ಪ್ರಧಾನಿ ಮೋದಿ ನೇತೃತ್ವದ ಬಿಜೆಪಿಯನ್ನು ಏಕಾಂಗಿಯಾಗಿ ಎದುರಿಸಲು ಕಾಂಗ್ರೆಸ್ ಗೆ ಸಾಧ್ಯವಿಲ್ಲ: ಕಾಂಗ್ರೆಸ್ ನ ಹಿರಿಯ ನಾಯಕ ಎ.ಕೆ ಆ್ಯಂಟನಿ
ತಿರುವನಂತಪುರ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಏಕಾಂಗಿಯಾಗಿ ಎದುರಿಸಲು ಸಾಧ್ಯವಿಲ್ಲ ಎಂಬುದನ್ನು ಕಾಂಗ್ರೆಸ್ ಅರ್ಥ ಮಾಡಿಕೊಂಡಿದೆ ಎಂದು ತಿರುವನಂತಪುರದಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸುವಾಗ ಕಾಂಗ್ರೆಸ್ ನ ಹಿರಿಯ ನಾಯಕ ಮಾಜಿ ರಕ್ಷಣಾ ಸಚಿವ ಎ ಕೆ ಆಂಟನಿ ಹೇಳಿದ್ದಾರೆ.
ಕೇರಳದ ತಿರುವನಂತಪುರಂನಲ್ಲಿ ನಡೆದ ಸಮಾವೇಶದಲ್ಲಿ ಅವರು ಮಾತನಾಡಿದ್ದು, ಈ ಹೇಳಿಕೆಯು ಕಾಂಗ್ರೆಸ್ ವಲಯದಲ್ಲಿ ಅಸಮಧಾನ ಸೃಷ್ಟಿಸಿದೆ ಎಂದು ತಿಳಿದು ಬಂದಿದೆ.
ಕಾಂಗ್ರೆಸ್ ನಿಂದ ಮಾತ್ರ ನರೇಂದ್ರ ಮೋದಿಯವರನ್ನು ಅಧಿಕಾರದಿಂದ ಕೆಳಗಿಳಿಸಲು ಸಾಧ್ಯವಿಲ್ಲ. ಆದರೂ ಕೂಡ ಮೋದಿಯವರನ್ನು ಅಧಿಕಾರದಿಂದ ದೂರವಿಡಲು ಪ್ರಚಾರದಲ್ಲಿ ಕಾಂಗ್ರೆಸ್ ಪ್ರಮುಖ ಶಕ್ತಿಯಾಗಿದೆ. ಹೀಗಾಗಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಬೇರೆ ಪಕ್ಷಗಳೊಂದಿಗೆ ಕೈಜೋಡಿಸಲು ಮುಂದಾಗಿದೆ ಎಂದು ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಹೇಳಿದ್ದರು.
ಚುನಾವಣೆ ಸಮೀಪಿಸುತ್ತಿರುವಾಗ ಕೊನೆ ಹಂತದಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಅಭ್ಯಾಸವನ್ನು ಕಾಂಗ್ರೆಸ್ ಬಿಡಬೇಕು. ಅಭ್ಯರ್ಥಿಗಳ ಆಯ್ಕೆ ಜಿಲ್ಲಾ ಸಮಿತಿಯಿಂದ ನಿರ್ಧಾರವಾಗಬೇಕು. ಕೆಲ ನಾಯಕರು ತೀರ್ಮಾನಿಸುವ ಬದಲು ಅಭ್ಯರ್ಥಿಗಳ ಆಯ್ಕೆಯು ಪ್ರಜಾಸತ್ತಾತ್ಮಕವಾಗಿ ನಡೆಯಬೇಕು ಎಂದು ಅಭಿಪ್ರಾಯಪಟ್ಟರು.
