ದಿನೇಶ್‌ ಗುಂಡೂರಾವ್‌ ಪಕ್ಷದ ಅಧ್ಯಕ್ಷರಾಗಿರುವ ತನಕ ಕಾಂಗ್ರೆಸ್‌ ಪಕ್ಷ ಉದ್ಧಾರ ಆಗುವುದಿಲ್ಲ : ಬಿ.ಸಿ. ಪಾಟೀಲ್‌ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ದಿನೇಶ್‌ ಗುಂಡೂರಾವ್‌ ಪಕ್ಷದ ಅಧ್ಯಕ್ಷರಾಗಿರುವ ತನಕ ಕಾಂಗ್ರೆಸ್‌ ಪಕ್ಷ ಉದ್ಧಾರ ಆಗುವುದಿಲ್ಲ. ದಿನೇಶ್‌ ಗುಂಡೂರಾವ್‌ ಸರಿ ಇದ್ದಿದ್ದರೆ ನಾವು ಪಕ್ಷ ಬಿಟ್ಟು ಹೊರಬರುವ ಪ್ರಮೇಯವೇ ಉದ್ಭವಿಸುತ್ತಿರಲಿಲ್ಲ ಎಂದು ಹಿರೇಕೆರೂರು ಕ್ಷೇತ್ರದ ಅನರ್ಹಗೊಂಡಿರುವ ಶಾಸಕ ಬಿ.ಸಿ. ಪಾಟೀಲ್‌ ಕಿಡಿಕಾರಿದ್ದಾರೆ.

ವಿಧಾನಸೌಧದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿನೇಶ್‌ ಗುಂಡೂರಾವ್‌ ಪಕ್ಷದ ಅಧ್ಯಕ್ಷರಾಗಿರುವವರೆಗೂ ಪಕ್ಷದ ಪರಿಸ್ಥಿತಿ ಹೀಗೆಯೇ ಮುಂದುವರೆಯುತ್ತದೆ. ಗುಂಡೂರಾವ್‌ ಅಧ್ಯಕ್ಷರಾಗಿ ಅಧಿಕಾರ ಪಡೆಯುವ ಮೊದಲು ಒಂಬತ್ತು ಮಂದಿ ಸಂಸದರಿದ್ದರು, ಈಗ ಒಬ್ಬರೇ ಒಬ್ಬರು ಇದ್ದಾರೆ. ದಿನೇಶ್‌ ಗುಂಡೂರಾವ್‌ ಅವರಿಂದಲೇ ಮೈತ್ರಿ ಸರ್ಕಾರವೂ ಪತನವಾಯಿತು. ದಿನೇಶ್‌ ಗುಂಡೂರಾವ್‌ ಸರಿ ಇದ್ದಿದ್ದರೆ ಸಮ್ಮಿಶ್ರ ಸರ್ಕಾರ ಮುಂದುವರೆಯುತ್ತಿತ್ತು ಎಂದು ಹೇಳಿದರು.

ದಿನೇಶ್‌ ಗುಂಡೂರಾವ್‌ ಅವರ ಕುರಿತು ಎಸ್‌.ಟಿ. ಸೋಮಶೇಖರ್‌ ಹೇಳಿಕೆ ಸರಿ ಇದೆ. ಅಧ್ಯಕ್ಷರಾದವರು ಒಂದು ಕಡೆ ವಾಲಬಾರದು. ಒಬ್ಬರಿಗೊಂದು, ಮತ್ತೊಬ್ಬರಿಗೊಂದು ರೀತಿಯಲ್ಲಿ ಮಾಡಬಾರದು. ಎಲ್ಲರನ್ನೂ ಸಮಾನ ಚಿತ್ತದಿಂದ ನೋಡಬೇಕು, ಜತೆಗೆ ಹೇಳಿದಂತೆ ನಡೆದುಕೊಳ್ಳಬೇಕು ಎಂದರು.

ಅನರ್ಹಗೊಂಡಿರುವ ಶಾಸಕರಿಗೆ ಟಿಕೆಟ್‌ ನೀಡುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಹೇಳಿಕೆ ಕೊಟ್ಟಿರುವುದು ಸಂತೋಷ ತಂದಿದೆ. ಮುಖ್ಯಮಂತ್ರಿಗಳ ಹೇಳಿಕೆಯನ್ನು ಸ್ವಾಗತಿಸುತ್ತೇನೆ ಎಂದು ಪ್ರತಿಕ್ರಿಯಿಸಿದರು.