ಬಾಂಬ್ ಇಟ್ಟವರು ದೇಶ ದ್ರೋಹಿಗಳು , ಮನುಷ್ಯತ್ವ, ಕರುಣೆ ಇಲ್ಲದವರನ್ನು ನಾವು ಯಾರೂ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ : ಸ್ಪೀಕರ್ ಯುಟಿ ಖಾದರ್ – Vishwanews24
ಬಾಂಬ್ ಇಟ್ಟವರು ದೇಶ ದ್ರೋಹಿಗಳು ,ಅವರಿಗೆ ಯಾವುದೇ ಜಾತಿ, ಧರ್ಮ, ವರ್ಗವಿಲ್ಲ : ಸ್ಪೀಕರ್ ಯುಟಿ ಖಾದರ್
ಬೆಳಗಾವಿ : ಸಮಾಜ ಶಾಂತಿಯುತವಾಗಿ, ನಿರ್ಭೀತಿಯಿಂದ ಇದ್ದಾಗ ಮಾತ್ರ ಅಭಿವೃದ್ಧಿ ಸಾಧ್ಯ, ರಾಜ್ಯದಲ್ಲಿ ಬಾಂಬ್ ಸ್ಫೋಟ ನಡೆಸಿದವರ ಪತ್ತೆ ಹಚ್ಚಲಾಗುತ್ತಿದ್ದು, ಶಾಂತಿ ಕದಡಲು ಯತ್ನಿಸಿದವರ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂದು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಅವರು ಭಾನುವಾರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಡೆದ ಬಾಂಬ್ ಸ್ಫೋಟ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದರು.
ಬೆಂಗಳೂರಿನಲ್ಲಿ ಬಾಂಬ್ ಇಟ್ಟವರು ದೇಶ ದ್ರೋಹಿಗಳು. ಅವರಿಗೆ ಯಾವುದೇ ಜಾತಿ, ಧರ್ಮ, ವರ್ಗವಿಲ್ಲ. ಮನುಷ್ಯತ್ವ, ಕರುಣೆ ಇಲ್ಲದವರನ್ನು ನಾವು ಯಾರೂ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದರು.
ಶಾಂತಿಯುತ, ನಿರ್ಭಯ ಸಮಾಜದಲ್ಲಿ ಮಾತ್ರ ಅಭಿವೃದ್ಧಿಯ ಜತೆಗೆ ಜನರು ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವಾಗುತ್ತದೆ. ಶಾಂತಿಯುತ ರಾಜ್ಯವನ್ನು ಹದಗೆಡಿಸಲು ಪ್ರಯತ್ನಿಸಿದವರನ್ನು ಮಟ್ಟ ಹಾಕಲು ಸರಕಾರ ಕ್ರಮ ಕೈಗೊಂಡಿದೆ. ತಪ್ಪಿತಸ್ಥರನ್ನು ಪತ್ತೆ ಹಚ್ಚಬೇಕು. ಇದರ ಹಿಂದೆ ಯಾರಿದ್ದಾರೆ? ಅವರ ಉದ್ದೇಶ ಏನಾಗಿತ್ತು ಎಂಬುದನ್ನು ಬಯಲು ಮಾಡಬೇಕು. ಅದೇ ರೀತಿ ಮುಂದೆ ಈ ರೀತಿ ಕೃತ್ಯ ಮಾಡಲು ಯಾರಿಗೂ ಧೈರ್ಯ ಬರದಂತೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿದರು.
ಇಂತಹ ಸಂದರ್ಭದಲ್ಲಿ ಯಾರೂ ರಾಜಕಾರಣ ಮಾಡಬಾರದು. ಯಾರೋ ಒಬ್ಬರು ಮಾಡಿದ ತಪ್ಪಿಗೆ ಇಡೀ ವರ್ಗವನ್ನು ಗುರಿಯಾಗಿಸಬಾರದು. ರಾಜ್ಯದ ಹಿತಾಸಕ್ತಿಗಾಗಿ ನಾವೆಲ್ಲರೂ ಒಗ್ಗಟ್ಟಾಗಿರಬೇಕು. ಅದನ್ನು ಬಿಟ್ಟು ನಮ್ಮ ನಡುವೆ ಭಿನ್ನಾಭಿಪ್ರಾಯ ಮೂಡಿದರೆ ದುಷ್ಕರ್ಮಿಗಳು ಅದರ ಲಾಭವನ್ನು ಪಡೆದುಕೊಳ್ಳುತ್ತಾರೆ ಎಂದು ತಿಳಿಸಿದರು.
ಪಣಂಬೂರು ಬೀಚ್ – ಅಲೆಗಳ ಹೊಡೆತಕ್ಕೆ ಸಿಲುಕಿ ಮೂವರು ಯುವಕರು ನಾಪತ್ತೆ – Vishwanews24
