ಬಿಜೆಪಿ ಪ್ರಣಾಳಿಕೆ ಬಿಡುಗಡೆ : ಭಯೋತ್ಪಾದನೆ ನಿರ್ಮೂಲನೆ ನಮ್ಮ ಪ್ರಮುಖ ಗುರಿ ; ನವ ಭಾರತದ ನಿರ್ಮಾಣಕ್ಕಾಗಿ ಮುಂದಿನ ಹೆಜ್ಜೆ :ರಾಜನಾಥ್ ಸಿಂಗ್-Vishwanews24

Featured, ರಾಷ್ಟ್ರ ನ್ಯೂಸ್

ನವದೆಹಲಿ: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ‘ಸಂಕಲ್ಪ ಪತ್ರ’ ಎಂಬ ಹೆಸರಿನಲ್ಲಿ ಬಿಜೆಪಿ ತನ್ನ ಚುನಾವಣಾ ಪ್ರಣಾಳಿಕೆಯನ್ನು ನವದೆಹಲಿಯಲ್ಲಿ ಏ 8ರ ಸೋಮವಾರ ಬಿಡುಗಡೆ ಮಾಡಿದೆ.

45 ಪುಟಗಳ ‘ಸಂಕಲ್ಪ ಪತ್ರ’ ಹೆಸರಿನ ಪ್ರಣಾಳಿಕೆಯಲ್ಲಿ ರಾಷ್ಟ್ರೀಯ ಭದ್ರತೆಗೆ ಮೊದಲ ಸ್ಥಾನವನ್ನು ನೀಡಲಾಗಿದೆ. 2022ರ ವೇಳೆಗೆ ರೈತರ ಆದಾಯವನ್ನು ದ್ವಿಗುಣಗೊಳಿಸುತ್ತೇವೆ. ರಾಮ ಮಂದಿರವನ್ನು ನಿರ್ಮಾಣ ಮಾಡುತ್ತೇವೆ ಎಂದು ಬಿಜೆಪಿ ತಿಳಿಸಿದೆ.

ಭಯೋತ್ಪಾದನೆ ನಿರ್ಮೂಲನೆ ನಮ್ಮ ಪ್ರಮುಖ ಗುರಿಯಾಗಿದ್ದು, ಸ್ವದೇಶಿ ಶಸ್ತ್ರಾಸ್ತ್ರಗಳ ನಿರ್ಮಾಣಕ್ಕೆ ಒತ್ತು ನೀಡುತ್ತೇವೆ. ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿ 75 ವರ್ಷ ಪೂರ್ಣಗೊಳ್ಳುವ ಹಿನ್ನೆಲೆಯಲ್ಲಿ 2022ಕ್ಕೆ ಒಂದು ಕುಟುಂಬಕ್ಕೆ ಒಂದು ಮನೆಯನ್ನು ನಿರ್ಮಿಸಿ ಕೊಡುತ್ತೇವೆ ಎಂದು ಬಿಜೆಪಿ ಪ್ರಣಾಳಿಕೆಯಲ್ಲಿ ತಿಳಿಸಿದೆ.

ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ರಾಜನಾಥ್ ಸಿಂಗ್, ಬಿಜೆಪಿ ಸಂಕಲ್ಪ ಪತ್ರದಲ್ಲಿ ನೀಡಿರುವ ಎಲ್ಲಾ ಭರವಸೆಗಳು ಮತ್ತು ಆಶೋತ್ತರಗಳೊಂದಿಗೆ ನಾವು ನವ ಭಾರತದ ನಿರ್ಮಾಣಕ್ಕಾಗಿ ಮುಂದಿನ ಹೆಜ್ಜೆ ಇಡುತ್ತೇವೆ. ಪ್ರಸ್ತುತ, ಭಾರತ ವಿಶ್ವದಲ್ಲಿ ಆರ್ಥಿಕತೆಯಲ್ಲಿ ಅತ್ಯಂತ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ದೇಶವಾಗಿ ಬದಲಾಗಿದ್ದು ನಮಗೆಲ್ಲ ಹೆಮ್ಮೆಯ ವಿಷಯ, ಈ ನಿಟ್ಟಿನಲ್ಲಿ ವಿಶ್ವದಲ್ಲಿ ಆರ್ಥಿಕವಾಗಿ ಪ್ರಬಲ ಹೊಂದುತ್ತಿರುವ ಮೊದಲ ಮೂರು ದೇಶಗಳ ಸಾಲಿನಲ್ಲಿ ಭಾರತ ಸ್ಥಾನ ಪಡೆಯಬೇಕೆಂಬುದು ನಮ್ಮ ಗುರಿಯಾಗಿದೆ ಎಂದರು.
ಕೃಷಿ ವಲಯಕ್ಕೆ 25 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವುದಾಗಿ ಬಿಜೆಪಿ ಪ್ರಣಾಳಿಕೆಯಲ್ಲಿ ಭರವಸೆ ನೀಡಿದೆ.ಕಿಸಾನ್ ಸಮ್ಮಾನ್ ಯೋಜನೆಯನ್ನು ವಿಸ್ತರಿಸಲಾಗುವುದು ಎಂದು ಹೇಳಿದೆ.  ಸಣ್ಣ ಉದ್ಯಮಿಗಳು, ವ್ಯಾಪಾರಸ್ಥರಿಗೆ ಪಿಂಚಣಿ ಯೋಜನೆ, 60 ವರ್ಷ ಪೂರೈಸಿದ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಕಿಸಾನ್ ಪಿಂಚಣಿ ಯೋಜನೆಯನ್ನು ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದರೆ ಜಾರಿಗೆ ತರಲಿದೆ ಎಂದು ರಾಜನಾಥ್ ಸಿಂಗ್ ಹೇಳಿದರು.

ಪ್ರಣಾಳಿಕೆ ಬಿಡುಗಡೆ ಸಂದರ್ಭ ಮಾತನಾಡಿದ ಬಿಜೆಪಿ ಅಧ್ಯಕ್ಷ ಅಮಿತ್ ಶಾ, ‘ನಮ್ಮ ಆಡಳಿತದಲ್ಲಿ ಒಂದೇ ಒಂದು ಹಗರಣ ನಡೆದಿಲ್ಲ. ಯುಪಿಎ ಆಡಳಿತದ ಹತ್ತು ವರ್ಷಗಳು ಹೇಗಿದ್ದವು ಎಂಬುದನ್ನು ಒಮ್ಮೆ ನೆನಪಿಸಿಕೊಳ್ಳಿ’ ಎಂದು ಹೆಮ್ಮೆಯಿಂದ ಹೇಳಿದರು.

‘ದೇಶದ ಆರ್ಥಿಕತೆ ಸುಧಾರಿಸಲು ನಮ್ಮ ಸರ್ಕಾರ ಸಾಕಷ್ಟು ಶ್ರಮವಹಿಸಿತು. ಬೆಳೆ ಉತ್ಪತ್ತಿ ಸುಧಾರಿಸಲು 12 ಕೋಟಿ ರೈತರಿಗೆ ಅಗತ್ಯ ನೆರವು ಒದಗಿಸಲಾಯಿತು. ವಿಶ್ವಮಟ್ಟದ ಹಲವು ಸೂಚ್ಯಂಕಗಳಲ್ಲಿ ನಮ್ಮ ಸ್ಥಿತಿಗತಿ ಸುಧಾರಿಸಿದೆ. 2014ರಿಂದ 2019ರ ಅವಧಿಯನ್ನು ದೇಶದ ಇತಿಹಾಸವು ಸುವರ್ಣಯುಗ ಎಂದೇ ನೆನಪಿರಿಸಿಕೊಳ್ಳುತ್ತದೆ’ ಎಂದು ಅವರು ಅಭಿಪ್ರಾಯಪಟ್ಟರು.