಕ ವಿಷಯವಾಗಿರುವ ರಾಮಮಂದಿರ ನಿರ್ಮಾಣವನ್ನು 2019 ರ ಲೋಕಸಭೆ ಚುನಾವಣೆಗೂ ಮೊದಲೇ ಕಾರ್ಯರೂಪಕ್ಕೆ ತರಬೇಕು ಎನ್ನುವ ಒತ್ತಾಯವನ್ನು ಹಾಗೂ ಸಂಘದ ಪ್ರಮುಖರ ಸಲಹೆಗಳನ್ನು ಆಲಿಸಿದ ಅಮಿತ್ ಶಾ, ರಾಮಮಂದಿರ ಸೂಕ್ಷ್ಮ ವಿಷಯವಾಗಿದ್ದು, ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೆಜ್ಜೆ ಇಡಬೇಕಾಗಿದೆ. ಈ ಕುರಿತು ವರಿಷ್ಠರ ಜತೆ ಚರ್ಚಿಸಿ, ಲೋಕಸಭೆ ಚುನಾವಣೆಗೂ ಮುನ್ನವೇ ಸ್ಪಷ್ಟ ನಿರ್ಧಾರಕ್ಕೆ ಬರಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಆರ್ಎಸ್ಎಸ್ ಮೂಲಗಳು ತಿಳಿಸಿವೆ.
ಆರ್ಎಸ್ಎಸ್ನ ಸರ ಕಾರ್ಯವಾಹ ಭಯ್ಯಾಜಿ ಸುರೇಶ್ ಜೋಷಿ, ಮುಕುಂದ್, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್, ನಾಲ್ಕು ರಾಜ್ಯಗಳ ಸಂಘಟನಾ ಕಾರ್ಯದರ್ಶಿಗಳು ಸಭೆಯಲ್ಲಿ ಭಾಗವಹಿಸಿದ್ದರು.


