ಬಿಟ್ಕಾಯಿನ್ ಹಗರಣ : ಸರ್ಕಾರ ನಡೆಸುವ ತನಿಖೆಯಿಂದ ಸತ್ಯಾಂಶ ಹೊರಬರುವುದಿಲ್ಲ : ಪ್ರಿಯಾಂಕ್ ಖರ್ಗೆ – Vishwanews24
ಬಿಟ್ಕಾಯಿನ್ ಹಗರಣ : ಸರ್ಕಾರ ನಡೆಸುವ ತನಿಖೆಯಿಂದ ಸತ್ಯಾಂಶ ಹೊರಬರುವುದಿಲ್ಲ : ಪ್ರಿಯಾಂಕ್ ಖರ್ಗೆ – Vishwanews24
ಬೆಂಗಳೂರು: ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಮೂಲಕ ವಶಪಡಿಸಿಕೊಂಡ ಬಿಟ್ಕಾಯಿನ್ಗಳನ್ನು ಅಕ್ರಮವಾಗಿ ವರ್ಗಾವಣೆ ಮಾಡಿರುವ ಹಗರಣದ ಕುರಿತು ಸುಪ್ರೀಂಕೋರ್ಟ್ನ ಹಾಲಿ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಆಗ್ರಹಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಸರ್ಕಾರ ನಡೆಸುವ ತನಿಖೆಯಿಂದ ಸತ್ಯಾಂಶ ಹೊರಬರುವುದಿಲ್ಲ. ಹಗರಣದಲ್ಲಿ ಪೊಲೀಸರು, ಸರ್ಕಾರದ ಉನ್ನತ ಸ್ಥಾನದಲ್ಲಿರುವವರು ಸೇರಿದಂತೆ ಹಲವರು ಶಾಮೀಲಾಗಿದ್ದಾರೆ. ಆದ್ದರಿಂದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ನೇತೃತ್ವದಲ್ಲೇ ತನಿಖೆ ನಡೆಸಬೇಕು’ ಎಂದರು.
ಸತ್ಯಾಂಶ ಹೊರಬಂದ ಬಳಿಕ ಮುಂದಿನ ಕ್ರಮ ಆಗುತ್ತದೆ. ಮೂರನೇ ಮುಖ್ಯಮಂತ್ರಿ ಯಾರಾದರೂ ಆಗಲಿ. ಆ ಬಗ್ಗೆ ತಾವೇನೂ ಹೇಳುವುದಿಲ್ಲ. ಮಾಜಿ ಗೃಹ ಸಚಿವರೂ ಆಗಿರುವ ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಎಲ್ಲವೂ ಗೊತ್ತಿದೆ. ಅವರೇ ಜನರ ಎದುರು ಸತ್ಯ ಹೇಳಲಿ ಎಂದು ಒತ್ತಾಯಿಸಿದರು.
ಪೊಲೀಸರ ವಶದಲ್ಲಿದ್ದಾಗ ತನಗೆ ಡ್ರಗ್ಸ್ ನೀಡಲಾಗಿತ್ತು ಎಂಬುದನ್ನು ಶ್ರೀಕಿ ನ್ಯಾಯಾಲಯಕ್ಕೆ ತಿಳಿಸಿದ್ದಾನೆ. ಆ ಬಗ್ಗೆ ಸರಿಯಾದ ವೈದ್ಯಕೀಯ ಪರೀಕ್ಷೆಯೇ ನಡೆದಿಲ್ಲ. ಈ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯಕ್ಕೆ ಮಾಹಿತಿ ನೀಡುವಲ್ಲೂ ಪೊಲೀಸರು ವಿಳಂಬ ಮಾಡಿದ್ದಾರೆ. ಇದೆಲ್ಲವೂ ಅಕ್ರಮ ನಡೆದಿರುವ ಸುಳಿವು ನೀಡುತ್ತವೆ ಎಂದು ಹೇಳಿದರು.
ರಾಜ್ಯ ಸರ್ಕಾರ ತಕ್ಷಣವೇ ಪ್ರಕರಣವನ್ನು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆಗೆ ವಹಿಸಬೇಕು. ಇಲ್ಲವಾದಲ್ಲಿ ಕಾಂಗ್ರೆಸ್ ಪಕ್ಷದಿಂದ ಸುಪ್ರೀಂಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೂಡಲಾಗುವುದು ಎಂದರು
