ಪೇಜಾವರ ಶ್ರೀಗಳ ಆರೋಗ್ಯ ಮತ್ತಷ್ಟು ಗಂಭೀರ -Vishwanews24

Featured, ಉಡುಪಿ

ಉಡುಪಿ: ಪೇಜಾವರ ಶ್ರೀಗಳ ಆರೋಗ್ಯ ಮತ್ತಷ್ಟು ಗಂಭೀರವಾಗಿದ್ದು, ವೈದ್ಯರು ತೀವ್ರ ನಿಗಾ ಇರಿಸಿದ್ದಾರೆ. ತಡರಾತ್ರಿ ಎಂಆರ್‌ಐ ಸ್ಕ್ಯಾನಿಂಗ್ ನಡೆಸಲಾಗಿದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿಲ್ಲ.

ಹಾಸನದ ಅರೆಮಾದನಹಳ್ಳಿಯ ವಿಶ್ವ ಬ್ರಾಹ್ಮಣ ಮಹಾ ಸಂಸ್ಥಾನದ ಶಿವಸುಜ್ಞಾನ ತೀರ್ಥರು ಶನಿವಾರ ಆಸ್ಪತ್ರೆಗೆ ಭೇಟಿ ನೀಡಿ ಶ್ರೀಗಳ ಯೋಗಕ್ಷೇಮ ವಿಚಾರಿಸಿದರು. ಪೇಜಾವರ ಕಿರಿಯ ಯತಿ ವಿಶ್ವಪ್ರಸನ್ನ ತೀರ್ಥರೊಂದಿಗೆ ಚರ್ಚಿಸಿದರು.

ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಆಸ್ಪತ್ರೆಗೆ ಭೇಟಿ ನೀಡಿ ಮಾತನಾಡಿ, ‘ಶ್ರೀಗಳಲ್ಲಿನ ಮಗುವಿನಂತಹ ಮುಗ್ಧತೆ, ಅದಮ್ಯ ಚೇತನ್ಯ ಎಲ್ಲರನ್ನೂ ಬೆರಗುಗೊಳಿಸುವಂಥದ್ದು. ಸ್ವಾಮೀಜಿ ಮತ್ತಷ್ಟು ಧರ್ಮದ ಕೆಲಸ ಮಾಡಬೇಕು. ಗುಣಮುಖರಾಗುವ ನಂಬಿಕೆ ಇದೆ’ ಎಂದು ಹೇಳಿದರು.

ಇದೇ ವೇಳೆ ಮಾತನಾಡಿದ ಶಾಸಕ ರವಿ ಸುಬ್ರಹ್ಮಣ್ಯ, ‘ಸ್ವಾಮೀಜಿ ಹಾಸಿಗೆ ಹಿಡಿದವರಲ್ಲ. ಎಲ್ಲಾ ಧರ್ಮ, ಜಾತಿಗೆ ಬೇಕಾಗಿರುವ ಶ್ರೀಗಳು ಬೇಗ ಚೇತರಿಸಿಕೊಳ್ಳಲಿ. ರಾಮಮಂದಿರ ನಿರ್ಮಾಣ ಕಾಲದಲ್ಲಿ ಶ್ರೀಗಳು ಇರಬೇಕು. ರಾಮಮಂದಿರ ನೋಡಬೇಕು’ ಎಂದರು.

ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥರು ಮಾತನಾಡಿ, ‘ಶ್ರೀಗಳು ಉಸಿರಾಡುತ್ತಿದ್ದಾರೆ. ಎಂಆರ್‌ಐ ವರದಿಗೆ ವೈದ್ಯರು ಕಾಯುತ್ತಿದ್ದಾರೆ. ದೇವರ ಅನುಗ್ರಹದಿಂದ ಚೇತರಿಕೆಯಾಗುವ ನಿರೀಕ್ಷೆಯಿದೆ’ ಎಂದು ತಿಳಿಸಿದರು.

ನಿರ್ಬಂಧ: ಇನ್ನು ಶ್ರೀಗಳ ಆರೋಗ್ಯ ವಿಚಾರಿಸಲು ರಾಜ್ಯದ ನಾನಾ ಭಾಗಗಳಿಂದ ಅಪಾರ ಸಂಖ್ಯೆಯಲ್ಲಿ ಗಣ್ಯರು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅವರ ಭೇಟಿಗೆ ನಿರ್ಬಂಧ ಹಾಕಲಾಗಿದೆ. ವೈದ್ಯರ ತಂಡ ತೀವ್ರ ನಿಗಾ ವಹಿಸಿರುವ ಹಿನ್ನೆಲೆಯಲ್ಲಿ ಶ್ರೀಗಳಿಗೆ ತೊಂದರೆಯಾಗಬಾರದೆಂಬ ಕಾರಣಕ್ಕಾಗಿ ಕೆಎಂಸಿ ಆಸ್ಪತ್ರೆಗೆ ಯಾರೊಬ್ಬರೂ ಭೇಟಿ ನೀಡದಂತೆ ನಿರ್ಬಂಧ ವಿಧಿಸಲಾಗಿದೆ.

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಶ್ರೀಗಳನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಉಳಿದಂತೆ ಬೆಳಿಗಿನಿಂದ ಯಾರೊಬ್ಬರನ್ನು ಒಳಬಿಟ್ಟಿಲ್ಲ.
ಇದರ ನಡುವೆ ಶ್ರೀಗಳ ಆರೋಗ್ಯ ಸ್ಥಿತಿ ಸುಧಾರಣೆಯಾಗಲೆಂದು ನಾಡಿನಾದ್ಯಂತ ಪೂಜೆ, ಹವನಗಳು ನಡೆಯುತ್ತಿವೆ. ಪೇಜಾವರ ಶ್ರೀಗಳ ಸಾವಿರಾರು ಭಕ್ತರು ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ನೆರವೇರಿಸಿ ಎಂದಿನಂತೆ ಶ್ರೀಗಳು ನಡೆದಾಡುವಂತಾಗಲಿ ಎಂದು ಪ್ರಾರ್ಥಿಸಿದ್ದಾರೆ.